ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಗಾಂಧಿ ಮಂಟಪದಲ್ಲಿ ನಿರ್ಮಾಣವಾಗುತ್ತಿರುವ ‘ಗಾಂಧಿ ಸ್ಮಾರಕ ಉದ್ಯಾನವನ’ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ವೀಕ್ಷಿಸಿದರು.ಕಾಮಗಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದರ ಜೊತೆಗೆ ಆದಷ್ಟು ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ದೇಶನ ನೀಡಿದರು. ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಸರ್ಕಾರದಿಂದ ಈಗಾಗಲೇ 50 ಲಕ್ಷ ರು. ಬಿಡುಗಡೆಯಾಗಿದ್ದು, ವಿಧಾನ ಪರಿಷತ್ ಅನುದಾನದಿಂದಲೂ 5 ಲಕ್ಷ ರು. ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದರು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಮಾತನಾಡಿ ಕಾಮಗಾರಿ ತ್ವರಿತವಾಗಿ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಸೂಚಿಸಿದರು. ಶಾಸಕರ ಅನುದಾನದಡಿ ಸಾಧ್ಯವಾದಷ್ಟು 10 ಲಕ್ಷ ರೂ ವರೆಗೆ ಹಣ ಬಿಡುಗಡೆಗೆ ಕ್ರಮವಹಿಸಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನಿಧಿಯಿಂದ ಅನುದಾನ ಒದಗಿಸುವುದರ ಜೊತೆಗೆ ಮತ್ತಷ್ಟು ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಬೇಕೆಂದು ಕೋರಿದರು. ಗಾಂಧಿ ಸ್ಮಾರಕ ಉದ್ಯಾನವನವನ್ನು ರಾಜ್ಘಾಟ್ ಮಾದರಿಯಲ್ಲಿ ನಿರ್ಮಿಸಬೇಕಿದೆ. ಆ ನಿಟ್ಟಿನಲ್ಲಿ ಆಕರ್ಷಣೀಯ ಕೇಂದ್ರವಾಗಿ ‘ಗಾಂಧಿ ಸ್ಮಾರಕ ಉದ್ಯಾನವನ್ನು’ ಮಾದರಿಯಾಗಿ ನಿರ್ಮಿಸಬೇಕು ಎಂದು ಟಿ.ಪಿ.ರಮೇಶ್ ಹೇಳಿದರು. ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಅವರು ಮಹಾತ್ಮ ಗಾಂಧಿ ಸ್ಮಾರಕ ಉದ್ಯಾನವನ ಸಂಬಂಧಿಸಿದಂತೆ ನೀಲನಕಾಶೆ ಬಗ್ಗೆ ಮಾಹಿತಿ ನೀಡಿದರು.ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ಸದಸ್ಯರಾದ ಮುನೀರ್ ಅಹಮದ್, ನಿರ್ಮಿತಿ ಕೇಂದ್ರದ ಎಂಜಿನಿಯರ್ ರಾಘವೇಂದ್ರ, ಪ್ರಮುಖರಾದ ಕಾರ್ಯಪ್ಪ ಇತರರು ಇದ್ದರು.