ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಪ್ರಸಾದ ಅನ್ನ ಸಂತರ್ಪಣೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅನ್ನ ಬಡಿಸುವ ಮೂಲಕ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀಕೃಷ್ಣ ಪ್ರಸಾದ ಅನ್ನ ಸಂತರ್ಪಣೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅನ್ನ ಬಡಿಸುವ ಮೂಲಕ ಚಾಲನೆ ನೀಡಿದರು.ನಂತರ ಮಾತನಾಡಿದ ಶಾಸಕರು, ಈ ಕಾಲೇಜಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 500 ವಿದ್ಯಾರ್ಥಿನಿಯರು ಶಿಕ್ಷಣ ಪಡೆಯುತ್ತಿದ್ದು, ಅವರಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದಿಂದ ಬಂದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಲೇಜಿನಲ್ಲಿ ಮಧ್ಯಾಹ್ನ ಊಟದ ವ್ಯವಸ್ಥೆ ಇಲ್ಲದೇ ಸಮಸ್ಯೆ ಎದುರಿಸುತ್ತಿರುವುದನ್ನು ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಶಾಲಾ ಉಪನ್ಯಾಸಕರು ಗಮನಕ್ಕೆ ತಂದಾಗ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಅನ್ನ ಪ್ರಸಾದ ನೀಡಲು ಒಪ್ಪಿ ಆಶೀರ್ವಚಿಸಿ ಈ ಪುಣ್ಯ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಶ್ರೀ ಪುತ್ತಿಗೆ ಮಠದ ಸ್ವಾಮೀಜಿಗಳಿಗೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಪರವಾಗಿ ಧನ್ಯವಾದ ಸಲ್ಲಿಸುವುದಾಗಿ ಹೇಳಿದರು.ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಕುಮಾರ್, ಶಿಕ್ಷಣ ಸೇವಾ ಸಮಿತಿಯ ಅಧ್ಯಕ್ಷ ರತ್ನಾಕರ, ಶ್ರೀಕೃಷ್ಣ ಮುಖ್ಯಪ್ರಾಣ ಅನ್ನಪ್ರಸಾದ ಸಮಿತಿಯ ಅಧ್ಯಕ್ಷ ಶೇಖರ ಕೋಟ್ಯಾನ್, ನಿವೃತ್ತ ಪ್ರಾಂಶುಪಾಲೆ ತಾರಾದೇವಿ ಎಚ್., ಪ್ರಮುಖರಾದ ಯೋಗೀಶ್ ಕೋಟ್ಯಾನ್, ಶಿಕ್ಷಣ ಸೇವಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿಯ ಸದಸ್ಯರು, ಕಾಲೇಜು ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.