ಗದಗ: ಕಳೆದ ನಾಲ್ಕೈದು ದಿನಗಳಿಂದ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಜಿಲ್ಲೆಯ ಪ್ರತಿ ಗ್ರಾಮಕ್ಕೂ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಮಳೆಯ ಕೊರತೆಯಿಂದಾಗಿ ರಾಜ್ಯದಲ್ಲಿ ಬರಗಾಲ ಘೋಷಣೆಯಾಗಿದೆ. ವಿದ್ಯುತ್ ಉತ್ಪಾದನೆಯಲ್ಲಿಯೂ ಸಹ ಕೊರತೆ ಎದುರಾಗಿದ್ದು, ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಸರ್ಕಾರದ ಹಂತದಲ್ಲಿ ಪ್ರಯತ್ನ ನಿರಂತರವಾಗಿ ನಡೆದಿದೆ. ಸದ್ಯದಲ್ಲೇ ವಿದ್ಯುತ್ ಖರೀದಿಸಿ ಸಮರ್ಪಕ ಪೂರೈಕೆ ಮಾಡಲಾಗುವುದು. ಈ ಪ್ರಕ್ರಿಯೆ ಕೈಗೊಳ್ಳಲು ಅಲ್ಪ ಸಮಯ ಅಗತ್ಯವಾಗಿದೆ. ಅಲ್ಲಿಯವರೆಗೂ ಸಾರ್ವಜನಿಕರು, ರೈತ ಸಮುದಾಯ ಸಹನೆಯಿಂದ ಇರುವಂತೆ ಅಧಿಕಾರಿಗಳು ಮನವರಿಕೆ ಮಾಡಿಕೊಡುವಂತೆ ತಿಳಿಸಿದರು.
ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ, ಈ ಹಿಂದೆ ದಿನದ ೨೪ ಗಂಟೆಯೂ ನಿರಂತರ ವಿದ್ಯುತ್ ಪೂರೈಕೆಯಾಗುತ್ತಿತ್ತು. ಸದ್ಯ ವಿದ್ಯುತ್ ವ್ಯತ್ಯಯದಿಂದಾಗಿ ಸಾರ್ವಜನಿಕರು ಹಾಗೂ ರೈತರು ತೊಂದರೆಗೊಳಗಾಗಿದ್ದು, ಕೂಡಲೇ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಕೋರಿದರು. ಇದೇ ಸಂದರ್ಭದಲ್ಲಿ ರೋಣ ಕ್ಷೇತ್ರದಿಂದ ಆಗಮಿಸಿದ ರೈತರು ಸಭೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುವ ಮೂಲಕ ರೈತರ ಬೆಳೆಗೆ ನೀರು ನೀಡಲು ಸಹಕರಿಸುವಂತೆ ಕೋರಿದರು.ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಅಸಮರ್ಪಕ ವಿದ್ಯುತ ಪೂರೈಕೆಯಿಂದ ರೈತರು ಪದೆ ಪದೆ ಪ್ರತಿಭಟನೆ ಮಾಡಿ ವಿದ್ಯುತ್ ಸರಬರಾಜು ಕೇಂದ್ರಗಳಿಗೆ ತೆರಳಿ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ಅಧಿಕಾರಿಗಳು ವಿದ್ಯುತ್ ಪೂರೈಕೆ ಕುರಿತು ನಿಯಮಿತವಾಗಿ ರೈತರಿಗೆ ಮಾಹಿತಿ ನೀಡುವಂತೆ ತಿಳಿಸಿ ಸಮರ್ಪಕ ವಿದ್ಯುತ ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಗದಗ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ರಾಜೇಶ ಕಲ್ಯಾಣಶೆಟ್ಟರ ಮಾತನಾಡಿ, ಜಿಲ್ಲೆಯಲ್ಲಿನ ಪವನ ವಿದ್ಯುತ್ ಸ್ಥಾವರಗಳಿಂದ ಪ್ರತಿದಿನ ೭೩೫ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಬೇಕಿತ್ತು. ವಾತಾವರಣದಲ್ಲಿನ ಬದಲಾವಣೆಯಿಂದಾಗಿ ಗಾಳಿಯ ವೇಗ ಕುಂಠಿತಗೊಂಡಿರುವುದರಿಂದ ಪ್ರತಿದಿನ ೨೫ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾತ್ರವೇ ಆಗುತ್ತಿದೆ. ಆದಗ್ಯೂ ಸಹ ವಿದ್ಯುತ್ ಸರಬರಾಜು ಸಮರ್ಪಕವಾಗಿ ಮಾಡಲು ಅಧಿಕಾರಿ ವರ್ಗ ಶ್ರಮಿಸುತ್ತಿದೆ ಎಂದು ಮಾಹಿತಿ ನೀಡಿದರು.