ಅರಕಲಗೂಡು: ತಾಲೂಕಿನ ಬಲ ಮೇಲ್ದಂಡೆ ನಾಲೆ, ಗಂಗನನಾಳು ಏತ ನೀರಾವರಿ ಯೋಜನೆ ಹಾಗೂ ಅಡಿಕೆ ಬೊಮ್ಮನಹಳ್ಳಿ ಏತ ನೀರಾವರಿ ಯೋಜನೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕ ಎ. ಮಂಜು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎ. ಮಂಜು, ಯೋಜನೆಯ ನೀರನ್ನು ರೈತರು ಮಿತವಾಗಿ ಹಾಗೂ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಪ್ರಸ್ತುತ ಹಂತದಲ್ಲಿ ಕೆರೇಕಟ್ಟೆಗಳನ್ನು ತುಂಬಿಸುವುದಕ್ಕೆ ಆದ್ಯತೆ ನೀಡಬೇಕು. ನೀರನ್ನು ಅನಗತ್ಯವಾಗಿ ಬಳಸದೆ, ಕೆರೆಗಳಿಗೆ ನೀರು ಸಂಗ್ರಹವಾಗುವಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಮುಂದಿನ ದಿನಗಳಲ್ಲಿ ಕೆರೆಕಟ್ಟೆಗಳಲ್ಲಿ ನೀರು ಸಂಗ್ರಹವಾಗುವುದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ, ಸುತ್ತಮುತ್ತಲಿನ ಗ್ರಾಮಗಳ ಜನರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಆದರೆ ಈ ನೀರಾವರಿ ಯೋಜನೆಯ ನೀರಿನ ಮೇಲೆ ಸಂಪೂರ್ಣವಾಗಿ ಕೃಷಿ ಅವಲಂಬಿತರಾಗದೆ, ಲಭ್ಯವಿರುವ ನೀರನ್ನು ಮಿತವಾಗಿ ಮತ್ತು ವಿವೇಚನೆಯಿಂದ ಬಳಕೆ ಮಾಡಬೇಕು ಎಂದು ತಿಳಿಸಿದರು.ಯೋಜನೆಯ ಉದ್ದೇಶ ಕೆರೆಕಟ್ಟೆಗಳಿಗೆ ನೀರು ತುಂಬಿಸಿ ಜಲಮೂಲಗಳನ್ನು ಸಂರಕ್ಷಿಸುವುದಾಗಿದ್ದು, ಸಾರ್ವಜನಿಕರು ಹಾಗೂ ರೈತರು ಸಹಕರಿಸುವಂತೆ ಶಾಸಕರು ಮನವಿ ಮಾಡಿದರು.