ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ

KannadaprabhaNewsNetwork |  
Published : Feb 11, 2026, 02:15 AM IST
ಬೈರತಿ ಬಸವರಾಜ್‌ | Kannada Prabha

ಸಾರಾಂಶ

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್‌.ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್‌ ಎರಡನೇ ಬಾರಿ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಕೆ.ಆರ್‌.ಪುರ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಹೈಕೋರ್ಟ್‌ ಎರಡನೇ ಬಾರಿ ನಿರೀಕ್ಷಣಾ ಜಾಮೀನು ನಿರಾಕರಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್‌ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿ ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್‌ ಯಾದವ್‌ ಅವರ ಪೀಠ ಶುಕ್ರವಾರ ಆದೇಶಿಸಿದೆ. ಜೊತೆಗೆ, 2025ರ ಡಿ.26ರಂದು ಹೈಕೋರ್ಟ್‌ನ ರಜಾಕಾಲದ ಏಕ ಸದಸ್ಯ ಪೀಠ ಬಸವರಾಜ್‌ ಅವರಿಗೆ ಮಂಜೂರು ಮಾಡಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನನ್ನೂ ಇದೇ ವೇಳೆ ತೆರವುಗೊಳಿಸಲಾಗಿದೆ.

ಇದರಿಂದ 2ನೇ ಬಾರಿಗೆ ನಿರೀಕ್ಷಣಾ ಜಾಮೀನು ಅರ್ಜಿ ಹೈಕೋರ್ಟ್‌ನಿಂದ ತಿರಸ್ಕಾರಗೊಂಡಿದ್ದು, ಸಿಐಡಿ ಪೊಲೀಸರಿಂದ ಬೈರತಿ ಬಸವರಾಜು ಅವರಿಗೆ ಬಂಧನ ಭೀತಿ ಎದುರಾಗಿದೆ.

ಹೆಚ್ಚಿನ ತನಿಖೆ ಒಳಗಾಗಲು ಸಿದ್ಧ. ಇದರಿಂದ ನಿಗದಿತ ಅವಧಿಗೆ ಮಾತ್ರ ತಮ್ಮನ್ನು ತನಿಖಾಧಿಕಾರಿಗಳ ವಶಕ್ಕೆ ನೀಡಬಹುದು ಎಂಬ ಬಸವರಾಜ್‌ ಅವರ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.

ಅರ್ಜಿದಾರ ನಿರ್ದೇಶಿಸಲು ಸಾಧ್ಯವಿಲ್ಲ:

ತನಿಖಾ ದಾಖಲೆಗಳು, ಫೋಟೋ ಮತ್ತು ಸಿಡಿಆರ್‌ಗಳನ್ನು ಪರಿಶೀಲಿಸಿದಾಗ ಅರ್ಜಿದಾರರು ತನಿಖೆ ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂಬುದು ನಿಚ್ಚಳವಾಗಿ ತಿಳಿದು ಬರುತ್ತದೆ. ಸಿಡಿಆರ್‌, ತನಿಖಾ ವರದಿ ಮತ್ತು ಇತರೆ ಆರೋಪಿಗಳೊಂದಿಗೆ ಅರ್ಜಿದಾರರು ಇರುವ ಪೋಟೋಗಳನ್ನು ಆರೋಪಿ ಎದುರಿಗೆ ಇಟ್ಟು ತನಿಖೆ ನಡೆಸಬೇಕಾದ ಅವಶ್ಯಕತೆ ಇದೆ. ತನಿಖಾ ದಾಖಲೆಗಳ ಕುರಿತು ಹೆಚ್ಚಿನ ಪರೀಕ್ಷೆಗೆ ಒಳಪಡಿಸಬೇಕಾದ ಮತ್ತು ಆ ಕುರಿತು ಅರ್ಜಿದಾರರು ವಿವರಣೆ ನೀಡಬೇಕಾದ ಅಗತ್ಯವಿದೆ. ವಿಚಾರಣೆ ಅಥವಾ ಹೇಗೆ ವಿಚಾರಣೆ ಮಾಡಬೇಕೆಂದು ಅರ್ಜಿದಾರರು ನಿರ್ದೇಶಿಸಲು ಸಾಧ್ಯವಿಲ್ಲ. ಹಾಗಾಗಿ, ಬೈರತಿ ಬಸರಾಜ್‌ ಅವರ ಕಸ್ಟೋಡಿಯಲ್‌ (ವಶಕ್ಕೆ ಪಡೆದು) ವಿಚಾರಣೆ ನಡೆಸಬೇಕು ಎಂಬ ತನಿಖಾಧಿಕಾರಿಗಳ ಮನವಿ ತಳ್ಳಿಹಾಕಲಾಗದು ಎಂದು ಪೀಠ ಹೇಳಿದೆ.

ನಿರೀಕ್ಷಣಾ ಜಾಮೀನು ತುಂಬಾ ಪ್ರಭಾವಿಯಾಗಿರುವ ಅರ್ಜಿದಾರ ಆರೋಪಿಯ ವಿಚಾರಣೆ ಅಷ್ಟೊಂದು ಪರಿಣಾಮಕಾರಿಯಾಗಿರುವುದಿಲ್ಲ. ಯಾವ ವಿಧಾನದಲ್ಲಿ ತನಿಖೆ ನಡೆಸಬೇಕು ಎಂಬ ನಿರ್ಧಾರವನ್ನು ತನಿಖಾ ಪ್ರಾಧಿಕಾರಕ್ಕೆ ಬಿಡಬೇಕು. ಅದರ ಬಗ್ಗೆ ನ್ಯಾಯಾಲಯ ತೀರ್ಪಿನಲ್ಲಿ ಹೇಳಲು ಸಾಧ್ಯವಿಲ್ಲ. ಅಸಾಧಾರಣ ಪರಿಹಾರ ಎಂದು ಪರಿಗಣಿಸಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದು. ಆದರೆ, ಬೈರತಿ ಬಸವರಾಜ್‌ ಅವರ ವಿಧಾನಸಭಾ ಕ್ಷೇತ್ರದಲ್ಲೇ ಮೃತ ಶಿವಕುಮಾರ್‌ ಹಾಗೂ ಆತನ ತಾಯಿ ವಾಸವಿದ್ದಾರೆ. ಬಸವರಾಜ್‌ ರಾಜಕೀಯ ಅಧಿಕಾರ ಹೊಂದಿದ್ದಾರೆ. ಇದು ನ್ಯಾಯಯುತ ತನಿಖೆಗೆ ಅಡ್ಡಿಯಾಗುವ ಸಾಧ್ಯತೆಯಿದೆ. ಇದು ಸಹ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಲು ಒಂದು ಕಾರಣ ಎಂದು ಪೀಠ ಹೇಳಿದೆ.

ಭೂ ವ್ಯಾಜ್ಯಕ್ಕೆ ಸಂಬಂಧಿಸಿ ಅರ್ಜಿದಾರರು ಮತ್ತು ಮೃತರ ನಡುವೆ ಈ ಹಿಂದೆಯೇ ದ್ವೇಷವಿತ್ತು. ಯಾವುದೇ ಅಹಿತಕರ ಘಟನೆ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು, ಪ್ರಕರಣದ ಮೊದಲನೇ ಆರೋಪಿ ಜಗದೀಶ್‌ ಜವಾಬ್ದಾರರಾಗುತ್ತಾರೆ ಎಂದು ಲಿಖಿತವಾಗಿ ಮೃತ ಶಿವು ಹಿಂದೆಯೇ ದೂರು ನೀಡಿದ್ದರು. ಇದರಿಂದ ಶಿವುಗೆ ಜೀವ ಭಯವಿತ್ತು ಎಂಬುದು ದೃಢಪಡುತ್ತದೆ. ಮೃತ ವ್ಯಕ್ತಿ ಹಾಗೂ ಆತನ ತಾಯಿ ಅರ್ಜಿದಾರರು ಬೈರತಿ ಅವರ ವಿಧಾನಸಭಾ ಕ್ಷೇತ್ರದಲ್ಲೇ ವಾಸ ಮಾಡುತ್ತಿರುವ ಕಾರಣ ನಿರೀಕ್ಷಣಾ ಜಾಮೀನು ನೀಡಿದರೆ, ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.

ಪ್ರಕರಣವೇನು?:

ಜಮೀನು ವಿವಾದ ಸಂಬಂಧ ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ಬಿಕ್ಲು ಶಿವ ಕೊಲೆ ನಡೆದಿತ್ತು. ಸಿಐಡಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಬೈರತಿ ಬಸವರಾಜು ಐದನೇ ಆರೋಪಿ. 2025ರ ಆ.12ರಂದು ಸಿಐಡಿ ಪೊಲೀಸರು ಪ್ರಕರಣದಲ್ಲಿ ಕೋಕಾ ನಿಯಮಗಳನ್ನು ಹೇರಿದ್ದರು. ಈ ಕ್ರಮ ರದ್ದತಿಗೆ ಮತ್ತು ನಿರೀಕ್ಷಣಾ ಜಾಮೀನು ಮಂಜೂರಾತಿಗೆ ಕೋರಿ ಬಸವರಾಜು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಕೋಕಾ ನಿಯಮಗಳನ್ನು ಹೇರಿದ್ದ ಸಿಐಡಿ ಪೊಲೀಸರ ಕ್ರಮ ರದ್ದುಪಡಿಸಿದ್ದ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಅದಕ್ಕಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಡಿ.19ರಂದು ಸೂಚಿಸಿತ್ತು. ಮರುದಿನವೇ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅದನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಡಿ.30ರಂದು (ಮಂಗಳವಾರ) ಆದೇಶಿಸಿತ್ತು. ಇದರಿಂದ ಡಿ.24ರಂದು ಬಸವರಾಜ್‌ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನುಗಾಗಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಡಿ.26ರಂದು ಹೈಕೊರ್ಟ್‌ ರಜಾಕಾಲದ ಏಕ ಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಐಎಸ್‌ ಅಂತಿಮ ಮಹಾ ಯೋಜನೆಗೆ ಅನುಮೋದನೆ ಸಲ್ಲಿಸಿ
ರೈತರ ಹಿತ ಕಾಯುವುದೇ ನನ್ನ ಗುರಿ: ಡಿ.ಕೆ.ಸುರೇಶ್