ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಮಾನತಿಗೆ ಸಚಿವ ಜಮೀರ್ ಸೂಚನೆ

KannadaprabhaNewsNetwork |  
Published : Sep 30, 2025, 12:00 AM IST
ಬಳ್ಳಾರಿ ಜಿಪಂ ನಜೀರ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ, ಮಾತನಾಡಿದರು.  | Kannada Prabha

ಸಾರಾಂಶ

ವಿಭಾಗೀಯ ನಿಯಂತ್ರಣಾಧಿಕಾರಿ ಸಭೆಗೆ ಬಂದಿಲ್ಲ. ಇಲಾಖೆಯ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಬಳ್ಳಾರಿ: ಕೆಕೆಆರ್‌ಟಿಸಿಯ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜಿಲ್ಲಾಧಿಕಾರಿಗೆ ಸೂಚಿಸಿದರು.

ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಸಭೆಯಲ್ಲಿ ಕೆಕೆಆರ್‌ಟಿಸಿಯಿಂದ ಯಾವೊಬ್ಬ ಅಕಾರಿಗಳು ಹಾಜರಾಗದಿರುವುದನ್ನು ಕಂಡು ಗರಂ ಆದ ಸಚಿವರು, ವಿಭಾಗೀಯ ನಿಯಂತ್ರಣಾಧಿಕಾರಿ ಸಭೆಗೆ ಬಂದಿಲ್ಲ. ಇಲಾಖೆಯ ಮಾಹಿತಿ ನೀಡದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಪೂರಕ ಮಾಹಿತಿ ನೀಡಿಲ್ಲ. ಈ ಬಗ್ಗೆ ಸಾಕಷ್ಟು ದೂರು ಕೇಳಿ ಬಂದಿದ್ದು, ಕೂಡಲೇ ಅಮಾನತು ಮಾಡಿ. ನಾನು ಹೇಳುವವರೆಗೆ ಮರು ನೇಮಕ ಆದೇಶ ಮಾಡಬೇಡಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಅಕ್ರಮ ಪಡಿತರ ಅಕ್ಕಿ ಸಾಗಾಣೆ ಬಗ್ಗೆ ಹೆಚ್ಚಿನ ನಿಗಾಹಿಸಿ ಕಡಿವಾಣ ಹಾಕಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಮಾಫಿಯಾ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ನಿಗಾ ವಹಿಸಬೇಕು. ಪಡಿತರ ಅಕ್ಕಿ ದಾಸ್ತಾನು ಮಾಡುವ ಡಿಪೋಗಳಲ್ಲಿಯೇ ದೊಡ್ಡ ಪ್ರಮಾಣದ ಅವ್ಯವಹಾರ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದು, ದಿಢೀರ್ ಭೇಟಿ ನೀಡಿ ಪರಿಶೀಲನೆ ಕಾರ್ಯವನ್ನು ಇಲಾಖೆಯ ಅಧಿಕಾರಿಗಳು ಮಾಡಬೇಕು. ತಪ್ಪಿತಸ್ಥರು ಯಾರೇ ಇರಲಿ. ಮುಲಾಜಿಲ್ಲದೇ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಸರ್ಕಾರ ನಿರುದ್ಯೋಗ ಯುವಕ-ಯುವತಿಯರಿಗೆ ಯುವನಿಧಿ ಯೋಜನೆಯಡಿ ಸಹಾಯಧನ ನೀಡುತ್ತಿದ್ದು, ಅವರಿಗೆ ಖಾಸಗಿ ವಲಯಗಳಲ್ಲಿ ಉದ್ಯೋಗ ಹೊಂದಲು ಕಾಲ-ಕಾಲಕ್ಕೆ ಉದ್ಯೋಗ ಮೇಳ ಆಯೋಜಿಸುವ ಮೂಲಕ ಉದ್ಯೋಗ ಕಲ್ಪಿಸಬೇಕು. ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಇದರ ಜೊತೆಗೆ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಮನವಿಗಳು ಸಲ್ಲಿಕೆಯಾಗುತ್ತಿದ್ದು, ಈ ಕುರಿತು ಬಸ್ ಗಳ ಬೇಡಿಕೆ ಇದ್ದಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು ಎಂದರು.

ವಿದ್ಯುತ್ ಗ್ರಾಹಕರ ಬಾಕಿ ಬಿಲ್ ಪಾವತಿಗೆ ಸಂಬಂಸಿದಂತೆ ಹೆಚ್ಚಿನ ಬಡ್ಡಿ ಹಾಕುವುದರಿಂದ ಸಾವಿರಾರು ರೂಪಾಯಿ ಪಾವತಿಸಲು ಜನತೆಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಲಾಗುವುದು. ಆದರೆ, ಯಾವುದೇ ಕಾರಣಕ್ಕೂ ಬಾಕಿ ಬಿಲ್ ನೆಪವೊಡ್ಡಿ ವಿದ್ಯುತ್ ಕಡಿತಗೊಳಿಸಬಾರದು ಎಂದು ಜೆಸ್ಕಾಂ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್ ಅವರು ಇಲಾಖೆಯ ಕುರಿತು ಮಾಹಿತಿ ನೀಡುವುದರೊಂದಿಗೆ, ಯೂರಿಯಾ ಗೊಬ್ಬರ ಕೊರತೆ ಇಲ್ಲ ಎಂದು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಜೆ.ಎನ್.ಗಣೇಶ್, ಕಚೇರಿಯಲ್ಲಿ ನೀವು ಎಸಿ, ಫ್ಯಾನ್ ಹಾಕಿಕೊಂಡು ಕೂತುಕೊಳ್ಳುವ ಮೂಲಕ ಏನು ಸಮಸ್ಯೆ ಇಲ್ಲವೆಂದು ಸುಲಭವಾಗಿ ಹೇಳುತ್ತೀರಿ. ಆದರೆ, ವಾಸ್ತವದಲ್ಲಿ ರೈತರು ಗೊಬ್ಬರಕ್ಕಾಗಿ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಸಭೆಗೆ ತಪ್ಪು ಮಾಹಿತಿ ನೀಡಬೇಡಿ ಎಂದು ಅಧಿಕಾರಿಗೆ ಸೂಚಿಸಿದರು. ಶಾಸಕರುಗಳಾದ ನಾರಾ ಭರತ್ ರೆಡ್ಡಿ, ಬಿ.ಎಂ.ನಾಗರಾಜ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತ್ರಿಲೋಕ ಚಂದ್ರ, ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಐಜಿಪಿ ವರ್ತಿಕಾ ಕಠಿಯಾರ್, ಎಸ್ಪಿ ಡಾ.ಶೋಭಾರಾಣಿ, ಡಿಸಿಎಫ್ ಬಸವರಾಜ ಇತರರಿದ್ದರು.

ಸಭೆಯಲ್ಲಿ ಭಾಗವಹಿಸದೆ ವಾಪಾಸ್ ಹೋದ ಸಂಸದ ತುಕಾರಾಂ ಹಾಗೂ ಶಾಸಕಿ ಅನ್ನಪೂರ್ಣ: ಕೆಡಿಪಿ ಸಭೆ ನಿಗದಿತ ಸಮಯಕ್ಕೆ ಶುರುವಾಗದಿದ್ದರಿಂದ ಸಂಸದ ಈ.ತುಕಾರಾಂ ಹಾಗೂ ಸಂಡೂರು ಶಾಸಕಿ ಈ.ಅನ್ನಪೂರ್ಣ ಸಭೆಗೆ ಹಾಜರಾಗದೇ ವಾಪಸ್ ಹೋದರು. ಜಿಲ್ಲಾ ಮಟ್ಟದ ಕೆಡಿಪಿ ಸಭೆಯನ್ನು ಮಧ್ಯಾಹ್ನ 2.15ಕ್ಕೆ ನಿಗದಿಗೊಳಿಸಲಾಗಿತ್ತು. ಸಚಿವರು ಸಂಜೆ 4 ಗಂಟೆ ಮೇಲ್ಪಟ್ಟು ಆಗಮಿಸಿದ್ದರು. ಇದಕ್ಕೂ ಮುನ್ನ ಸಭೆಗೆ ಬಂದಿದ್ದ ಸಂಸದ ಈ.ತುಕಾರಾಂ, ಶಾಸಕಿ ಅನ್ನಪೂರ್ಣ ಸಭೆ ನಡೆಯುವ ಸಭಾಂಗಣಕ್ಕೆ ಆಗಮಿಸಿ ಕೆಲಹೊತ್ತು ಕಾದು ಕುಳಿತಿದ್ದರು. ಸಚಿವರು ಬಾರದಿರುವುದನ್ನು ಕಂಡು ಸಭೆಗೆ ಹಾಜರಾಗದೇ ವಾಪಸ್ ಹೋದರು.

PREV

Recommended Stories

ತಪ್ಪಿಸಬಹುದಿತ್ತೆ ಕರ್ನಾಟಕ ರಾಜ್ಯದ ಜನರ 'ಭೀಮಾ' ಕಣ್ಣೀರು!
ಊಟ ಆಮ್ಯಾಲೆ ಮಾಡ್ರಿ ಈಗ ಕುಂದ್ರರೋ..! - ದಿಂಗಾಲೇಶ್ವರ ಶ್ರೀ ಹರಸಾಹಸ