ಶಿರಸಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸೋಲಿಸಲು ಬಿಜೆಪಿ ಕಾರ್ಯಕರ್ತರೇ ಪ್ರಯತ್ನ ಮಾಡಿದ್ದಾರೆ ಎಂದು ಶಾಸಕ ಶಿವರಾಮ ಹೆಬ್ಬಾರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಶಾಸಕರು ಬಿಜೆಪಿ ತೊರೆದು ಪುನಃ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ಹರಿದಾಡತೊಡಗಿತ್ತು. ಇದಕ್ಕೆ ಪುಷ್ಟಿ ನೀಡುವಂತೆ ಹೆಬ್ಬಾರ್ ತಮ್ಮ ಬೆಂಗಲಿಗರೊಂದಿಗೆ ಸಭೆ ನಡೆಸಿದ್ದು, ಪುತ್ರನ ನೇತೃತ್ವದಲ್ಲಿ ಬೆಂಬಲಿಗರನ್ನು ಕಾಂಗ್ರೆಸ್ಸಿಗೆ ಸೇರಿಸಲು ಯೋಜನೆ ರೂಪಿಸಿದ್ದಾರೆ.
ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಮತ್ತು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಬಂಧ ಅಷ್ಟೊಂದು ಚೆನ್ನಾಗಿರಲಿಲ್ಲ. ಉತ್ತರಕನ್ನಡ ಜಿಲ್ಲೆಯ ಉಸ್ತುವಾರಿಯಿಂದ ಹಾವೇರಿ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ಬದಲಾಯಿಸಲು ಸಭಾಧ್ಯಕ್ಷರಾಗಿದ್ದ ಕಾಗೇರಿ ಪ್ರಮುಖ ಕಾರಣ. ಇದೇ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರಿದರೆ ತಮ್ಮ ವರ್ಚಸ್ಸು ಕಡಿಮೆಯಾಗುತ್ತದೆ ಎಂದು ಕಾಗೇರಿ ಪ್ರತಿಯೊಂದಕ್ಕೂ ಅಡ್ಡಗಾಲು ಹಾಕಿದ್ದರು ಎಂದು ಶಿವರಾಮ ಹೆಬ್ಬಾರ್ ಸಾಕಷ್ಟು ಬಾರಿ ಪರೋಕ್ಷವಾಗಿ ಹೇಳಿದ್ದರು. ಈಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಹೆಸರು ಘೋಷಣೆಯಾದ ನಂತರ ಹೆಬ್ಬಾರ್ ಅಸಮಾಧಾನ ಇನ್ನಷ್ಟು ಹೆಚ್ಚಾಗಲು ಕಾರಣವಾಗಿತ್ತು. ಲೋಕಸಭಾ ಚುನಾವಣೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸೋಲಿಸಲು ತಮ್ಮ ಪ್ರಮುಖ ಬೆಂಬಲಿಗರನ್ನು ಕಾಂಗ್ರೆಸ್ ಮನೆ ಬಾಗಿಲಿಗೆ ಕಳುಹಿಸಲು ಸಿದ್ಧರಾಗಿದ್ದಾರೆ.ಕೆಡಿಸಿಸಿ ಬ್ಯಾಂಕ್ ವಿಶ್ರಾಂತಿಗೃಹದಲ್ಲಿ ಸಭೆ: ನಗರದ ಕೆಡಿಸಿಸಿ ಬ್ಯಾಂಕ್ ವಿಶ್ರಾಂತಿಗೃಹದಲ್ಲಿ ತಮ್ಮ ಬೆಂಬಲಿಗರೊಂದಿಗೆ ಆಂತರಿಕ ಸಭೆ ನಡೆಸಿದ ಹೆಬ್ಬಾರ್, ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಮೊದಲ ಹಂತವಾಗಿ ಪುತ್ರ ವಿವೇಕ ಹೆಬ್ಬಾರ್ ಜತೆ ಪ್ರಮುಖ ಬೆಂಬಲಿಗರನ್ನು ಕಾಂಗ್ರೆಸ್ ಸೇರ್ಪಡೆ ಮಾಡಲು ನಿರ್ಧರಿಸಿದರು. ಬನವಾಸಿ ಭಾಗದ ೯ ಪಂಚಾಯಿತಿ ಪ್ರಮುಖರು, ತಮ್ಮ ಬೆಂಬಲಿಗರ ಜತೆ ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಬಿಜೆಪಿಗೆ ಬಂದ ನಂತರ ತಮ್ಮ ಗೌರವಕ್ಕೆ ಧಕ್ಕೆ ಮಾಡಲಾಗುತ್ತಿದೆ. ರಾಜಕೀಯ ಪ್ರಭಾವ ಬಳಸಿ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ. ಕ್ಷೇತ್ರದಲ್ಲಿ ಬಿಜೆಪಿ ಕೆಲ ನಾಯಕರಿಂದ ಸ್ಪಂದನೆ ಸಿಗುತ್ತಿಲ್ಲ ಎಂದು ಹೆಬ್ಬಾರ್ ಅಸಮಾಧಾನ ಹೊರಹಾಕಿದ್ದಾಗಿ ಸಭೆಯಲ್ಲಿ ಭಾಗವಹಿಸಿದ್ದ ಕೆಲ ಬೆಂಬಲಿಗರು ಮಾಹಿತಿ ನೀಡಿದರು.
ಜಿಲ್ಲಾಧ್ಯಕ್ಷರ ಬಳಿ ದಿನಾಂಕ ಪಡೆದು ಬನವಾಸಿಯಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಪಂಚಾಯಿತಿಯಿಂದ ೧೦೦ರಿಂದ ೧೫೦ ಪ್ರಮುಖ ಕಾರ್ಯಕರ್ತರು ಆಗಮಿಸಲು ತಿಳಿಸಿದ್ದಾರೆ. ರಾಜ್ಯದ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.