ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ 10 ಜನ ಆಶಾ ಕಾರ್ಯಕರ್ತೆಯರಿಗೆ ಸಾಂಕೇತಿಕವಾಗಿ ಮುಟ್ಟಿನ ಕಪ್ ವಿತರಿಸಿದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹಕಾರದಿಂದ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಅನುದಾನದಡಿ 2200 ಮುಟ್ಟಿನ ಕಪ್ ಗಳು ದೊರೆತಿವೆ. ತಜ್ಞ ವೈದ್ಯರ ಸಲಹೆಯಂತೆ ಪ್ರಾಥಮಿಕ ಹಂತದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮುಟ್ಟು ಮುಜುಗರವಲ್ಲ; ಹೆಮ್ಮೆ ಎಂಬ ಘೋಷವಾಕ್ಯದಡಿ ಮುಟ್ಟಿನ ಕಪ್ ವಿತರಿಸಲಾಗುತ್ತಿದೆ ಎಂದರು.ಮುಟ್ಟಿನ ಕಪ್ ಬಳಕೆ ಬಗ್ಗೆ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲು ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿತರಿಸಲಾಗುತ್ತಿದೆ. ನಂತರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು, ಶಾಲೆಗಳಲ್ಲಿನ ಮಹಿಳಾ ಸಿಬ್ಬಂದಿ, ಗ್ರಾಪಂ ಮಹಿಳಾ ಸದಸ್ಯರು ಹಾಗೂ ಸಿಬ್ಬಂದಿ, ಎನ್.ಆರ್.ಎಲ್.ಎಂ.ಯೋಜನೆ ಕೃಷಿ ಹಾಗೂ ಪಶು ಸಖಿಯರು, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಿಬ್ಬಂದಿ, ಶಾಲೆಗಳ, ಹಾಸ್ಟೆಲ್ ವಾರ್ಡನ್ ಗಳಿಗೆ ವಿತರಿಸಲು ಉದ್ದೇಶಿಸಲಾಗಿದೆ ಎಂದರು.
ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ಮುಟ್ಟಿನ ಕಪ್ ವಿತರಣೆಗೆ ಸಾಂಕೇತಿಕವಾಗಿ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರು ಚಾಲನೆ ನೀಡಿದ್ದಾರೆ. ಮುಂದಿನ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಜಿಲ್ಲೆಯ ಎಲ್ಲಾ 25 ರಿಂದ 45 ವರ್ಷ ವಯೋಮಿತಿಯ ಮಹಿಳೆಯರಿಗೆ ಸಿ.ಎಸ್.ಆರ್.ಅನುದಾನದಲ್ಲಿ ಮುಟ್ಟಿನ ಕಪ್ ವಿತರಿಸುವ ಗುರಿ ಹೊಂದಲಾಗಿದೆ ಎಂದು ನಂದಿನಿ ತಿಳಿಸಿದರು.