- ನೀರು ಮಿತ ಬಳಕೆಗೆ ಸಲಹೆ । ಪೈಪ್ಲೈನ್ ಕಾಮಗಾರಿ ಶೀಘ್ರ ಮುಗಿಸುವ ಭರವಸೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ತಾಲೂಕಿನ ಆನಗೋಡು ಗ್ರಾಮದ ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಸೋಮವಾರದ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಾಡಿನ ಸಮಸ್ತ ಜನತೆಗೆ ಸುಖ, ಸಂತೋಷ, ನೆಮ್ಮದಿ, ಆರೋಗ್ಯ ಹಾಗೂ ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸಿದರು.ನಂತರ ದೇವಸ್ಥಾನ ಹಾಗೂ ಮಠದ ಆವರಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮರುಳುಸಿದ್ದೇಶ್ವರ ಸ್ವಾಮಿ ಆಶೀರ್ವಾದದಿಂದ ಈ ಭಾಗದ ರೈತರಿಗೆ ಒಳಿತಾಗಲಿ. ಮುಂದಿನ ಬೇಸಿಗೆ ದಿನಗಳಲ್ಲಿ ಲಭ್ಯವಿರುವ ನೀರನ್ನು ಮಿತವಾಗಿ ಹಾಗೂ ಸದ್ಬಳಕೆ ಮಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಹೀಗಾದಲ್ಲಿ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ಅನುಕೂಲವಾಗಲಿದೆ ಎಂದರು.
ಕ್ಷೇತ್ರದ ಶ್ರೇಯೋಭಿವೃದ್ಧಿ, ರೈತರ ಹಿತಾಸಕ್ತಿ ಹಾಗೂ ನೀರಾವರಿ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಕ್ಷೇತ್ರದ ಭಕ್ತಾದಿಗಳು, ಸ್ಥಳೀಯ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಬಳಿಕ ಭಕ್ತರು ಪ್ರಸಾದ ಸ್ವೀಕರಿಸಿದರು.
-7ಕೆಡಿವಿಜಿ38: ಆನಗೋಡಿನ ಶ್ರೀ ವಿಶ್ವಬಂಧು ಮರುಳಸಿದ್ದೇಶ್ವರ ದೇವಸ್ಥಾನದಲ್ಲಿ ಸಚಿವ ಕೆ.ಎಸ್. ಬಸವಂತಪ್ಪ ಭಾಗವಹಿಸಿ ಶ್ರೀ ಮರುಳಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.