ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ತಾಲೂಕಿನ ಶೆಟ್ಟಿನಾಯಕನ ಕೊಪ್ಪಲು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಚ್.ಟಿ.ಮಂಜು ಮಕ್ಕಳ ಶೈಕ್ಷಣಿಕ ಪ್ರಗತಿ ಬಗ್ಗೆ ಮಾಹಿತಿ ಪಡೆದರು.ವಸತಿ ಶಾಲೆಯ ಪ್ರತಿ ಕೊಠಡಿಗೂ ತೆರಳಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಶಾಸಕರು, ಶಾಲೆಯಲ್ಲಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳು, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಊಟ ಮತ್ತು ವಸತಿ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು, ಸರ್ಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಪ್ರತಿವರ್ಷ ಕೋಟ್ಯಂತರ ರು. ಅನುದಾನ ನೀಡುತ್ತಿದೆ. ಇದರ ಸದ್ಬಳಕೆಯಾಗಬೇಕಾದರೆ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಹೆಚ್ಚಳವಾಗಬೇಕು. ಸರ್ಕಾರದ ಸವಲತ್ತು ಪಡೆಯುತ್ತಿರುವ ಮಕ್ಕಳು ಕಲಿಕೆಯ ವಿಚಾರದಲ್ಲಿ ಕಠಿಣ ಪರಿಶ್ರಮ ಪಡಬೇಕು. ಉತ್ತಮ ಫಲಿತಾಂಶ ನೀಡುವ ಮೂಲಕ ಪೋಷಕರಿಗೆ ಮತ್ತು ಕಲಿತ ಶಾಲೆಗೆ ಗೌರವ ತಂದುಕೊಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಕೆ.ಆರ್.ಪೇಟೆ ತಾಲೂಕು ಜಿಲ್ಲೆಯಲ್ಲಿಯೇ ಮೊದಲ ಸ್ಥಾನಕ್ಕೆ ಬರಬೇಕು ಎನ್ನುವುದು ನನ್ನ ಆಶಯ. ಅದರಿಂದ ತಾಲೂಕಿನ ಶಾಲೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪ್ರತಿ ಶಾಲೆಯ ಶೈಕ್ಷಣಿಕ ಚಟುವಟಿಕೆಗಳ ಪರಿಶೀಲನೆ ಮಾಡುವ ಉದ್ದೇಶ ಹೊಂದಿದ್ದೇನೆ ಎಂದರು.ಶಿಕ್ಷಕರು ಬದ್ಧತೆಯಿಂದ ಕೆಲಸ ಮಾಡಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮ ವಹಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೂ ಈಗಾಗಲೇ ಮಾತನಾಡಿದ್ದು, ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಗಮನ ಹರಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲರಾದ ಪವಿತ್ರಾ, ತಮ್ಮ ವಸತಿ ಶಾಲೆ ಪ್ರಗತಿ ವಿವರಗಳನ್ನು ಶಾಸಕರಿಗೆ ತಿಳಿಸಿ, ಪ್ರಸ್ತುತ ಶಾಲೆಯಲ್ಲಿ 242 ಮಕ್ಕಳು ದಾಖಲಾಗಿದ್ದು, ಶೇ.100 ಫಲಿತಾಂಶ ಕೊಡುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸುತ್ತಿದ್ದಾರೆ. ಶಾಲೆಯಲ್ಲಿ ಆಡಿಟೋರಿಯಂ ಕೊರತೆ ಇದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ. ಸರ್ಕಾರದ ಸವಲತ್ತುಗಳನ್ನು ಮಕ್ಕಳಿಗೆ ತಲುಪಿಸಲಾಗುತ್ತಿದೆ. ಊಟ, ವಸತಿ ಸೇರಿ ಎಲ್ಲವೂ ಅತ್ಯುತ್ತಮ ರೀತಿಯಲ್ಲಿದೆ ಎಂದು ತಿಳಿಸಿದರು.