ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಸೆ.18 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಲವು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದೆ.
ತುಳು ಭಾಷೆಗೆ ಕರ್ನಾಟಕದಲ್ಲಿ ಎರಡನೇ ಭಾಷೆಯ ಮಾನ್ಯತೆ, ಕರಾವಳಿ ಜಿಲ್ಲೆಗೆ ವಿಶೇಷ ಟಾಸ್ಕ್ಫೋರ್ಸ್ ರಚನೆ, ಪ್ರವಾಸೋದ್ಯಮ ಅಭಿವೃದ್ಧಿ, ಕಸ್ತೂರಿರಂಗನ್ ವರದಿ ಸೇರಿದಂತೆ ಒಟ್ಟು 44 ಬೇಡಿಕೆಗಳನ್ನು ಈ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.
ತುಳುನಾಡಿನ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಉಡುಪಿ ಶ್ರೀಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕಾ, ಕಾಪು ಮಾರಿಯಮ್ಮ, ಪೊಳಲಿ ರಾಜರಾಜೇಶ್ವರಿ, ಕಟೀಲು ದುರ್ಗಾಪರಮೇಶ್ವರಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಒತ್ತಾಯಿಸಲಾಗಿದೆ.ಉಳ್ಳಾಲ ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ಉಳ್ಳಾಲದಲ್ಲಿ ಮೀನುಗಾರಿಕಾ ಜೆಟ್ಟಿ ಹಾಗೂ ನೇತ್ರಾವತಿ ನದಿಗೆ ಡಾಕ್ ನಿರ್ಮಾಣ, ಮಂಗಳೂರು ಅಳಿವೆ ಬಾಗಿಲು-ನೇತ್ರಾವತಿ-ಗುರುಪುರ ನದಿಯಲ್ಲಿ ಡ್ರೆಜ್ಜಿಂಗ್, ಮೀನುಗಾರರಿಗೆ ಸೀಮೆಎಣ್ಣೆ ಸಬ್ಸಿಡಿ ಹಾಗೂ ಮಹಿಳಾ ಮೀನುಗಾರರಿಗೆ ಸಾಲ ಸೌಲಭ್ಯ ಕಲ್ಪಿಸುವಂತೆಯೂ ಮನವಿಯಲ್ಲಿ ಆಗ್ರಹಿಸಲಾಗಿದೆ.
ಆರೋಗ್ಯ, ಶಿಕ್ಷಣ, ಉದ್ಯೋಗಕ್ಕೂ ವಿಶೇಷ ಬೇಡಿಕೆ:
ಕಂಬಳ, ಯಕ್ಷಗಾನ, ತುಳು ಸಂಸ್ಕೃತಿಗೆ ವಿಶೇಷ ಪ್ಯಾಕೇಜ್:
ತುಳು ನಾಟಕ ಹಾಗೂ ತುಳು ಚಲನಚಿತ್ರಗಳಿಗೆ ವಿಶೇಷ ಪ್ರೋತ್ಸಾಹಧನ, ಯಕ್ಷಗಾನ ಮೇಳಗಳು ಮತ್ತು ತುಳು ನಾಟಕ ತಂಡಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕಳ ಉತ್ಸವಕ್ಕೆ ಕನಿಷ್ಠ ₹1 ಕೋಟಿ ಅನುದಾನ ನೀಡಬೇಕು ಎಂಬ ಬೇಡಿಕೆಯೂ ಇದೆ.
ಇನ್ನಷ್ಟು ಪ್ರಮುಖ ಬೇಡಿಕೆಗಳು: ಮನೆ ಇಲ್ಲದ ಕುಟುಂಬಗಳಿಗೆ ವಸತಿ ಯೋಜನೆಯಡಿ ನಿವೇಶನ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿಶೇಷ ಅನುದಾನ, ಹಕ್ಕುಪತ್ರ ಹೊಂದಿರುವ ಫಲಾನುಭವಿಗಳಿಗೆ ಏಕ ನಿವೇಶನ ಸಡಿಲಿಕೆ, ಸರ್ಕಾರಿ ಹಾಗೂ ದೇವಸ್ಥಾನಗಳ ಭೂಮಿಯನ್ನು ಅಕ್ರಮ-ಸಕ್ರಮದಡಿ ಸಕ್ರಮಗೊಳಿಸುವುದು, ಮರಳು ಮತ್ತು ಕೆಂಪುಕಲ್ಲಿನ ದರ ಹಾಗೂ ಪರವಾನಗಿ ವ್ಯವಸ್ಥೆ ಸರಳೀಕರಣ, ಕುಮ್ಕಿ ಜಮೀನು ಸಕ್ರಮಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಡಲಾಗಿದೆ.