ಹಾನಗಲ್ಲ: ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಬಾಕಿ ಇರುವ ಪ್ರಕರಣ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಸವಣೂರು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಅವರಿಗೆ ಸೂಚಿಸಿದರು.
ಪ್ರಕರಣಗಳನ್ನು ಕಾಲಮಿತಿಯಲ್ಲಿ ವಿಲೇವಾರಿ ಮಾಡಬೇಕು. ರೈತರು ಮತ್ತು ಸಾರ್ವಜನಿಕರ ಕೆಲಸ, ಕಾರ್ಯಗಳನ್ನು ವಿಳಂಬ ಮಾಡದಂತೆ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡಿ, ಹಾನಗಲ್ಲ ತಾಲೂಕಿನಿಂದ ಬಂದ ಯಾವುದೇ ಪ್ರಕರಣಗಳು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ವಿಳಂಬವಾಗಿ ಸಾರ್ವಜನಿಕರಿಗೆ ತೊಂದರೆ ಆಗುವುದನ್ನು ಸಹಿಸುವುದಿಲ್ಲ. ಕೂಡಲೇ ಎಲ್ಲವನ್ನೂ ಇತ್ಯರ್ಥ ಮಾಡಿ ಎಂದು ಸೂಚಿಸಿದರು.
ತಹಸೀಲ್ದಾರ್ ಕಚೇರಿಯಿಂದ ಸವಣೂರು ಉಪ ವಿಭಾಗಾಧಿಕಾರಿ ಕಚೇರಿಗೆ ಬರುವ ಕೆಲವು ಪ್ರಕರಣಗಳಲ್ಲಿ ಅಗತ್ಯ ಮಾಹಿತಿ ಇಲ್ಲ ಎಂಬ ಕಾರಣ ನೀಡಿ ಪರತ್ ಕಳುಹಿಸುತ್ತಿರುವ ಬಗ್ಗೆಯೂ ದೂರುಗಳು ಹೆಚ್ಚಿವೆ. ಈ ಬಗ್ಗೆ ಗಮನ ನೀಡಿ, ಯಾವ ಕಾರಣದಿಂದ ಪರತ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ಪಡೆದು, ಅನವಶ್ಯಕವಾಗಿ ತೊಂದರೆ ಕೊಡುತ್ತಿರುವ ಅಧಿಕಾರಿ, ಸಿಬ್ಬಂದಿ ಮೇಲೆ ಕ್ರಮ ಜರುಗಿಸುವಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದರು.ಕಂದಾಯ ಗ್ರಾಮ, ಉಪಗ್ರಾಮ ರಚನೆಯಲ್ಲಿ ಹಕ್ಕುಪತ್ರಕ್ಕೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ನಡೆಸಿ ಬಡ ಕುಟುಂಬಗಳಿಗೆ ನ್ಯಾಯ ದೊರಕಿಸಬೇಕು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗ್ರಾಮಗಳಲ್ಲಿ ರಿ.ಸ. ನಂಬರ್ಗಳ ಪಹಣಿ ದುರಸ್ತಿ ಇತ್ಯಾದಿ ಸಮಸ್ಯೆಗಳಿಂದ ವಿಳಂಬವಾಗುತ್ತಿದೆ. ಆದ್ಯತೆಯ ಮೇರೆಗೆ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.