ಶಾಸಕರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸಿ, ಅವರು ಬರುವುದಕ್ಕೂ ಮುನ್ನವೇ ಕಾರ್ಯಕ್ರಮ ಉದ್ಘಾಟಿಸಿ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ. ಈ ಮೂಲಕ ತಹಸೀಲ್ದಾರ್ ಶಾಸಕರ ತೇಜೊವಧೆ ಹಾಗೂ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಂಡಲದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಹುಮನಾಬಾದ್
ಶಾಸಕರನ್ನು ಕಾರ್ಯಕ್ರಮಕ್ಕೆ ಅಹ್ವಾನಿಸಿ, ಅವರು ಬರುವುದಕ್ಕೂ ಮುನ್ನವೇ ಕಾರ್ಯಕ್ರಮ ಉದ್ಘಾಟಿಸಿ ಲ್ಯಾಪ್ ಟಾಪ್ ವಿತರಣೆ ಮಾಡಲಾಗಿದೆ. ಈ ಮೂಲಕ ತಹಸೀಲ್ದಾರ್ ಶಾಸಕರ ತೇಜೊವಧೆ ಹಾಗೂ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಂಡಲದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಬೆಳಿಗ್ಗೆ ಸುಮಾರು 15 ನಿಮಿಷಗಳ ಕಾಲ ರಸ್ತೆ ತಡೆ ನಡೆಸುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರವನ್ನು ಬಸವಕಲ್ಯಾಣ ಸಹಾಯಕ ಆಯುಕ್ತ ಮುಕುಲ್ ಜೈನ್ ಅವರಿಗೆ ಸಲ್ಲಿಸಿದರು.
ಜುಲೈ 22 ರಂದು ಕಂದಾಯ ಇಲಾಖೆಯ ಇ-ಸವಲತ್ತು ಕಾರ್ಯಕ್ರಮದಡಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮದಲ್ಲಿ ಶಾಸಕರಿಗೆ ಅರ್ಧ ಗಂಟೆ ತಡವಾಗಿ ಬರುವಂತೆ ಹೇಳಿದ ತಹಸೀಲ್ದಾರ್ ಬಳಿಕ ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ಶಾಸಕರು ಬರುವ ಮುಂಚೆ ಕಾರ್ಯಕ್ರಮ ಉದ್ಘಾಟಿಸಿ ಲ್ಯಾಪ್ಟಾಪ್ ವಿತರಣೆ ಮಾಡಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದಾರೆ.
ಈ ಕುರಿತು ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್ ತಹಸೀಲ್ದಾರ್ ಅವರನ್ನು ಪ್ರಶ್ನಿಸಿದರೆ, ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಪರಿಷತ್ ಸದಸ್ಯರು ಕೇವಲ ಔಪಚಾರಿಕವಾಗಿ ಮಾತನಾಡುತ್ತಿದ್ದಾರೆ ಎಂದು ತಹಸೀಲ್ದಾರರು ಉಡಾಫೆ ಉತ್ತರ ನೀಡಿದ್ದಾರೆ ಎಂದು ಹುಮನಾಬಾದ್ ತಹಸೀಲ್ದಾರ್ ಅಂಜುಮ್ ತಬಸುಮ್ ಹಾಗೂ ಚಿಟಗುಪ್ಪ ತಹಸೀಲ್ದಾರ ಮಂಜುನಾಥ ಪಂಚಾಳ ವಿರುದ್ಧ ಪ್ರತಿಭಟನಾಕರರು ಕಿಡಿಕಾರಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, ಈ ರೀತಿ ಶಾಸಕರ ವಿರುದ್ಧ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಅನೇಕ ಉದಾಹರಣೆಗಳಿವೆ. ಕೂಡಲೇ ಹುಮನಾಬಾದ್ ಹಾಗೂ ಚಿಟಗುಪ್ಪ ತಹಸೀಲ್ದಾರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡುವುದಾಗಿ ಸಂಬಂಧಿತ ಅಧಿಕಾರಿಗಳಿಗೆ ಪ್ರತಿಭಟನೆಯ ಮೂಲಕ ಎಚ್ಚರಿಕೆ ನೀಡಿದರು.
ಡಾ.ಅಂಬೇಡ್ಕರ ನಿಗಮದ ಮಾಜಿ ಅಧ್ಯಕ್ಷ ಬಸವರಾಜ ಆರ್ಯ ಮಾತನಾಡಿ, ತಹಸೀಲ್ದಾರರು ಸಂವಿಧಾನ ಮೇಲೆ ಶಪಥ ಮಾಡಿದ್ದು, ಇದನ್ನು ಅರ್ಥ ಮಾಡಿಕೊಂಡು ತಹಸೀಲ್ದಾರ ಅವರು ಬಹಿರಂಗ ಕ್ಷಮೆಯಾಚಿಸಬೇಕು. ಸಂವಿಧಾನ ಪ್ರಕಾರ ಸರ್ಕಾರ ಕ್ರಮ ಜರುಗಿಸಿ. ಸಂವಿಧಾನ ಆಸೆಗಳನ್ನು ಉಳಿಸಬೇಕು ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.