ಜಿಲ್ಲಾ ಯೋಜನಾ ಸಮಿತಿ ರಚನೆಯ ಪೂರ್ವಭಾವಿ ಸಭೆಯಲ್ಲಿ ಮಂಕಾಳ ವೈದ್ಯ
ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕುರಿತಂತೆ ಗ್ರಾಪಂ, ತಾಪಂ, ಜಿಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳು ಮತ್ತು ಜನತೆಗೆ ಒದಗಿಸಬೇಕಾದ ಸೌಲಭ್ಯಗಳ ಕುರಿತಂತೆ ಸಮಗ್ರವಾದ ವರದಿಯನ್ನು ತಯಾರಿಸುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಸೂಚಿಸಿದರು.
ಸೋಮವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಯೋಜನಾ ಸಮಿತಿ ರಚನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜನತೆಯ ಆಶೋತ್ತರಗಳನ್ನು ಒಳಗೊಂಡ ಯೋಜನೆಗಳನ್ನು ರೂಪಿಸಬೇಕು, ಈ ಯೋಜನೆಯಲ್ಲಿ ಸ್ಥಳೀಯ ಅಂಗನವಾಡಿ, ಶಾಲೆ, ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಪ್ರಾರಂಭಗೊಂಡು ಅತ್ಯಂತ ಅಗತ್ಯವಿರುವ ದೊಡ್ಡ ಯೋಜನೆಗಳನ್ನೂ ಕೂಡಾ ಸೇರಿಸಬೇಕು. ಈ ಎಲ್ಲಾ ಯೋಜನೆಗಳನ್ನು ಒಳಗೊಂಡ ಇಲಾಖಾವಾರು ಬೇಡಿಕೆಯ ಸಮಗ್ರ ಯೋಜನಾ ವರದಿಯನ್ನು ನ. 25ರೊಳಗೆ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಬೇಡಿಕೆಗಳ ವರದಿಯನ್ನು ನಿಗದಿತ ಅವಧಿಯೊಳಗೆ ಜಿಪಂಗೆ ಸಲ್ಲಿಸುವಂತೆ ಹಾಗೂ ಯೋಜನೆ ಸಿದ್ದಪಡಿಸುವಲ್ಲಿ ಗೊಂದಲಗಳಿದ್ದಲ್ಲಿ ನೇರವಾಗಿ ಸಂಪರ್ಕಿಸುವಂತೆ ತಿಳಿಸಿದರು.
ಯೋಜನಾ ವರದಿಯನ್ನು ತಯಾರಿಸುವ ಸಂದರ್ಭದಲ್ಲಿ ಸ್ಥಳೀಯ ಚುನಾಯಿತ ಜನ ಪ್ರತಿನಿಧಿಗಳ ಅಭಿಪ್ರಾಯ ಪಡೆದು, ಸಭೆಯಲ್ಲಿ ಚರ್ಚಿಸಿ ವರದಿಯನ್ನು ಸಲ್ಲಿಸಬೇಕು ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಜಿಪಂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು.ಜಿಲ್ಲಾ ಪೊಲೀಸ್ ವರಿಷ್ಠ ದೀಪನ್ ಎಂ.ಎನ್., ಉಪ ವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಇದ್ದರು.