ಬಳ್ಳಾರಿ: ಕಳಪೆ ಗುಣಮಟ್ಟದ ಔಷಧ ಬಳಕೆಯಿಂದಾಗಿಯೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಮಹಿಳೆಯರು-ಶಿಶುಗಳ ಸಾವು ಪ್ರಕರಣ ಹೆಚ್ಚಳ:
ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ ಕಂಪನಿಯ ಐವಿ ದ್ರಾವಣ ಕೊಟ್ಟ ನಂತರ ಬಾಣಂತಿಯರು ಬಹು ಅಂಗಾಂಗಳ ವೈಫಲ್ಯ ಆಗಿದೆ. ಅಮಾಯಕ ತಾಯಂದಿರು ಮರಣ ಹೊಂದಿದ್ದಾರೆ. ಈ ಕಂಪನಿಯ ಔಷಧ ತರಲು ಅನುಮತಿ ನೀಡಿದ್ದು ಯಾರು ಎಂಬುದು ಗೊತ್ತಾಗಬೇಕು. ಪಶ್ಚಿಮ ಬಂಗಾಳದ ಫಾರ್ಮಾಸ್ಯುಟಿಕಲ್ ಕಂಪನಿಯ ಅಧಿಕಾರಿ ಅನ್ಸಾರಿ ಎಂಬಾತನ ಬಂಧನವಾದರೆ ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ರೈತರು, ನಿಷ್ಠಾವಂತ ಅಧಿಕಾರಿಗಳಿಗೆ ಸಾವಿನ ಭಾಗ್ಯ ಕರುಣಿಸಿರುವ ರಾಜ್ಯ ಸರ್ಕಾರ, ನವಜಾತ ಶಿಶುಗಳಿಗೆ ಮತ್ತು ಬಾಣಂತಿಯರಿಗೆ ಸಾವಿನ ಭಾಗ್ಯ ನೀಡಿದೆ. ಯಾವ ಪುರುಷಾರ್ಥಕ್ಕಾಗಿ ಹಾಸನದಲ್ಲಿ ಸಮಾವೇಶ ಮಾಡಲು ಹೊರಟಿದೆ ಎಂದು ಪ್ರಶ್ನಿಸಿದರು.
ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಕಾಣೆಯಾಗಿದ್ದಾರೆ. ಯಾರೊಬ್ಬರೂ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿಲ್ಲ. ಮಂತ್ರಿಗಳು ರಾಜೀನಾಮೆ ಕೊಡಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳಿಗೆ ಗುಣಮಟ್ಟದ ಆಸ್ಪತ್ರೆಗಳು ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಗಾಲಿ ಜನಾರ್ದನ ರೆಡ್ಡಿ, ಸಂಡೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಬಂಗಾರು ಹನುಮಂತು, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲಕುಮಾರ್ ಮೋಕಾ, ಮುಖಂಡರಾದ ದಮ್ಮೂರು ಶೇಖರ್, ಡಾ. ಮಹಿಪಾಲ್ ಇದ್ದರು.ಬಳ್ಳಾರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣ ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.