ಅಹಿಂದ ಸಂಘಟನೆಗೆ ಶಾಸಕ ಮೇಟಿ ಹೆಗಲಾಗಿದ್ದರು

KannadaprabhaNewsNetwork |  
Published : Nov 06, 2025, 03:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ | Kannada Prabha

ಸಾರಾಂಶ

ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ಸರಳ ಸಜ್ಜನಿಕೆಯ ವ್ಯಕ್ತಿ. ಆಸೆ, ದುರಾಸೆಗಳಿದ್ದ ವ್ಯಕ್ತಿಯಾಗಿರಲಿಲ್ಲ. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಇವರ ಸಾವಿನಿಂದ ಬಡವಾಗಿದೆ ಎಂದು ಮುಖ್ಯಮಂತ್ರಿಗಳು ವಿಷಾದಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ಶಾಸಕ ಎಚ್.ವೈ.ಮೇಟಿಯವರು ನಿಷ್ಠಾವಂತ ರಾಜಕಾರಣಿಯಾಗಿದ್ದರು. ಒಂದು ವರ್ಷ ಕಿರಿಯನಾಗಿದ್ದರೂ, ನನ್ನನ್ನು ಅತ್ಯಂತ ಗೌರವದಿಂದ ಕಾಣುತ್ತಿದ್ದರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು ವಿನಯವಂತರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಎಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಬುಧವಾರ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಟಿಯವರು ಈ ಸಂದರ್ಭದಲ್ಲಿ ಇಲ್ಲದಿರುವುದು ವಿಷಾದನೀಯ. ಅವರ ಆಸೆಯಂತೆ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸ್ಥಾಪಿಸಲಾಗುವುದು. ಟೆಂಡರ್ ಕೂಡ ಈಗಾಗಲೇ ಕರೆಯಲಾಗಿದೆ. ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.

1983ರಿಂದ ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದವರು. ಅಧಿಕಾರ ಶಾಶ್ವತವಾದುದಲ್ಲ. ಜನರಿಂದ ದೊರಕುವ ಅಧಿಕಾರವನ್ನು ಜನರ ಒಳಿತಿಗಾಗಿ ಬಳಸಬೇಕು. ಬಹಳ ವಿದ್ಯಾವಂತರಲ್ಲದಿದ್ದರೂ, ರಾಜಕೀಯ ತತ್ವಗಳನ್ನು ತಪ್ಪದೇ ಪಾಲಿಸುತ್ತಿದ್ದರು. ಜನರೊಂದಿಗೆ ಬೆರೆಯುವ ಗುಣವಿದ್ದ ಮೇಟಿಯವರು ಕುರುಬ ಸಮುದಾಯದವರಾಗಿದ್ದರೂ, ಜಾತ್ಯಾತೀತ ತತ್ವದ ಪಾಲಕರಾಗಿದ್ದರು. ಎಲ್ಲ ಜಾತಿಧರ್ಮಗಳನ್ನು ಪ್ರೀತಿಯಿಂದ ಕಾಣುವ ಸ್ವಭಾವದವರಾಗಿದ್ದರು ಎಂದು ಬಣ್ಣಿಸಿದರು.

ಜನಾನುರಾಗಿದ್ರೆ ಮಾತ್ರ ಗೆಲ್ಲಲು ಸಾಧ್ಯ:

ಮೇಟಿಯವರ ನಿಧನದಿಂದ ದುಃಖವಾಗಿದೆ. ವೈಯಕ್ತಿಕವಾಗಿ ದೊಡ್ಡ ನಷ್ಟವಾಗಿದೆ. 1996ರಲ್ಲಿ ಬಾಗಲಕೋಟೆಯಲ್ಲಿ ಸಮೀಕ್ಷೆ ಮಾಡಿಸಿ, ಮೇಟಿಯವರಿಗೆ ಲೋಕಸಭೆಯಲ್ಲಿ ಸ್ಪರ್ಧಿಸಲು ನಿರ್ಧಾರವಾಗಿತ್ತು. ಆ ಸಂದರ್ಭದಲ್ಲಿ ಸಚಿವರಾಗಿದ್ದ ಮೇಟಿಯವರು, ನನ್ನ ಮಾತನ್ನು ಗೌರವಿಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಸಾಧಿಸಿದರು. ಜನಾನುರಾಗಿಯಾಗಿದ್ದರೆ ಮಾತ್ರ ಬಾಗಲಕೋಟೆ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯ. ದೇವೇಗೌಡರು ಪ್ರಧಾನಮಂತ್ರಿಗಳಾಗಲು ಇವರು ಕಾರಣಿಕರ್ತರು ಎಂದು ಸಿಎಂ ತಿಳಿಸಿದರು.

ಅವರ ಜನಪ್ರಿಯತೆ ಎಷ್ಟರ ಮಟ್ಟಿಗಿತ್ತೆಂದರೆ ಬಾಗಲಕೋಟೆಯಲ್ಲಿ ಒಬ್ಬ ಕುರುಬ ಸಮುದಾಯದವರು ಗೆಲ್ಲುವುದು ಸುಲಭದ ಮಾತಲ್ಲ. ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಶಕ್ತಿ ಅವರಲ್ಲಿತ್ತು. ಸಂಭಾವಿತ ರಾಜಕಾರಣಿ ಎಂದರೆ ಅತಿಶಯೋಕ್ತಿಯಲ್ಲ ಎಂದರು. ವೈರಿಗಳೊಂದಿಗೂ ಚೆನ್ನಾಗಿರುತ್ತಿದ್ದ ವಿಶಿಷ್ಟ ಗುಣಗಳಿದ್ದ ರಾಜಕಾರಣಿಯಾಗಿದ್ದರು. ಪಂಚಾಯತಿ ಹಾಗೂ ಎಪಿಎಂಸಿ ಅಧ್ಯಕ್ಷರಾಗಿ, ಸಚಿವ ಸ್ಥಾನವನ್ನು ಅಲಂಕರಿಸುವುದು ಸುಲಭದ ಮಾತಲ್ಲ. ಹಂತ ಹಂತವಾಗಿ ಮಟಟ್ಟಿಲುಗಳನ್ನು ಏರಿಕೊಂಡು ಬೆಳೆದವರು ಎಂದರು.

ಸರಳ ಸಜ್ಜನಿಕೆಯ ವ್ಯಕ್ತಿ:

ಈ ಬಾರಿ ಮುಖ್ಯಮಂತ್ರಿಯಾದ ಮೇಲೆ ನನ್ನ ಬಳಿ ಅಪರೂಪಕ್ಕೆ ಬರುತ್ತಿದ್ದರು. ರಾಜಕೀಯ ಕ್ಷೇತ್ರಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ನಷ್ಟವಾಗಿದೆ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ಸರಳ ಸಜ್ಜನಿಕೆಯ ವ್ಯಕ್ತಿ. ಆಸೆ, ದುರಾಸೆಗಳಿದ್ದ ವ್ಯಕ್ತಿಯಾಗಿರಲಿಲ್ಲ. ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಇವರ ಸಾವಿನಿಂದ ಬಡವಾಗಿದೆ ಎಂದು ಮುಖ್ಯಮಂತ್ರಿಗಳು ವಿಷಾದಿಸಿದರು.

ಹುಟ್ಟು ಆಕಸ್ಮಿಕ, ಸಾವು ಖಚಿತ, ಇವೆರಡರ ಮಧ್ಯೆ ಇರುವ ಜೀವನವನ್ನು ಸಾರ್ಥಕ ಮಾಡಿಕೊಳ್ಳುವುದು ಮುಖ್ಯ. ಮೇಟಿಯವರು ಸಾರ್ಥಕ ಜೀವನ ನಡೆಸಿದ್ದಾರೆ. ಅವರ ಆದರ್ಶಗಳು ಇತರರಿಗೆ ಮಾದರಿಯಾಗಲಿ. ಇನ್ನೊಬ್ಬ ಮೇಟಿ ಹುಟ್ಟುವುದು ಕಷ್ಟ. ಮೇಟಿಗೆ ಮೇಟಿಯೇ ಸಾಟಿ. ಜನರ ಆಶೀರ್ವಾದದಿಂದ ಇಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಮೇಟಿಯವರ ಅಭಿಮಾನಿಗಳು, ಸ್ನೇಹಿತರಿಗೆ ಹಾಗೂ ಅವರ ಕುಟುಂಬದವರಿಗೆ ಅವರ ಸಾವಿನಿಂದಾಗಿರುವ ದುಖ:ವನ್ನು ಭರಿಸುವ ಶಕ್ತಿಯನ್ನು ಕೊಡಲಿ, ಅವರ ಆತ್ಮಕ್ಕೆಚಿರ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವರ್ತಮಾನದೆಡೆಗೆ ಸಂಶೋಧನಾಸಕ್ತಿ ಕೇಂದ್ರಿತವಾಗಲಿ: ಡಾ. ಗಿರೀಶ ಕುಮಾರ
ಆಹಾರ ಸುರಕ್ಷತೆ: 9 ಪ್ರಕರಣಗಳಲ್ಲಿ ₹1.30 ಲಕ್ಷ ದಂಡ