ಕನ್ನಡಪ್ರಭ ವಾರ್ತೆ ಮಡಿಕೇರಿ
ಬುಧವಾರ ಬೆಳಗ್ಗೆ 10.49 ಗಂಟೆಗೆ ಮದೆ ಗ್ರಾಮ ಪಂಚಾಯಿತಿ ಮತ್ತು ಗಾಳಿಬೀಡು ಗ್ರಾಮ ಪಂಚಾಯಿತಿ ಒಳಪಟ್ಟ ಮೊಣ್ಣಂಗೇರಿ ಗ್ರಾಮ ವ್ಯಾಪ್ತಿಯಲ್ಲಿ ಭೂ ಕಂಪನದ ಅನುಭವವಾಗಿದೆ. ಲಘು ಭೂಕಂಪನವಾಗಿರುವುದರಿಂದ ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲವೆಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(ಕೆಎಸ್ಎನ್ಡಿಎಂಸಿ) ತಿಳಿಸಿದೆ.
ಕೆಎಸ್ಎನ್ಡಿಎಂಸಿ ದಾಖಲಿಸಿರುವ ಭೂ ಕಂಪನದ ಅಂಕಿ ಅಂಶಗಳಂತೆ ಭೂ ಕಂಪನದ ಕೇಂದ್ರವನ್ನು ಮದೆ ಪಂಚಾಯ್ತಿಯ ವಾಯುವ್ಯ ಭಾಗದ 2.4 ಕಿ.ಮೀ. ದೂರ ಮತ್ತು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಇದರ ಪ್ರಭಾವ ಕೇಂದ್ರ ಸ್ಥಾನದಿಂದ ಗರಿಷ್ಠ 15 ರಿಂದ 20 ಕಿ.ಮೀ. ದೂರದವರೆಗೆ ಮಾತ್ರ ಇತ್ತು. ಮದೆನಾಡು, ಮೊಣ್ಣಂಗೇರಿ, ಜೋಡುಪಾಲ, ದೇವಸ್ತೂರು ಮತ್ತು ಮಡಿಕೇರಿ ನಗರದ ಒಂದೆರಡು ಭಾಗದಲ್ಲಿ ಭೂಕಂಪನದ ಅನುಭವವಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳಿಕೊಂಡಿದ್ದಾರೆ.ಈ ರೀತಿಯ ಭೂಕಂಪನವು ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಇಂತಹ ಲಘು ಭೂಕಂಪನಗಳಲ್ಲಿ ಹಾನಿಯ ಸಾಧ್ಯತೆಯು ತುಂಬಾ ಕಡಿಮೆಯಾಗಿರುತ್ತದೆ ಎಂದು ಕೆಎಸ್ಎನ್ಡಿಎಂಸಿ ಮಾಹಿತಿ ನೀಡಿದೆ.