ಗದಗ: ಬಡವರ, ಅವಕಾಶ ವಂಚಿತರ, ಶೋಷಣೆಗೆ ಒಳಗಾದವರ ಪರ ಗಟ್ಟಿಯಾಗಿ ನಿಂತು ಸಾಮಾಜಿಕ, ಆರ್ಥಿಕ, ನ್ಯಾಯ ನೀಡುವ, ನಾಡಿನ ಜನತೆಯ ದೈನಂದಿನ ಬವಣೆಗಳನ್ನು ನೀಗಿಸಲು ಪಂಚ ಗ್ಯಾರಂಟಿಗಳನ್ನು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಜನತೆಗೆ ಕೊಡುವುದರ ಮೂಲಕ ಬಡತನ ರೇಖೆಯಿಂದ ಮೇಲೆತ್ತುವ ದೃಢ ಹೆಜ್ಜೆ ಇಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಶಕ್ತಿ ಯೋಜನೆಯುಡಿ ಜಿಲ್ಲೆಯಲ್ಲಿ ಈವರೆಗೆ ಅಂದಾಜು ೩ಕೋಟಿ ೧೨ ಲಕ್ಷ ಮಹಿಳೆಯರು ಯೋಜನೆ ಲಾಭ ಪಡೆದಿರುತ್ತಾರೆ. ಹಸಿವು ಮುಕ್ತ ಕರ್ನಾಟಕ ಮಾಡುವ ದೃಢ ಸಂಕಲ್ಪದೊಂದಿಗೆ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಡಿಸೆಂಬರ್-೨೦೨೩ರ ಮಾಹೆಯಲ್ಲಿ ಜಿಲ್ಲೆಯ ನೋಂದಾಯಿತ ಅರ್ಹ ಒಟ್ಟು ೨,೧೮,೨೭೩ ಅಂತ್ಯೋದಯ ಹಾಗೂ ಬಿ.ಪಿ.ಎಲ್ ಪಡಿತರ ಕುಟುಂಬಗಳ ೭,೪೦,೬೧೪ ಪಡಿತರ ಫಲಾನುಭವಿ ಸದಸ್ಯರುಗಳಿಗೆ ಒಟ್ಟು ರು.೧೧,೯೬,೧೯,೧೪೦ ಗಳನ್ನು ನೇರವಾಗಿ ನಗದು ವರ್ಗಾವಣೆ ಮೂಲಕ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಡಿಸೆಂಬರ್-೨೦೨೩ರ ಅಂತ್ಯದ ವರೆಗೆ ಪಡಿತರ ಫಲಾನುಭವಿಗಳ ಖಾತೆಗೆ ಒಟ್ಟು ೬೮,೨೧,೬೭,೬೭೦ ರು. ಗಳನ್ನು ನೇರ ನಗದು ಹಣ ವರ್ಗಾವಣೆ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಜಿಲ್ಲೆಯಲ್ಲಿ ೨,೮೭,೪೭೯ ಗೃಹ ಬಳಕೆ ಸಂಪರ್ಕಗಳಿದ್ದು, ಡಿಸೆಂಬರ್-೨೦೨೩ರ ವರೆಗೆ ೨,೫೭,೬೭೮ ನೋಂದಣಿಯಾಗಿ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆದಿದ್ದು ಜಿಲ್ಲೆಯಲ್ಲಿ ಶೇ.೯೬.೪೯ರಷ್ಟು ನೋಂದಣಿ ಆಗಿರುತ್ತದೆ. ಗೃಹಲಕ್ಷ್ಮೀ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ೨,೨೧,೪೧೦ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು ಪ್ರತಿಶತ ೯೯.೬೪ರಷ್ಟು ಪ್ರಗತಿ ಸಾಧಿಸಲಾಗಿದೆ. ಈವರೆಗೆ ಪ್ರತಿ ತಿಂಗಳು ಅಂದಾಜು ೪೨ ಕೋಟಿ ರು.ಗಳನ್ನು ನೋಂದಾಯಿತ ಕುಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಈ ವರೆಗೆ ೧,೭೭೩ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುತ್ತಾರೆ ಎಂದರು.
ನವೆಂಬರ್ ೧ರಂದು ನಗರದ ೧೪೫ ಬೀದಿ ಬದಿ ವ್ಯಾಪಾರಸ್ಥರಿಗೆ ಹೈ-ಟೆಕ್ ತಳ್ಳುಗಾಡಿಗಳನ್ನು ವಿತರಿಸಲಾಗಿರುತ್ತದೆ. ಗದಗ ಜಿಲ್ಲೆಯಲ್ಲಿ ಭೀಕರ ಬರಗಾಲದಿಂದ ಉದ್ಯೋಗ ಅರಸಿ ಜನರು ಗುಳೆ ಹೋಗುವುದನ್ನು ತಡೆಯಲು ಮನರೇಗಾ ಯೋಜನೆಯಡಿ ಜಿಲ್ಲೆ ಪ್ರಸಕ್ತ ಸಾಲಿನಲ್ಲಿ ೩೬,೮೧,೦೪೪ ಮಾನವ ದಿನಗಳ ಸೃಜನೆ ಮಾಡಿ ಶೇ.೧೧೫ರಷ್ಟು ಗುರಿ ಸಾಧನೆ ಮಾಡಲಾಗಿದೆ. ಜಲಾನಯನ ಪ್ರದೇಶ ಅಭಿವೃದ್ಧಿ ಬೆಟ್ಟದಿಂದ ಕಣಿವೆಗೆ ತತ್ವದಡಿ ಬದು ನಿರ್ಮಾಣ ಕೃಷಿ ಹೊಂಡ ನಿರ್ಮಾಣ ಹಳ್ಳ ಮತ್ತು ಕೆರೆಗಳ ಅಭಿವೃದ್ಧಿ ಪಡಿಸುವ ಕಾಮಗಾರಿಗಳನ್ನು ಕೈಗೊಳಲಾಗಿದೆ. ಬೇಸಿಗೆಯಲ್ಲಿ ಕೂಲಿಕಾರರಿಗೆ ಕೆಲಸ ನೀಡಲು ಈಗಾಗಲೇ ೧೨೨ ಗ್ರಾಮ ಪಂಚಾಯತಗಳಲ್ಲಿ ಜಲಾನಯನ ತತ್ವದಡಿ ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದೆ.ಗದಗ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಹೃದ್ರೋಗ ಪರೀಕ್ಷೆ ಒದಗಿಸುವ ಕ್ಯಾತ್ಲ್ಯಾಬ್ ಘಟಕ ಮಾರ್ಚ್ ಮಧ್ಯಭಾಗದಲ್ಲಿ ಪ್ರಾರಂಭವಾಗಲಿದೆ. ಗದಗ-ಬೆಟಗೇರಿ ಮಧ್ಯಭಾಗದಲ್ಲಿರುವ ಸುಮಾರು ೩೪.೩೨ ಎಕರೆ ವಿಸ್ತೀರ್ಣದ ಭೂಮಿಯಲ್ಲಿ ವ್ಯಾಪಾರ, ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಕೇಂದ್ರ ಸ್ಥಾಪಿಸುವ ಉದ್ದೇಶದಿಂದ ಒಂದು ಶಾಸನಬದ್ಧ ಪ್ರಾಧಿಕಾರವನ್ನು ರಚಿಸಲು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದರು.
ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ೨೦೧೭-೧೮ನೇ ಸಾಲಿನಲ್ಲಿ ಅನುಮೋದನೆಗೊಂಡಂತಹ ಪ.ಜಾ/ಪ.ಪಂಗಡದ ೧೨೭ ಫಲಾನುಭವಿಗಳಿಗೆ ಅಮೃತ ನಗರೋತ್ಥಾನ ಹಂತ-೪ರಲ್ಲಿ ಫಲಾನುಭವಿಗಳ ವಂತಿಕೆ ರು.೬೫,೦೦೦ಗಳನ್ನ ಸಚಿವರು ವಿತರಿಸಿದರು.