ಹಗರಿಬೊಮ್ಮನಹಳ್ಳಿ: ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಖಂಡಿಸಿ ಶನಿವಾರ ಸಿಪಿಎಂ ಪದಾಧಿಕಾರಿಗಳು, ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ರಾಜಕೀಯ ದ್ವೇಷ ಸಾಧನೆಗೆ ಸಾಂವಿಧಾನಿಕ ಸಂಸ್ಥೆಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಪ್ರತಿಭಟನೆಕಾರರು ಘೋಷಣೆ ಕೂಗಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ತಾಲೂಕು ಕಾರ್ಯದರ್ಶಿ ಬಿ.ಮಾಳಮ್ಮ ಮಾತನಾಡಿ, ನಮ್ಮ ಪಕ್ಷವು ಯಾವುದೇ ತನಿಖಾ ಪ್ರಕ್ರಿಯೆ ತಡೆಯುವ ಉದ್ದೇಶ ಹೊಂದಿಲ್ಲ. ಹಾಗೆಯೇ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರುಪಯೋಗ ಪಡಸಿಕೊಳ್ಳುವುದನ್ನು ಒಪ್ಪುವುದಿಲ್ಲ. ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳ ಹಿಂದೆ ದೇಶದಾದ್ಯಂತ ಅರಾಜಕತೆ ಸೃಷ್ಟಿಸುವ ಹುನ್ನಾರವಿದೆ ಎಂದು ವಾಗ್ದಾಳಿ ನಡೆಸಿದರು.ನೂತನ ಮುಖ್ಯಮಂತ್ರಿ ವಿ.ಡಿ. ಸತೀಶನ್ ದೆಹಲಿಯಲ್ಲಿ ಪ್ರಧಾನಿ ಭೇಟಿಯಾದ ಮರುದಿನವೇ ನಡೆದಿರುವ ದಾಳಿ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪಿಣರಾಯಿ ವಿಜಯನ್ ಅವರಿಗೂ ಎಕ್ಸಲಾಜಿಕ್ ಸಲ್ಯೂಷನ್ ಪ್ರಕರಣಕ್ಕೂ ಸಂಬಂಧವಿಲ್ಲ. ಸಿಎಂಆರ್ಎಲ್ ಡೈರಿಯಲ್ಲಿ ಕಾಣಿಸಿಕೊಂಡಿರುವ ಹೆಸರಲ್ಲಿ ಅನೇಕರು ಈಗಲೂ ರಾಜ್ಯ ಸರ್ಕಾರದಲ್ಲಿ ಪ್ರಮುಖ ಹುದ್ದೆಯಲ್ಲಿಯೇ ಮುಂದುವರೆದಿದ್ದಾರೆ ಎಂದು ಆರೋಪಿಸಿದರು.
ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿವಾಸದ ಮೇಲೆ ನಡೆದ ಜಾರಿ ನಿರ್ದೇಶನಾಲಯದ ದಾಳಿಯನ್ನು ಖಂಡಿಸಿ ಶನಿವಾರ ಹಗರಿಬೊಮ್ಮನಹಳ್ಳಿಯಲ್ಲಿ ಸಿಪಿಎಂ ಕಾರ್ಯಕರ್ತರು ಪ್ರತಿಭಟಿಸಿದರು.