ಹಾಸ್ಟೆಲ್‌ ಸಮಸ್ಯೆಗಳ ದೂರಿಗೆ ಶಾಸಕರ ಫೋನ್‌ ನಂಬರ್‌

KannadaprabhaNewsNetwork |  
Published : Jul 28, 2026, 01:15 AM IST
ದದದ | Kannada Prabha

ಸಾರಾಂಶ

ಚಿಕ್ಕಮಗಳೂರುಪ್ರತಿ ಹಾಸ್ಟೆಲ್‌ನಲ್ಲಿ ಶಾಸಕರು, ಜಿಲ್ಲಾ ಪಂಚಾಯಿತಿ ಸಿಇಒ, ತಾಲೂಕು ಪಂಚಾಯಿತಿ ಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಯ ಫೋನ್‌ ನಂಬರ್‌ಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕೆಂದು ಚಿಕ್ಕಮಗಳೂರು ಶಾಸಕ ಎಚ್‌.ಡಿ.ತಮ್ಮಯ್ಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ವಿವಿಧ ಇಲಾಖೆಗಳ ವಸತಿ ಶಾಲೆ, ವಸತಿ ನಿಲಯಗಳ ಕಾರ್ಯನಿರ್ವಹಣೆ - ಕುಂದು ಕೊರತೆಗಳ ಪರಿಶೀಲನಾ ಸಭೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಪ್ರತಿ ಹಾಸ್ಟೆಲ್‌ನಲ್ಲಿ ಶಾಸಕರು, ಜಿಲ್ಲಾ ಪಂಚಾಯಿತಿ ಸಿಇಒ, ತಾಲೂಕು ಪಂಚಾಯಿತಿ ಇಒ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಯ ಫೋನ್‌ ನಂಬರ್‌ಗಳನ್ನು ಕಡ್ಡಾಯವಾಗಿ ಪ್ರಕಟಿಸಬೇಕೆಂದು ಚಿಕ್ಕಮಗಳೂರು ಶಾಸಕ ಎಚ್‌.ಡಿ.ತಮ್ಮಯ್ಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ಚಿಕ್ಕಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಸೋಮವಾರ ನಡೆದ ವಿವಿಧ ಇಲಾಖೆಗಳ ವಸತಿ ಶಾಲೆ ಹಾಗೂ ವಸತಿ ನಿಲಯಗಳ ಕಾರ್ಯನಿರ್ವಹಣೆ ಮತ್ತು ಕುಂದು ಕೊರತೆಗಳ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಪ್ರತಿ ಹಾಸ್ಟೆಲ್‌ಗಳಿಗೆ ನೇಮಕ ಮಾಡಲಾಗಿರುವ ನೋಡಲ್‌ ಅಧಿಕಾರಿಗಳು ನಿಯಮಿತವಾಗಿ ಪರಿಶೀಲನೆ ನಡೆಸಿ ಜಿಪಂ ಸಿಇಒ ಅವರಿಗೆ ವರದಿ ನೀಡಬೇಕು. ಜತೆಗೆ, ಜಿಪಂ ಸಿಇಒ, ತಾಪಂ ಇಒ ಹಾಗೂ ಹಾಸ್ಟಲ್‌ ನಿರ್ವಹಣೆ ಮಾಡುವ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ಇದೇ ವೇಳೆ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಉಂಟಾಗುವ ಸಮಸ್ಯೆ, ತೊಂದರೆಗಳ ಬಗ್ಗೆ ದೂರು ನೀಡಲು ಪ್ರತಿ ಹಾಸ್ಟೆಲ್‌ ನಲ್ಲಿ ಶಾಸಕರು, ಜಿಪಂ ಸಿಇಒ, ತಾಪಂ ಇಒ ಹಾಗೂ ಆಯಾ ಹಾಸ್ಟಲ್‌ ನಿರ್ವಹಣೆ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಫೋನ್‌ ನಂಬರ್‌ಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು. ದೂರು ಕೇಳಿ ಬಂದ ತಕ್ಷಣ ಭೇಟಿ ನೀಡಿ ಪರಿಶೀಲಿಸಲಾಗುವುದು. ಕರ್ತವ್ಯ ಲೋಪ ಕಂಡು ಬಂದರೆ ತಕ್ಷಣ ಜಿಪಂ ಸಿಇಒ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಮಕ್ಕಳಿಗೆ ಒಳ್ಳೆಯ ಆಹಾರ ಕೊಡಬೇಕು. 6ನೇ ತರಗತಿ ಪ್ರವೇಶ ಪಡೆವ ಮಕ್ಕಳು ಆಗ ತಾನೇ ಮನೆಯಿಂದ ಹೊರಗೆ ಬಂದಿರುತ್ತಾರೆ. ಹಾಗಾಗಿ ಸೂಕ್ಷ್ಮವಾಗಿ ಅವರನ್ನು ಗಮನಿಸಬೇಕು. ಇನ್ನೂ 9 ಹಾಗೂ 10 ನೇ ತರಗತಿ ಮಕ್ಕಳ ಮನಸ್ಸು ಚಂಚಲವಾಗಿರುತ್ತದೆ. ಅವರ ಮನಸ್ಸು ಶಿಕ್ಷಣದ ಕಡೆ ಗಮನಹರಿಸುವಂತೆ ವಸತಿ ಶಾಲೆ ಸಿಬ್ಬಂದಿ ನೋಡಿಕೊಳ್ಳಬೇಕು ಎಂದರು

ಜಿಪಂ ಸಿಇಒ ಎಚ್.ಎಸ್. ಕೀರ್ತನಾ ಮಾತನಾಡಿ ಕೆಲವು ವಸತಿ ಶಾಲೆಗಳ ಕಟ್ಟಡಗಳಿಗೆ ಸುಣ್ಣ ಬಣ್ಣ ಇಲ್ಲ, ಮೂಲಸೌಕರ್ಯ ಸೌಲಭ್ಯದ ಕೊರತೆ ಇದೆ ಎಂದು ದೂರುಗಳು ಕೇಳಿ ಬರುತ್ತಿವೆ. ಇದರ ಜೊತೆಗೆ ಊಟ ಚೆನ್ನಾಗಿಲ್ಲ ಎಂದು ಮಾತುಗಳು ಕೇಳಿ ಬರುತ್ತಿವೆ. ಮಕ್ಕಳಿಗೆ ನೀಡುತ್ತಿರುವ ಆಹಾರದ ಮೆನುವನ್ನು ನಾಮಫಲಕದಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಆಹಾರ ಪದಾರ್ಥ ಕೆಡದಂತೆ ದಾಸ್ತಾನು ಮಾಡಿಕೊಳ್ಳಲು ಕೊಟ್ಟಿರುವ ಫ್ರೀಜ್ ಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್‌ ಸಮಸ್ಯೆ, ಮೂಲಸೌಕರ್ಯ ಸಮಸ್ಯೆ ಬಗ್ಗೆ ಕೆಲವು ಹಾಸ್ಟಲ್‌ ವಾರ್ಡನ್‌ಗಳು ಸಭೆ ಗಮನಕ್ಕೆ ತಂದರು. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಶಾಸಕರು ಸ್ಥಳದಲ್ಲಿಯೇ ನಿರ್ದೇಶಿಸಿದರು.ಸಭೆಯಲ್ಲಿ ಚಿಕ್ಕಮಗಳೂರು ತಾಪಂ ಇಒ ವಿಜಯಕುಮಾರ್, ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

---ಬಾಕ್ಸ್‌----

ಹಾಸ್ಟೆಲ್‌ ಆವರಣದಲ್ಲಿ ಕೃಷಿ ಮಾಡಿ: ಶಾಸಕ ತಮ್ಮಯ್ಯ ಸಲಹೆ

ಸೂಕ್ತ ಸ್ಥಳಾವಕಾಶ ಹಾಗೂ ನೀರಿನ ಲಭ್ಯತೆ ಇರುವ ಹಾಸ್ಟೆಲ್‌ಗಳ ಆವರಣದಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಿ. ಮಕ್ಕಳಿಗೆ ಕೃಷಿ ಚಟುವಟಿಕೆ ಬಗ್ಗೆ ಈ ಮೂಲಕ ಅರಿವು ಮೂಡಿಸುವ ಕೆಲಸವಾಗಲಿದೆ. ಜತೆಗೆ, ಊಟಕ್ಕೆ ತಾಜಾ ತರಕಾರಿ, ಸೊಪ್ಪು ದೊರೆಯಲಿದೆ. ಮಕ್ಕಳ ಆರೋಗ್ಯಕ್ಕೂ ಉತ್ತಮ ಎಂದು ಶಾಸಕ ತಮ್ಮಯ್ಯ ಸಲಹೆ ನೀಡಿದರು.

---ಕೋಟ್‌--ಸೇವಾ ಭಾವನೆಯಿಂದ ಕೆಲಸ ಮಾಡಿದರೆ ಮಕ್ಕಳಿಗೆ ನ್ಯಾಯ ಸಿಗಲಿದೆ. ವಸತಿ ಶಾಲೆ ಮಕ್ಕಳನ್ನು ಮನೆ ಮಕ್ಕಳಂತೆ ನೋಡಿಕೊಳ್ಳಬೇಕು-ಎಚ್‌.ಡಿ. ತಮ್ಮಯ್ಯ ಶಾಸಕ, ಚಿಕ್ಕಮಗಳೂರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂಗನವಾಡಿ ಕಾರ್ಯಕರ್ತೆ ನೇಮಿಸಿಸಲು ಪೋಷಕರ ಒತ್ತಾಯ
೩೦-೩೧ ರಂದು ವಿಸ್ಮಯ ಕೀಟ ಪ್ರಪಂಚ ಪ್ರದರ್ಶನ