ಸರ್ಕಾರಿ ವೈದ್ಯರು ಬೆಳಗ್ಗೆಯಿಂದ ಸಂಜೆ ೪ ಗಂಟೆವರೆಗೆ ಆಸ್ಪತ್ರೆಯಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆಯಲ್ಲಿ ಹೊರಗಡೆ(ಖಾಸಗಿ ಆಸ್ಪತ್ರೆ, ಕ್ಲಿನಿಕ್) ಕೆಲಸ ಮಾಡುತ್ತಿರುವುದರ ಬಗ್ಗೆ ದೂರುಗಳು ಬಂದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹಿಮ್ಸ್ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಸೂಚಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಹಾಸನ
ಸರ್ಕಾರಿ ವೈದ್ಯರು ಬೆಳಗ್ಗೆಯಿಂದ ಸಂಜೆ ೪ ಗಂಟೆವರೆಗೆ ಆಸ್ಪತ್ರೆಯಲ್ಲಿದ್ದು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯದ ವೇಳೆಯಲ್ಲಿ ಹೊರಗಡೆ(ಖಾಸಗಿ ಆಸ್ಪತ್ರೆ, ಕ್ಲಿನಿಕ್) ಕೆಲಸ ಮಾಡುತ್ತಿರುವುದರ ಬಗ್ಗೆ ದೂರುಗಳು ಬಂದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹಿಮ್ಸ್ ನಿರ್ದೇಶಕರಿಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಸೂಚಿಸಿದ್ದಾರೆ.
ಹಿಮ್ಸ್ ಸಭಾಂಗಣದಲ್ಲಿ ಶನಿವಾರ ಹಾಸನ ವೈದ್ಯಕಿಯ ವಿಜ್ಞಾನಗಳ ಸಂಸ್ಥೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲು ತಿಳಿಸಿದರು. ಕಾಮಗಾರಿ ಪೂರ್ಣಗೊಂಡಿರುವ ಕಟ್ಟಡಗಳನ್ನು ಬಳಕೆ ಮಾಡಿಕೊಳ್ಳಲು ತಿಳಿಸಿದ ಸಚಿವರು ಬ್ಯಾಕ್ ಲಾಗ್ ಹಾಗೂ ೩೭೧ಜೆ ಅಡಿ ಅನುಮೋದನೆ ಖಾಲಿ ಇರುವ ಹುದ್ದೆಗಳನ್ನು ಅನುಮೋದನೆ ಪಡೆದು ಭರ್ತಿಗೆ ಕ್ರಮವಹಿಸಲು ಸೂಚಿಸಿದರು.
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯಕವಿರುವ ಹುದ್ದೆಗಳ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕ್ರಮ ವಹಿಸುವಂತೆ ಸೂಚಿಸಿದರು. ಬಳಕೆಗೆ ಬಾರದ ಆಂಬ್ಯುಲೆನ್ಸ್ ನಿಷ್ಕ್ರಿಯಗೊಳಿಸಿ ಸಿಎಸ್ಆರ್ ಅಡಿಯಲ್ಲಿ ಅಗತ್ಯವಿರುವ ಆಂಬ್ಯುಲೆನ್ಸ್ ಪಡೆದುಕೊಳ್ಳುವಂತೆ ಸೂಚಿಸಿದರು. ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಅವರು ಮಾತನಾಡಿ, ಎ.ಬಿ.ಆರ್.ಕೆ ಯೋಜನೆಯಡಿ ಸೌಲಭ್ಯ ಪಡೆಯಲು ರೋಗಿಗಳ ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಇರುವುದಿಲ್ಲ. ಒಟಿಪಿ ಪಡೆಯಬೇಕಿರುತ್ತದೆ. ಇದರಿಂದ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದರು.
ಬೋಧನೆ ವಿಭಾಗಕ್ಕೆ ೯೮ ಹೆಚ್ಚುವರಿ ಹುದ್ದೆ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಹಾಗೂ ಸಿಎಸ್ಆರ್ ಫಂಡ್ನಲ್ಲಿ ಸಿ ಟಿ ಸ್ಕ್ಯಾನಿಂಗ್ ನೀಡಲಾಗಿದೆ ಎಂದು ನಿರ್ದೇಶಕರು ಮಾಹಿತಿ ನೀಡಿದರು.ಈ ವೇಳೆಯಲ್ಲಿ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಪ್ಪ, ಜಿಲ್ಲಾಧಿಕಾರಿ ಕೆ. ಎಸ್ ಲತಾ ಕುಮಾರಿ, ಹಿಮ್ಸ್ ನಿರ್ದೇಶಕರಾದ ಡಾ. ರಾಜಣ್ಣ, ಹಿಮ್ಸ್ನ ಆಡಳಿತ ಪರಿಷತ್ ಸದಸ್ಯರಾದ ರವೀಶ್, ವೈದ್ಯಕೀಯ ಅಧಿಕ್ಷಕರಾದ ಡಾ. ರಾಘವೇಂದ್ರ ಪ್ರಸಾದ್, ಡಾ. ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ನಾಗಪ್ಪ, ಮುಖ್ಯ ಆಡಳಿತಾಧಿಕಾರಿ ರೇಖಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಂತರ ಸಚಿವರು ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ಧವಾಗಿರುವ ಗ್ರಂಥಾಲಯ ಕಟ್ಟಡಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.