ಕಾಂಕ್ರೀಟ್‌ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಬಾಲಕೃಷ್ಣ ಚಾಲನೆ

KannadaprabhaNewsNetwork | Published : Mar 21, 2025 12:37 AM

ಸಾರಾಂಶ

ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಸೌಲಭ್ಯಗಳೂ ಹೆಚ್ಚಾಗಬೇಕು. ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಪಟ್ಟಣದಲ್ಲಿ ಜನಸಂಖ್ಯೆ ಹೆಚ್ಚಳವಾದಂತೆ ಸೌಲಭ್ಯಗಳೂ ಹೆಚ್ಚಾಗಬೇಕು. ಅದಕ್ಕಾಗಿ ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಕಾಂಕ್ರೀಟ್ ರಸ್ತೆ, ಚರಂಡಿ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.

ಪಟ್ಟಣದ ವಾರ್ಡ್ ಸಂಖ್ಯೆ ೧೫ರಲ್ಲಿ ವಿವಿಧ ಕಾಂಕ್ರೀಟ್ ರಸ್ತೆ, ಚರಂಡಿ ಸೇರಿ ಇತರೆ ಸೌಲಭ್ಯಗಳ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ ಅನುದಾನದಡಿ ೩ ಕೋಟಿ ರು. ಅನುದಾನ ಮಂಜೂರಾಗಿದ್ದು, ಈಗಾಗಲೇ ಶ್ರವಣಬೆಳಗೊಳ ಹೋಬಳಿ ಸಾತೇನಹಳ್ಳಿಯಲ್ಲಿ ೯೫ ಲಕ್ಷ ರು. ಕಾಮಗಾರಿ ಪೂರ್ಣಗೊಂಡಿದ್ದು, ಹೌಸಿಂಗ್ ಬೋರ್ಡ್ ನಲ್ಲಿ ೫೦ ಲಕ್ಷ ರು. ವೆಚ್ಚದ ಕಾಮಗಾರಿ ಪ್ರಗತಿಯಲ್ಲಿದೆ. ೧೫ನೇ ವಾರ್ಡಿಗೆ ೩೫ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, ೧೬ನೇ ವಾರ್ಡಿಗೆ ೨೫ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ, ೧೭ನೇ ವಾರ್ಡಿಗೆ ೨೦ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ೧೮ ನೇ ವಾರ್ಡಿಗೆ ೩೦ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ೨೦ನೇ ವಾರ್ಡಿಗೆ ೧೭.೫ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ, ೨೧ನೇ ವಾರ್ಡಿಗೆ ೧೭.೫ ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಶ್ರವಣಬೆಳಗೊಳ ಪಟ್ಟಣದ ಖಬರ್ ಸ್ತಾನದ ಆವರಣದಲ್ಲಿ ಸಿಸಿ ರಸ್ತೆ ಹಾಗೂ ಇತರೆ ಸೌಲಭ್ಯ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

ಪುರಸಭೆ ತೆರಿಗೆ ಹಣದಲ್ಲಿ ಪಟ್ಟಣದ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಗತಿಯಲ್ಲಿದ್ದು, ೩೦ ಲಕ್ಷ ರು. ವೆಚ್ಚದಲ್ಲಿ ಪಟ್ಟಣದಾದ್ಯಂತ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗೆ ಚಾಲನೆ ನೀಡಲಾಗಿದೆ, ನಗರ ವ್ಯಾಪ್ತಿಯಲ್ಲಿ ಶೇ. ೭೫ ರಷ್ಟು ರಸ್ತೆ ಕಾಮಗಾರಿಗಳು ಪೂರ್ಣಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದು, ಶೇ. ೨೫ ರಷ್ಟು ಕಾಮಗಾರಿಗಳು ಆದ್ಯತೆ ಮೇರೆಗೆ ಆಗಬೇಕಾಗಿದ್ದು, ಅನುದಾನ ಲಭ್ಯತೆ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ನನ್ನ ಕರ್ತವ್ಯ. ಜನರ ಭರವಸೆಗಳಿಗೆ ಧಕ್ಕೆಯಾಗದಂತೆ ಕೆಲಸ ಮಾಡುತ್ತಿದ್ದೇನೆ, ಕಾಮಗಾರಿಗಳು ಸಕಾಲದಲ್ಲಿ ಪೂರ್ಣಗೊಂಡು ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಸಿ.ಎನ್. ಮೋಹನ್, ಉಪಾಧ್ಯಕ್ಷೆ ರಾಣಿಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಆರ್. ಸುರೇಶ್, ಸದಸ್ಯರಾದ ರಾಧಾ ಮಂಜುನಾಥ್, ಕವಿತಾರಾಜು, ಜಿ.ಆರ್. ಸುರೇಶ್, ಧರಣೇಶ್, ಇಲಿಯಾಸ್, ಮುಖ್ಯಾಧಿಕಾರಿ ಆರ್. ಯತೀಶ್ ಕುಮಾರ್, ಮುಖಂಡರಾದ ಕುಂಬಾರಹಳ್ಳಿ ರಮೇಶ್, ಶಾಮಿಯಾನ ರಘು, ರಾಜು, ಗಾರೆಕೃಷ್ಣ, ರವಿ, ಪ್ರಕಾಶ್, ಸಂಜೀವ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share this article