ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
ಮದ್ದೂರು ತಾಲೂಕಿನ ಪರಿಶಿಷ್ಟರ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಅನುದಾನಗಳನ್ನು ತಂದು ಅಭಿವೃದ್ಧಿ ಪಡಿಸುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸಮೀಪದ ಕೆ.ಶೆಟ್ಟಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಎಸ್ಸಿಪಿ ಯೋಜನೆಯಡಿ 6 ಲಕ್ಷ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಹಾಗೂ ೨೦ ಲಕ್ಷ ರು. ವೆಚ್ಚದಲ್ಲಿ ಸ್ಮಶಾನ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಪರಿಶಿಷ್ಟರ ಕಲ್ಯಾಣಕ್ಕಾಗಿ ಮಿಸಲಿಟ್ಟಿರುವ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿ ಅಭಿವೃದ್ಧಿ ಪಡಿಸಲಾಗುವುದು. ರಸ್ತೆ ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.ಗ್ರಾಮದ ಪರಿಶಿಷ್ಟ ಸಮುದಾಯದವರು ಕಳೆದ ಒಂದು ವರ್ಷಗಳಿಂದ ಶುದ್ಧ ನೀರಿನ ಸಮಸ್ಯೆ ಹಾಗೂ ಸ್ಮಶಾನ ಅಭಿವೃದ್ಧಿ ಬಗ್ಗೆ ಅಹವಾಲುಗಳನ್ನು ಸಲ್ಲಿಸಿದ್ದು, ಅವರ ಅಹವಾಲುಗಳನ್ನು ಆಲಿಸಿ ಗ್ರಾಮದ ಜನರ ಆರೋಗ್ಯದ ದೃಷ್ಟಿಯಿಂದ ಶುದ್ದ ನೀರಿನ ಘಟಕವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದರು.
ಗ್ರಾಮದಲ್ಲಿ ಯಾರೇ ಸಾವನ್ನಪಿದ್ದರೂ ಅವರ ಅಂತ್ಯಕ್ರಿಯೆಗೆ ಸೂಕ್ತ ಸ್ಮಶಾನವಿರಲಿಲ್ಲ. ಇದನ್ನು ಗಮನಿಸಿ ಸುಸಜ್ಜಿತ ಸ್ಮಶಾನ ನಿರ್ಮಾಣ ಮಾಡಲು ಸುಮಾರು 20 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೊಂಡಿದ್ದು, ಶೀಘ್ರ ಪೂರ್ಣಗೊಳಿಸಲಾಗುವುದು ಎಂದರು.ಈ ವೇಳೆ ಗ್ರಾಮದ ಪರಿಶಿಷ್ಟ ಸಮುದಾಯದ ಹಿರಿಯ ಮುಖಂಡ ಪುಟ್ಟಯ್ಯ ಶಾಸಕರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ವೇಳೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಬಿ.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಗ್ರಾಪಂ ಅಧ್ಯಕ್ಷೆ ಸುಧಾ, ಯುವ ಮುಖಂಡ ಕರಡಕೆರೆ ಮನು, ಎಸ್ಸಿ ಬ್ಲಾಕ್ ಅಧ್ಯಕ್ಷ ಅಮೀನ್ ಶಿವಲಿಂಗಯ್ಯ, ಗ್ರಾಮದ ಮುಖಂಡರಾದ ರುದ್ರಯ್ಯ, ರಘು ಬೋರೇಗೌಡ, ಮಹೇಶ್, ಪುಟ್ಟಸ್ವಾಮಿ, ನಂಜುಡೇಗೌಡ, ಸುನಿಲ್ ಕುಮಾರ್, ಗಿರೀಶ್, ಹನುಮಯ್ಯ, ಕುಳ್ಳೆಗೌಡ, ಮಲ್ಲಯ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.