ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಔರಾದ್‌ ಪದವಿ ಕಾಲೇಜಿಗೆ ಶಾಸಕ ಪ್ರಭು ಚವ್ಹಾಣ್‌ ಭೇಟಿ

KannadaprabhaNewsNetwork | Published : Dec 21, 2023 1:15 AM

ಕಾಲೇಜಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ, ಸಿಬ್ಬಂದಿಗೆ ಸಮಯ ಪಾಲನೆ, ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ

ಕನ್ನಡಪ್ರಭ ವಾರ್ತೆ ಔರಾದ್

ಶಾಸಕ ಪ್ರಭು.ಬಿ ಚವ್ಹಾಣ್‌ ಇತ್ತೀಚೆಗೆ ಔರಾದ್‌(ಬಿ) ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ದಿಢೀರ್ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು.

ಈ ವೇಳೆ ಕಾಲೇಜು ಆವರಣದಲ್ಲಿ ಶಾಸಕರು ಸಂಚರಿಸಿ, ಕಾಲೇಜಿನ ವ್ಯವಸ್ಥೆಯನ್ನು ವೀಕ್ಷಿಸಿದರು. ವಿದ್ಯಾರ್ಥಿಗಳು ಕಾಲೇಜಿನಲ್ಲಿರುವ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಾಗ ಕಾಲೇಜು ಮುಖ್ಯಸ್ಥರ ಬಗ್ಗೆ ಕೋಪಗೊಂಡರು. ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸಲಾಗುತ್ತದೆ. ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ತಿಳಿಸಿದರು.

ಕಾಲೇಜು ಆವರಣವನ್ನು ಶುಚಿಯಾಗಿ ಇಡಬೇಕು. ತರಗತಿಗಳನ್ನು ಸರಿಯಾಗಿ ನಡೆಸಬೇಕು. ಪ್ರಾಚಾರ್ಯರು ಒಳಗೊಂಡು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಮಯ ಪಾಲನೆ ಮಾಡಬೇಕು. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಸಮಸ್ಯೆಗಳು ಬಾರದ ರೀತಿಯಲ್ಲಿ ಕೆಲಸ ಮಾಡಬೇಕೆಂದು ಕಾಲೇಜಿನ ಸಿಬ್ಬಂದಿಗೆ ಸೂಚಿಸಿದರು.

ಕಾಮಗಾರಿಯ ಬಗ್ಗೆ ಬೇಸರ: ಕಾಲೇಜು ಆವರಣದಲ್ಲಿ ನಡೆಯುತ್ತಿರುವ ಹೆಚ್ಚುವರಿ ತರಗತಿ ಕೋಣೆಗಳಿಗೆ ಭೇಟಿ ನೀಡಿದ ಶಾಸಕರು, ಕಾಮಗಾರಿಯ ಕುರಿತು ಗುತ್ತಿಗೆದಾರರ ವಿರುದ್ದ ತೀವ್ರ ಬೇಸರ ವ್ಯಕ್ತಪಡಿಸಿದರು.

ಕ್ಷೇತ್ರದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರು.70 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ತರಗತಿ ಕೋಣೆಗಳನ್ನು ನಿರ್ಮಿಸಲಾಗುತ್ತಿದೆ. ಎಲ್ಲ ಕೋಣೆಗಳು ಯೋಜನೆಯಂತೆ ನಿರ್ಮಾಣವಾಗಬೇಕು. ಯಾವುದೆ ರೀತಿಯ ಲೋಪಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಕಾಮಗಾರಿ ಗುಣಮಟ್ಟದಿಂದ ಮಾಡಬೇಕೆಂದು ಸೂಚಿಸಿದರು.

ಕ್ಷೇತ್ರದಲ್ಲಿ ಶಿಕ್ಷಣದ ಏಳಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕಾಲೇಜಿಗೆ ಉತ್ತಮ ಕಟ್ಟಡ ನಿರ್ಮಿಸಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಹೆಚ್ಚುವರಿ ತರಗತಿ ಕೋಣೆಗಳನ್ನು ನಿರ್ಮಿಸಲಾಗುತ್ತಿದೆ. ಕ್ಷೇತ್ರದ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುವ ಕೆಲಸ ಸರಿಯಾಗಿ ಆಗಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಆಗಾಗ ಭೇಟಿ ನೀಡುತ್ತಾ, ಕಾಮಗಾರಿ ಗುಣಮಟ್ಟದಿಂದ ಆಗುವಂತೆ ನೋಡಿಕೊಳ್ಳಬೇಕು. ಬೇಜವಾಬ್ದಾರಿತನದಿಂದ ನಡೆದುಕೊಂಡಲ್ಲಿ ಯಾವುದೆ ಕಾರಣಕ್ಕೂ ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್‌ ಮಲಶೆಟ್ಟಿ ಚಿದ್ರೆ, ವಿವಿಧ ಅಧಿಕಾರಿಗಳು, ಕಾಲೇಜು ಸಿಬ್ಬಂದಿ ಹಾಗೂ ಮುಖಂಡರು ಉಪಸ್ಥಿತರಿದ್ದರು.