ಶಿವಮೊಗ್ಗ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಜನ ವಿರೋಧಿ, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಮಾತ್ರ ಓಲೈಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಬಜೆಟ್ನಲ್ಲಿ ಒಂದಲ್ಲ ಒಂದು ಯೋಜನೆ ಮತ್ತು ಹಣವನ್ನು ಅಲ್ಪಸಂಖ್ಯಾತರಿಗೆ ಘೋಷಣೆ ಮಾಡುತ್ತಾರೆ. ಅಲ್ಪಸಂಖ್ಯಾತರಿಗಾಗಿ ಯೋಜನೆಗಳು ಮತ್ತು ಪರಿಹಾರ ಇರುತ್ತದೆ. ಕೇರಳದಲ್ಲಿ ಆನೆ ತುಳಿತದವರಿಗೆ ಪರಿಹಾರ ಇರುತ್ತದೆ. ಕೇರಳದ ವೈನಾಡಿನಲ್ಲಿ ಪ್ರಿಯಾಂಕ ಗಾಂಧಿ ಕ್ಷೇತ್ರಕ್ಕೆ 10 ಕೋಟಿ ರು. ಕೊಡುತ್ತಾರೆ. ಗಣಪತಿ ಮೆರವಣಿಗೆಯಲ್ಲಿ ಸಾಯುವವರಿಗೆ ಗಾಯ ಗೊಳ್ಳುವರಿಗೆ ಹಣ ಕೊಡಲು ಇವರ ಬಳಿ ಇರಲ್ಲ ಎಂದು ಕುಟುಕಿದರು.ಆರ್ಸಿಬಿಯವರು ಕಪ್ ಗೆದ್ದರೆ ಅದರಿಂದ ಪ್ರಚಾರ ಪಡೆದುಕೊಳ್ಳಲು ವಿಧಾನಸೌಧ ಮೆಟ್ಟಿಲ ಮೇಲೆ ಸಿಎಂ, ಡಿಸಿಎಂ ಪೈಪೋಟಿ ಮೇಲೆ ಕಾರ್ಯಕ್ರಮ ಮಾಡಿದರು. ಕೊನೆಗೆ ಇವರ ಸಂಭ್ರಮಾಚರಣೆಗೆ 11 ಜನ ಬಲಿಯಾದರು. ಕಳೆದ ವರ್ಷ ನಾಗಮಂಗಲದಲ್ಲಿ ಅರೆಸ್ಟ್ ಮಾಡಿ ನಂತರ ಬಿಡುಗಡೆ ಮಾಡಿದರು. ಮದ್ದೂರಿನಲ್ಲಿ ನಾವೇನು ಮಾಡಿದರೂ ನಡಿಯುತ್ತದೆ ಎಂದು ಗಲಾಟೆ ಮಾಡಿದ್ದಾರೆ. ಎಲ್ಲಿ ಪೊಲೀಸರು ಅನುಮತಿ ನೀಡುತ್ತಾರೋ ಅಲ್ಲೇ ಮೆರವಣಿಗೆ ನಡೆಯುತ್ತದೆ. ಪೊಲೀಸರಿಗೆ ನಿಮ್ಮ ಗುಪ್ತಚರ ಇಲಾಖೆ ಅವರಿಗೆ ಕಲ್ಲುತೂರಾಟ ನಡೆಸುವುದು ಗೊತ್ತಾಗುವುದಿಲ್ಲವೇ? ಕಾಂಗ್ರೆಸ್ನವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಹಿಂದೂ ವಿರೋಧಿ ಘಟನೆಗಳು ನಡೆಯುತ್ತಿವೆ. ಇದಕ್ಕೆಲ್ಲ ನೇರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೇ ಹೊಣೆ ಎಂದು ಹರಿಹಾಯ್ದರು.
ಚಾಮುಂಡಿ ಬೆಟ್ಟ ಹಿಂದುಗಳದ್ದಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿಕೆ ಕೊಡುತ್ತಾರೆ. ಹಿಂದೂ ದೇವಾಲಯಗಳಲ್ಲಿ ಸಾಂಪ್ರದಾಯದ ಧಾರ್ಮಿಕತೆ ಕಾಪಾಡಬೇಕು ಎಂಬುದು ಕಾಂಗ್ರೆಸ್ನವರಿಗೆ ಇಲ್ಲ. ಇಂತಹ ಹಿಂದೂ ವಿರೋಧಿ ನೀತಿ ಮುಖ್ಯಮಂತ್ರಿಗಳ ನೀತಿಯಾಗಿದೆ ಎಂದು ಕಿಡಿಕಾರಿದರು.ಶಿವಮೊಗ್ಗದಲ್ಲಿ ಇಎಸ್ಐ ಆಸ್ಪತ್ರೆ:
ಶಿವಮೊಗ್ಗದಲ್ಲಿ 100 ಬೆಡ್ಗಳ ಇಎಸ್ಐ ಆಸ್ಪತ್ರೆ ಆಗಲಿದೆ. 2018ರಲ್ಲಿ ಟೆಂಡರ್ ಕರೆಯಲಾಗಿತ್ತು ಮುಂಬರುವ ಏಪ್ರಿಲ್ ಮೇ ತಿಂಗಳೊಳಗೆ ಕಾರ್ಯಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆ 70,000 ಐಪಿ ಕಾರ್ಡ್ ದಾರರಿದ್ದಾರೆ. ಇಎಸ್ಐ ಕಾರ್ಡ್ದಾರರು ಖಾಸಗಿ ಆಸ್ಪತ್ರೆಗಳಿಗೂ ಹೋಗಬಹುದು. ಕಾರ್ಮಿಕರು ಯಾವ ಆಸ್ಪತ್ರೆಗೆ ಹೋದರು ಸರ್ಕಾರ ಅದರ ವೆಚ್ಚ ಭರಿಸಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.