ಸಚಿವರಿಂದ ರಸ್ತೆ, ಸೇತುವೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

KannadaprabhaNewsNetwork | Published : Feb 26, 2025 1:04 AM

ಲೋಕೋಪಯೋಗಿ, ಸಣ್ಣ ನೀರಾವರಿ ಮತ್ತು ಹೇಮಾವತಿ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ 60 ಕೋಟಿ ರು.ವೆಚ್ಚದ ರಸ್ತೆ, ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ 60 ಕೋಟಿ ರು. ವೆಚ್ಚದಲ್ಲಿ ರಸ್ತೆ, ಸೇತುವೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲೂಕಿನ ಹಲವು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದ ಸಚಿವರು, ಹಳ್ಳಿಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು, ರಸ್ತೆ, ಸೇತುವೆ ಸೇರಿ ಇನ್ನಿತರೆ ಮೂಲ ಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು.

ತಾಲೂಕಿನ ಬಹುತೇಕ ಹಳ್ಳಿಗಳಲ್ಲಿ ರಸ್ತೆ ಮತ್ತು ಸಂಪರ್ಕ ಸೇತುವೆಗಳು ಶಿಥಿಲಗೊಂಡಿದ್ದರಿಂದ ಜನರಿಗೆ ಬಹಳಷ್ಟು ತೊಂದರೆಯಾಗುತ್ತಿದೆ. ದೀರ್ಘ ಕಾಲ ಬಾಳಿಕೆ ಬರುವಂಥ ಉತ್ತಮ ಗುಣಮಟ್ಟದ ರಸ್ತೆಗಳು ನಿರ್ಮಾಣಗೊಂಡರೆ ಹಳ್ಳಿಗಳಲ್ಲಿನ ಬಹುತೇಕ ಸಮಸ್ಯೆ ಬಗೆಹರಿದಂತಾಗುತ್ತದೆ ಎಂದು ಹೇಳಿದರು.

ಲೋಕೋಪಯೋಗಿ, ಸಣ್ಣ ನೀರಾವರಿ ಮತ್ತು ಹೇಮಾವತಿ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ 60 ಕೋಟಿ ರು.ವೆಚ್ಚದ ರಸ್ತೆ, ಸೇತುವೆ ಮತ್ತು ತಡೆಗೋಡೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನ ಟಿ.ಚನ್ನಾಪುರದಿಂದ ಹೆತ್ತಗೋನಹಳ್ಳಿ ಗ್ರಾಮದವರೆಗೆ 4 ಕೋಟಿ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣ, ಬುರುಡುಗುಂಟೆ ಗ್ರಾಮದ ಪ.ಜಾತಿ ಕಾಲೋನಿಯಲ್ಲಿ 50 ಲಕ್ಷ ರು.ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಾಣ, ಬಿಂಡೇನಹಳ್ಳಿಯಿಂದ ಭೀಮನಹಳ್ಳಿ ಗ್ರಾಮದವರೆಗೆ 2 ಕೋಟಿ ರು.ವೆಚ್ಚದಲ್ಲಿ ರಸ್ತೆ ನಿರ್ಮಾಣ, ದೊಡ್ಡಜಟಕದಿಂದ ಕಾರಗೆರೆ ಗ್ರಾಮದವರೆಗೆ 2 ಕೋಟಿ ರು. ವೆಚ್ಚದಲ್ಲಿ ರಸ್ತೆ ನಿರ್ಮಾಣ ಹಾಗೂ ಗದ್ದೇಭೂವನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 13 ಲಕ್ಷ ರು. ವೆಚ್ಚದಲ್ಲಿ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ತಾಲೂಕಿನ ಜನರ ಹಾಗೂ ವಾಹನಗಳ ಓಡಾಟಕ್ಕೆ ಬಹಳಷ್ಟು ಅನುಕೂಲವಾಗುತ್ತದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜೆ.ರಾಜೇಶ್, ಜಿಪಂ ಮಾಜಿ ಸದಸ್ಯೆ ಸುಶೀಲಮ್ಮ, ಲೋಕೋಪಯೋಗಿ ಇಲಾಖೆಯ ಎಇಇ ನಂದಕುಮಾರ್, ಬಿಇಒ ಯೋಗೇಶ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜೆ.ವೈ.ಮಂಜುನಾಥ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೂಡ್ಲೀಗೌಡ, ಮುಖಂಡರಾದ ಸುನಿಲ್, ಲಕ್ಷ್ಮೀಕಾಂತ್, ಆರ್.ಕೃಷ್ಣೇಗೌಡ, ಕೊಣನೂರು ಹನುಮಂತು, ಜವರಪ್ಪ, ರಾಜು, ಜಯರಾಮು, ನರಸಿಂಹಮೂರ್ತಿ, ಪ್ರವೀಣ್, ಸಂಪತ್‌ಕುಮಾರ್, ಡಿ.ಕೆ.ಸುರೇಶ್, ಪ್ರಭಾಕರ್, ಶಶಿಗೌಡ ಸೇರಿ ಹಲವರು ಇದ್ದರು.