ಕನ್ನಡಪ್ರಭ ವಾರ್ತೆ ತುಮಕೂರು
ನಗರದ ಮರಳೂರು ದಿಣ್ಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಶಾಸಕ ಜ್ಯೋತಿ ಗಣೇಶ್, ಸಾರ್ವಜನಿಕರು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಶಿಶುವಿಹಾರ ಕೇಂದ್ರಗಳಲ್ಲಿ ರುವ ಪೋಲಿಯೋ ಬೂತ್ಗಳಿಗೆ ಭೇಟಿ ನೀಡಿ ತಮ್ಮ 0-5 ವರ್ಷದ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಬೇಕು ಎಂದು ಮನವಿ ಮಾಡಿದರು. ಮಾ. 6ರ ವರೆಗೆ ಈ ಪಲ್ಸ್ ಪೋಲಿಯಾ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದರು.
ದೇಶದಲ್ಲಿ ಪೋಲಿಯೋ ನಿರ್ಮೂಲನೆಗೆ ಪ್ರಮುಖ ಪಾತ್ರ ವಹಿಸಿರುವ ರೋಟರಿ ಸಂಸ್ಥೆಯವರು ಸಹ ಈ ಲಸಿಕಾ ಕಾರ್ಯಕ್ಕೆ ಕೈ ಜೋಡಿಸಿರುವುದು ತುಂಬಾ ಸಂತಸದ ಸಂಗತಿ ಎಂದು ಅವರು ಹೇಳಿದರು.ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ ಮಾತನಾಡಿ, ಆರೋಗ್ಯ ಸಿಬ್ಬಂದಿ ಅಂಗನವಾಡಿ ಕೇಂದ್ರಗಳಲ್ಲಿ ಇಂದು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುತ್ತಾರೆ. ನಾಳೆಯಿಂದ ಮನೆ ಮನೆಗೆ ತೆರಳಿ ಲಸಿಕೆ ಹಾಕುವ ಕೆಲಸ ಮಾಡುತ್ತಾರೆ. ಪ್ರತಿಯೊಬ್ಬ ಪೋಷಕರು ಸಹ ೦-೫ ವರ್ಷದ ವರೆಗಿನ ಮಕ್ಕಳಿಗೆ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಇದು ನಮ್ಮ ಜವಾಬ್ದಾರಿ ಎಂದರು.
ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಜತೆಗೆ ಪೌಷ್ಟಿಕ ಆಹಾರವನ್ನು ಸಹ ಕೊಡಬೇಕು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಹಾಗಾಗಿ ಪೋಷಕರು ಮಕ್ಕಳ ಆರೋಗ್ಯದ ಬಗ್ಗೆ ಪ್ರತಿ ಹಂತದಲ್ಲೂ ಕಾಳಜಿ ಹೊಂದಿರಬೇಕು ಎಂದರು.