ಪ್ರೀತಂಗೌಡ ಟೀಕೆಗೆ ಶಾಸಕ ಸ್ವರೂಪ್‌ ತೀಕ್ಷ್ಣ ಪ್ರತಿಕ್ರಿಯೆ

KannadaprabhaNewsNetwork |  
Published : Jul 01, 2026, 01:30 AM IST
30ಎಚ್ಎಸ್ಎನ್15 | Kannada Prabha

ಸಾರಾಂಶ

ಜನರ ಆಶೀರ್ವಾದದಿಂದ ೮೫ ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗೆದ್ದಿದ್ದೇನೆ. ನಾನು ಲಾಟರಿ ಶಾಸಕನಲ್ಲ, ಜನರ ತೀರ್ಪಿನಿಂದ ಶಾಸಕನಾಗಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ತಂದೆ ನಾಲ್ಕು ಬಾರಿ ಶಾಸಕರಾಗಿ, ನಗರಸಭೆ ಸದಸ್ಯ ಹಾಗೂ ಅಧ್ಯಕ್ಷರಾಗಿಯೂ ಜನಸೇವೆ ಮಾಡಿದ್ದಾರೆ. ನಾನು ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಹೀಗಾಗಿ ಸಾರ್ವಜನಿಕ ಜೀವನದ ಅನುಭವ ನನಗಿದೆ. ನಮ್ಮ ಕುಟುಂಬದ ರಾಜಕೀಯ ಇತಿಹಾಸ ಗೊತ್ತಿಲ್ಲದವರು ಇಂತಹ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಹಾಸನ

ತಮ್ಮನ್ನು ಲಾಟರಿ ಶಾಸಕ ಎಂದು ಟೀಕಿಸಿದ್ದ ಮಾಜಿ ಶಾಸಕ ಪ್ರೀತಂ ಗೌಡ ಅವರಿಗೆ ಹಾಸನ ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್ ತೀಕ್ಷ್ಣ ತಿರುಗೇಟು ನೀಡಿದ್ದು, ಜನರ ಆಶೀರ್ವಾದದಿಂದ ೮೫ ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗೆದ್ದಿದ್ದೇನೆ. ನಾನು ಲಾಟರಿ ಶಾಸಕನಲ್ಲ, ಜನರ ತೀರ್ಪಿನಿಂದ ಶಾಸಕನಾಗಿದ್ದೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ನಾನು ಇನ್ನೂ ಅಂಬೆಗಾಲು ಇಡುತ್ತಿದ್ದೇನೆ. ರಾಜ್ಯ ರಾಜಕೀಯದ ಬಗ್ಗೆ ಮಾತನಾಡುವಷ್ಟು ದೊಡ್ಡ ನಾಯಕನಲ್ಲ. ನನ್ನ ಆದ್ಯತೆ ಹಾಸನ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ. ಕ್ಷೇತ್ರದ ಜನರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳುವುದೇ ನನ್ನ ಮೊದಲ ಆದ್ಯತೆ. ೮೫ ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗೆದ್ದಿರುವುದನ್ನೇ ಲಾಟರಿ ಎಂದು ಹೇಳುವುದಾದರೆ, ಹೌದು, ಅದು ಜನರ ಪ್ರೀತಿಯ ಲಾಟರಿ. ಆದರೆ ನಾನು ಲಾಟರಿ ಆಡಿದವನಲ್ಲ. ಲಾಟರಿ ಬಗ್ಗೆ ಅದರ ಆಳ-ಅಗಲ ಗೊತ್ತಿರುವವರು ಮಾತನಾಡುತ್ತಾರೆ. ನನಗೆ ಅದರ ಬಗ್ಗೆ ಯಾವುದೇ ಅನುಭವವಿಲ್ಲ. ನಾನು ಜೀವನದಲ್ಲಿ ಲಾಟರಿ ಆಡಿಲ್ಲ. ಜನರ ಆಶೀರ್ವಾದ ಮತ್ತು ನನ್ನ ತಂದೆಯ ಮಾರ್ಗದರ್ಶನದಿಂದಲೇ ಶಾಸಕನಾಗಿದ್ದೇನೆ ಎಂದು ತಿರುಗೇಟು ನೀಡಿದರು. ತಮ್ಮ ರಾಜಕೀಯ ಹಿನ್ನೆಲೆಯನ್ನು ವಿವರಿಸಿದ ಸ್ವರೂಪ್ ಪ್ರಕಾಶ್, "ನಮ್ಮ ಕುಟುಂಬ ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿದೆ. ನಮ್ಮ ತಾತ ಪುರಸಭೆ ಸದಸ್ಯರಾಗಿದ್ದರು. ತಂದೆ ನಾಲ್ಕು ಬಾರಿ ಶಾಸಕರಾಗಿ, ನಗರಸಭೆ ಸದಸ್ಯ ಹಾಗೂ ಅಧ್ಯಕ್ಷರಾಗಿಯೂ ಜನಸೇವೆ ಮಾಡಿದ್ದಾರೆ. ನಾನು ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಉಪಾಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಹೀಗಾಗಿ ಸಾರ್ವಜನಿಕ ಜೀವನದ ಅನುಭವ ನನಗಿದೆ. ನಮ್ಮ ಕುಟುಂಬದ ರಾಜಕೀಯ ಇತಿಹಾಸ ಗೊತ್ತಿಲ್ಲದವರು ಇಂತಹ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

ಬಹಳ ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಪ್ರವೇಶ ಮಾಡಿದ್ದೇನೆ. ಹಾಸನ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಜನರ ನಾಡಿಮಿಡಿತ ನನಗೆ ಗೊತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಾನು ಮಾಡಿರುವ ಪ್ರತಿಯೊಂದು ಕಾಮಗಾರಿಯ ಸಂಪೂರ್ಣ ಅಂಕಿ-ಅಂಶವನ್ನು ಸಾರ್ವಜನಿಕರ ಮುಂದೆ ಇಡುತ್ತೇನೆ. ಟೀಕೆಗಳಿಗೆ ಮಾತಿನಲ್ಲಿ ಅಲ್ಲ, ಅಭಿವೃದ್ಧಿ ಕೆಲಸಗಳ ಮೂಲಕ ಉತ್ತರ ನೀಡುತ್ತೇನೆ ಎಂದು ಟಾಂಗ್ ನೀಡಿದರು.

ಮೈತ್ರಿ ಧರ್ಮ ಪಾಲಿಸುತ್ತಿದ್ದೇನೆ:

ಮೈತ್ರಿ ರಾಜಕೀಯದ ಬಗ್ಗೆ ಮಾತನಾಡಿದ ಅವರು, ಇದುವರೆಗೂ ನಾನು ಮೈತ್ರಿ ಧರ್ಮದ ವಿಚಾರವನ್ನು ಎಲ್ಲೂ ಮಾತನಾಡಿಲ್ಲ. ಟಿಕೆಟ್ ನನಗೆ ಎಂದು ನಾನು ಹೇಳಿಲ್ಲ. ಮೈತ್ರಿ ಧರ್ಮ ಏನು ಪಾಲನೆ ಮಾಡಬೇಕು ನಾನು ಮಾಡುತ್ತಿದ್ದೇನೆ. ಟಿಕೆಟ್ ವಿಚಾರ ಬಂದಾಗ ಮುಂದೆ ನೋಡೊಣ. ನಾನು ಕುಮಾರಸ್ವಾಮಿ ಮತ್ತು ರೇವಣ್ಣನವರಿಗೆ ದಕ್ಕೆ ತರುವ ಕೆಲಸ ಮಾಡುವುದಿಲ್ಲ. ನಾನು ಜೆಡಿಎಸ್ ಪಕ್ಷದ ಶಿಸ್ತಿನ ಕಾರ್ಯಕರ್ತ. ಮೈತ್ರಿ ಧರ್ಮ ಪಾಲನೆ ಮಾಡುವುದು ನನ್ನ ಜವಾಬ್ದಾರಿ. ಮೈತ್ರಿಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ನಾನು ಮಾಡುವುದಿಲ್ಲ. ನಮ್ಮ ಹಿರಿಯರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಶಾಸಕ ಎಚ್.ಡಿ. ರೇವಣ್ಣ ಅವರು ನಮಗೆ ರಾಜಕೀಯ ಮೌಲ್ಯಗಳನ್ನು ಕಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲೇ ನಾನು ರಾಜಕೀಯ ಮಾಡುತ್ತಿದ್ದೇನೆ ಎಂದರು.

ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮೈತ್ರಿ ಧರ್ಮ ಪಾಲನೆ ವಿಚಾರ ಪ್ರಸ್ತಾಪಿಸಿದ ಅವರು, ಯಾರು ಮೈತ್ರಿ ಧರ್ಮ ಪಾಲನೆ ಮಾಡಿದ್ದಾರೆ, ಯಾರು ಮಾಡಿಲ್ಲ ಎಂಬುದು ಎಲ್ಲರಿಗೂ ಗೊತ್ತಿದೆ. ಅಗತ್ಯವಿದ್ದರೆ ಧರ್ಮಸ್ಥಳಕ್ಕೆ ಹೋಗಿ ಪ್ರಮಾಣ ಮಾಡಲಿ. ವಿಜಯೇಂದ್ರ ಅವರು ಈಗಾಗಲೇ ಆಣೆ ಮಾಡಿ ಬಂದಿದ್ದಾರೆ. ನನ್ನ ಬಗ್ಗೆ ಮಾತನಾಡುವವರೂ ಧರ್ಮಸ್ಥಳಕ್ಕೆ ಹೋಗಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡಿದ್ದಾರೆಯೇ ಎಂಬುದರ ಬಗ್ಗೆ ಆಣೆ ಮಾಡಲಿ. ಸತ್ಯ ಜನರ ಮುಂದೆ ಬರಬೇಕು ಎಂದು ಸವಾಲು ಹಾಕಿದರು.

ಮುಂದಿನ ವಿಧಾನಸಭೆ ಚುನಾವಣೆಯ ಟಿಕೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಈಗಲೇ ಟಿಕೆಟ್ ರಾಜಕೀಯದ ಬಗ್ಗೆ ಮಾತನಾಡುವ ಅಗತ್ಯವಿಲ್ಲ. ಚುನಾವಣೆ ಬಂದಾಗ ಪಕ್ಷದ ನಾಯಕತ್ವ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ನಾನು ಟಿಕೆಟ್ ನನಗೇ ಬೇಕು ಎಂದು ಎಲ್ಲಿಯೂ ಹೇಳಿಲ್ಲ. ಪಕ್ಷದ ತೀರ್ಮಾನವೇ ಅಂತಿಮ. ನನ್ನ ಗಮನ ಕ್ಷೇತ್ರದ ಅಭಿವೃದ್ಧಿಯ ಮೇಲಿದೆ ಎಂದು ಹೇಳಿದರು. ನಾನು ತಾಳ್ಮೆಯಿಂದ ರಾಜಕೀಯ ಮಾಡುವ ವ್ಯಕ್ತಿ. ಉದ್ವೇಗಕ್ಕೆ ಒಳಗಾಗುವುದಿಲ್ಲ. ವೈಯಕ್ತಿಕ ಆರೋಪ-ಪ್ರತ್ಯಾರೋಪಗಳಿಗೆ ಹೆಚ್ಚಿನ ಮಹತ್ವ ಕೊಡುವುದಿಲ್ಲ. ಜನರು ನನ್ನನ್ನು ಐದು ವರ್ಷ ಸೇವೆ ಮಾಡಲು ಆಯ್ಕೆ ಮಾಡಿದ್ದಾರೆ. ಅವರಿಗೆ ಕೊಟ್ಟ ಮಾತಿನಂತೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇನೆ. ನನಗೆ ಮತ ಹಾಕಿದವರಿಗೂ, ಮತ ಹಾಕದವರಿಗೂ ನಾನು ಶಾಸಕನೇ. ಎಲ್ಲ ವರ್ಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಸ್ವರೂಪ್ ಪ್ರಕಾಶ್ ಹೇಳಿದರು.

ಇದೇ ವೇಳೆ ಜೆಡಿಎಸ್ ಮುಖಂಡರಾದ ಬಿದರಿಕೆರೆ ಜಯರಾಮ್, ಹೊಂಗೆರೆ ರಘು, ಸುರೇಶ್, ಇತುರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು: ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ
ಸರ್ಕಾರಿ ಶಾಲೆ ಸುಸಜ್ಜಿತ ಸಭಾಂಗಣ ನಿರ್ಮಾಣಕ್ಕೆ ಚಾಲನೆ