ವಾಲ್ಮೀಕಿ ನಿಗಮದ ಹಣ ದುರುಪಯೋಗ: ಸಿಎಂ ರಾಜಿನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jun 29, 2024, 12:33 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

- ಬ್ಯಾರಿಕೇಡ್‌ ಹತ್ತಿ ಡಿಸಿ ಕಚೇರಿಯತ್ತ ತೆರಳಲು ಯತ್ನ । ಪ್ರತಿಭಟನಾಕಾರರನ್ನು ಬಂಧನ , ಬಿಡುಗಡೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಬಿಜೆಪಿ ಕರೆಯ ಮೇರೆಗೆ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್‌ ಶೆಟ್ಟಿ ಅವರ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಮೆರವಣಿಗೆಯಲ್ಲಿ ಹೊರಟು ಆಜಾದ್‌ ಪಾರ್ಕ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುತ್ತಿದ್ದಂತೆ ಲೋಕೋಪಯೋಗಿ ಕಚೇರಿ ಮುಂಭಾಗದಲ್ಲಿ ಬ್ಯಾರಿಕೇಡ್‌ ಹಾಕಿ ಪೊಲೀಸರು ತಡೆದರು. ಅಷ್ಟಕ್ಕೆ ಸುಮ್ಮನಾಗದ ಪ್ರತಿಭಟನಾಕಾರರು ಬ್ಯಾರಿಕೇಡ್‌ ಹತ್ತಿ ಮುಂದಕ್ಕೆ ಹೋಗಲು ಯತ್ನಿಸಿದರು. ಈ ನೂಕಾಟ ತಳ್ಳಾಟದಲ್ಲಿ ಕೆಲವು ಮಂದಿ ಪೊಲೀಸರು ಮಳೆ ಕೆಸರು ನೀರಿಗೆ ಬಿದ್ದರು. ಕೆಲವರಿಗೆ ಕೈ ಉಗುರು ತಾಕಿ ರಕ್ತ ಬಂದಿತು. ಸಿಬ್ಬಂದಿಯೋರ್ವರ ಬ್ಯಾಡ್ಜ್‌ ಕಿತ್ತು ಹೋಯಿತು. ಇಷ್ಟೆಲ್ಲಾ ಆವಾಂತರ ನಡುವೆಯೇ ಪೊಲೀಸರು ಪ್ರತಿಭಟನಾ ಕಾರರನ್ನು ಬಂಧಿಸಿದರು. ಕೆಲ ಸಮಯದ ನಂತರ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ್‍ಶೆಟ್ಟಿ, ಎಸ್.ಟಿ. ಸಮುದಾಯಕ್ಕೆ ಮೀಸಲಿರಿಸಿದ್ಧ ಸುಮಾರು ₹ 187 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡು ವಿವಿಧ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಬಳಸಿ ಕೊಂಡಿರುವುದು ನಾಚಿಗೇಡಿನ ಸಂಗತಿ. ಈ ಹಣ ವರ್ಗಾವಣೆಯಲ್ಲಿ ನೈತಿಕ ಹೊಣೆ ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.

ಬಡವರು, ದೀನದಲಿತರು, ಪ.ಜಾತಿ, ಪ.ಪಂಗಡದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇವೆಂದು ಹೇಳಿ ಸುಳ್ಳು ಭರವಸೆ ನೀಡಿ, ಮತ ಪಡೆದುಕೊಂಡ ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್.ಟಿ. ಸಮುದಾಯ ಅಭಿವೃದ್ಧಿಗೆ ಮೀಸಲಿದ್ದ ಹಣ ದುರ್ಬಳಸಿ ಕೊಂಡಿದೆ. ಈ ಪ್ರಕರಣದ ಸಂಬಂಧ ಸಚಿವ ನಾಗೇಂದ್ರ ರಾಜೀನಾಮೆ ಸಲ್ಲಿಸಿರುವ ಜೊತೆಗೆ ಓರ್ವ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದರು.

ಎಸ್.ಟಿ. ಘಟಕದ ಜಿಲ್ಲಾಧ್ಯಕ್ಷ ನಂದೀಶ್ ಮದಕರಿ ಮಾತನಾಡಿ, ಅನ್ಯಾಯಕ್ಕೆ ಒಳಗಾದವರಿಗೆ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಸರ್ಕಾರದಲ್ಲಿ ಸಣ್ಣ ವಸ್ತುಗಳನ್ನು ಖರೀದಿಸುವ ಅಥವಾ ಅನುದಾನ ಬಿಡುಗಡೆಗೊಳಿಸುವ ವೇಳೆ ಬಹಳಷ್ಟು ನಿಯಮ ರೂಪಿಸಿ ಹಣ ನೀಡುತ್ತದೆ. ಆದರೆ ಹಸ್ತಕ್ಷೇಪವಿಲ್ಲದೇ ದೊಡ್ಡ ಮಟ್ಟದಲ್ಲಿ ಆರ್ಥಿಕ ವ್ಯವಹಾರ ನಡೆಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಲೋಕಸಭಾ ಚುನಾವಣಾ ಸಮಯದ ನೀತಿ ಸಂಹಿತೆ ಅವಧಿಯಲ್ಲೇ ಎಸ್.ಟಿ. ಸಮುದಾಯದ ಹಣ ವರ್ಗಾವಣೆ ಸಾಧ್ಯವೇ ಎಂದ ಅವರು, ಅಕ್ರಮವಾಗಿ ವಿವಿಧ ರಾಜ್ಯದ ಚುನಾವಣೆಗಳಿಗೆ ನಕಲಿ ಉದ್ಯಮಿಗಳನ್ನು ಸೃಷ್ಟಿಸಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಇದಕ್ಕೆ ಸಂಬಂಧಿಸಿದ ನಿಗಮದ ಅಧಿಕಾರಿ ಹಾಗೂ ಸಚಿವರೇ ಕಾರಣವೆಂದು ಅಧಿಕಾರಿ ಚಂದ್ರಶೇಖರ್ ಪತ್ರದಲ್ಲಿ ಬರೆದಿಟ್ಟು ಸಾವನ್ನಪ್ಪಿದ್ದಾರೆ ಎಂದರು.

ಈ ಪ್ರಕರಣದಲ್ಲಿ ಹಣಕಾಸು ಇಲಾಖೆಯಡಿ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದು ಸ್ಪಷ್ಟವಿದೆ. ಹೀಗಾಗಿ ನೈತಿಕ ಹೊಣೆ ಹೊತ್ತ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವರ್ಗಾವಣೆಗೊಂಡ ಹಣ ವಾಪಸ್ ತಂದು ಎಸ್.ಟಿ. ಸಮುದಾಯಕ್ಕೆ ಬಳಕೆಗೆ ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಎಸ್.ಟಿ. ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಮೂರ್ತಿ, ಮೋಹನ್, ಪ್ರಧಾನ ಕಾರ್ಯ ದರ್ಶಿಗಳಾದ ಮಧುಕುಮಾರ್, ಶಂಕರ್ ಮಡೆನೆರಳು, ಮಂಡಲ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಕೋಟೆ ರಂಗನಾಥ್, ಬೆಳವಾಡಿ ರವೀಂದ್ರ, ಪುಣ್ಯಪಾಲ್, ಮಧುಕುಮಾರ್‌ ರಾಜ್‌ ಅರಸ್, ಬಿ. ರಾಜಪ್ಪ, ಡಾ.ನರೇಂದ್ರ, ದುರ್ಗೇಶ್, ಸಚಿನ್, ಕೌಶಿಕ್, ಸೀತರಾಮ ಭರಣ್ಯ ಹಾಗೂ ಕಾರ್ಯಕರ್ತರು ಇದ್ದರು.

ಪೋಟೋ ಫೈಲ್‌ ನೇಮ್‌ 28 ಕೆಸಿಕೆಎಂ 4ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ