ಅಪರಾಧ ನಿಯಂತ್ರಣದಲ್ಲಿ ಆಧುನಿಕ ತಂತ್ರಜ್ಞಾನ ಪರಿಣಾಮಕಾರಿ ಸಾಧನ: ಡಾ. ಎಂ.ಎ. ಸಲೀಂ

KannadaprabhaNewsNetwork |  
Published : Apr 08, 2026, 03:15 AM IST
ಬಳ್ಳಾರಿಯ ಡಿ.ಎ.ಆರ್ ಪೊಲೀಸ್ ವಸತಿ ಗೃಹಗಳ ಸಂಕೀರ್ಣಕ್ಕೆ ಭೇಟಿ ನೀಡಿದ ಡಿಜಿಪಿ ಡಾ.ಎಂ.ಎ. ಸಲೀಂ ಅವರು, ಅಲ್ಲಿ ವಾಸಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುಟುಂಬದವರ ಕುಂದುಕೊರತೆಗಳನ್ನು ಆಲಿಸಿದರು. | Kannada Prabha

ಸಾರಾಂಶ

ಆಧುನಿಕ ತಂತ್ರಜ್ಞಾನ ಅಪರಾಧ ನಿಯಂತ್ರಣದಲ್ಲಿ ಪರಿಣಾಮಕಾರಿ ಸಾಧನವಾಗಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸುಧಾರಿತ ವ್ಯವಸ್ಥೆಗಳ ಮೂಲಕ ಸಾರ್ವಜನಿಕರ ಸುರಕ್ಷತೆ ಹೆಚ್ಚಿಸಲು ಸಹಕಾರಿಯಾಗಿದೆ ಡಿಜಿಪಿ ಡಾ. ಎಂ.ಎ. ಸಲೀಂ ತಿಳಿಸಿದರು.

ಬಳ್ಳಾರಿ: ಆಧುನಿಕ ತಂತ್ರಜ್ಞಾನ ಅಪರಾಧ ನಿಯಂತ್ರಣದಲ್ಲಿ ಪರಿಣಾಮಕಾರಿ ಸಾಧನವಾಗಿದ್ದು, ಭವಿಷ್ಯದಲ್ಲಿ ಇನ್ನಷ್ಟು ಸುಧಾರಿತ ವ್ಯವಸ್ಥೆಗಳ ಮೂಲಕ ಸಾರ್ವಜನಿಕರ ಸುರಕ್ಷತೆ ಹೆಚ್ಚಿಸಲು ಸಹಕಾರಿಯಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಹಾಗೂ ಮಹಾನಿರೀಕ್ಷಕ ಡಾ. ಎಂ.ಎ. ಸಲೀಂ ತಿಳಿಸಿದರು.

ನಗರದ ಜಿಲ್ಲಾ ಪೊಲೀಸ್ ಕಚೇರಿಯ ಸಭಾಂಗಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಮರ್ಶನಾ ಸಭೆ ನಡೆಸಿ ಮಾತನಾಡಿದರು.

ಸಿಸಿ ಟಿವಿ ಕ್ಯಾಮೆರಾಗಳು, ಡ್ರೋನ್ ಮೇಲ್ವಿಚಾರಣೆ, ಫೇಸ್ ರೆಕಗ್ನಿಷನ್ ವ್ಯವಸ್ಥೆ, ಸೈಬರ್ ನಿಗಾ ತಂತ್ರಜ್ಞಾನ ಇವುಗಳ ಬಳಕೆಯಿಂದ ಅಪರಾಧಿಗಳನ್ನು ಗುರುತಿಸುವುದು ಹಾಗೂ ತಕ್ಷಣ ಕ್ರಮ ಕೈಗೊಳ್ಳುವುದು ಸುಲಭವಾಗಿದೆ. ವಿಶೇಷವಾಗಿ ದೊಡ್ಡ ನಗರಗಳಲ್ಲಿ ಪೊಲೀಸ್ ಇಲಾಖೆ ಡಿಜಿಟಲ್ ತಂತ್ರಜ್ಞಾನವನ್ನು ಬಳಸಿಕೊಂಡು ನಿಗಾವ್ಯವಸ್ಥೆಯನ್ನು ಬಲಪಡಿಸಿದೆ.

ಇದಲ್ಲದೆ, ಮೊಬೈಲ್ ಆ್ಯಪ್‌ಗಳು ಮತ್ತು ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತ ನಡೆಯುವ ಅನುಮಾನಾಸ್ಪದ ಚಟುವಟಿಕೆಗಳನ್ನು ತಕ್ಷಣವೇ ಪೊಲೀಸ್ ಇಲಾಖೆಗೆ ತಿಳಿಸುವ ಅವಕಾಶ ಪಡೆಯುತ್ತಿದ್ದಾರೆ. ಇದರಿಂದ ಅಪರಾಧಗಳನ್ನು ಮುಂಚಿತವಾಗಿಯೇ ತಡೆಯಲು ಸಹಕಾರಿಯಾಗುತ್ತಿದೆ. ಸೈಬರ್ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆ, ಸೈಬರ್ ಕ್ರೈಂ ಸೆಲ್‌ಗಳು ಮತ್ತು ಡಿಜಿಟಲ್ ಫೋರೆನ್ಸಿಕ್ ತಂತ್ರಜ್ಞಾನಗಳು ಪ್ರಮುಖ ಪಾತ್ರವಹಿಸುತ್ತಿವೆ. ಬ್ಯಾಂಕಿಂಗ್ ವಂಚನೆ, ಆನ್‌ಲೈನ್ ಮೋಸ ಪ್ರಕರಣಗಳನ್ನು ಪತ್ತೆಹಚ್ಚಲು ಸಹ ಈ ಆಧುನಿಕ ತಂತ್ರಜ್ಞಾನಗಳ ಬಳಕೆ ಹೆಚ್ಚು ಉಪಯುಕ್ತವಾಗಿದೆ. ಪೊಲೀಸ್ ವ್ಯವಸ್ಥೆಯಲ್ಲಿ ಅಳವಡಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಕುರಿತು ಸಿಬ್ಬಂದಿ ಸೂಕ್ತ ತರಬೇತಿ ಪಡೆಯಬೇಕು. ಪ್ರಕರಣಗಳ ತನಿಖೆಯಲ್ಲಿ ಈ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟೂ ಬಲಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಇಲಾಖೆಗೆ ಹೊಸದಾಗಿ ಸೇರ್ಪಡೆಯಾಗುತ್ತಿರುವ ಕಿರಿಯ ಅಧಿಕಾರಿಗಳಿಗೆ ಹಿರಿಯರು ತಮ್ಮ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಅವರ ವೃತ್ತಿ ಕೌಶಲ್ಯವನ್ನು ಹೆಚ್ಚಿಸಬೇಕು. ವಿವಿಧ ಪ್ರಕರಣಗಳ ನಿರ್ವಹಣೆ, ಸಾರ್ವಜನಿಕರೊಂದಿಗೆ ನಡವಳಿಕೆ, ಒತ್ತಡದ ಸಂದರ್ಭಗಳಲ್ಲಿ ತಕ್ಷಣದ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಇತ್ಯಾದಿಗಳನ್ನು ಅನುಭವದ ಮೂಲಕವೇ ಅರಿತುಕೊಳ್ಳಬಹುದು.

ಹೊಸ ಅಧಿಕಾರಿಗಳು ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸುವುದರ ಜೊತೆಗೆ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಸದಾ ಸಿದ್ಧರಾಗಿರಬೇಕು. ಇದೇ ವೇಳೆ, ಹಿರಿಯ ಅಧಿಕಾರಿಗಳು ತಮ್ಮ ದೀರ್ಘ ಸೇವಾ ಅನುಭವವನ್ನು ಹಂಚಿಕೊಂಡು, ಕಿರಿಯರಿಗೆ ಸ್ಫೂರ್ತಿದಾಯಕವಾಗಿ ಮಾರ್ಗದರ್ಶನ ನೀಡುವುದು ಇಲಾಖೆಯ ಒಟ್ಟಾರೆ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಸಭೆಯ ನಂತರ ಡಿಜಿಪಿ ಡಾ. ಎಂ.ಎ. ಸಲೀಂ ಅವರು ಡಿ.ಎ.ಆರ್. ಪೊಲೀಸ್ ವಸತಿ ಗೃಹಗಳ ಸಂಕೀರ್ಣಕ್ಕೆ ಭೇಟಿ ನೀಡಿ, ಅಲ್ಲಿ ವಾಸಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕುಟುಂಬದವರ ಕುಂದುಕೊರತೆಗಳನ್ನು ಆಲಿಸಿದರು. ಇದಾದ ಬಳಿಕ ಬಳ್ಳಾರಿ ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕ ಡಾ. ಹರ್ಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಎಎಸ್ಪಿ ಎಸ್. ನವೀನ್ ಕುಮಾರ್ ಸೇರಿದಂತೆ ಜಿಲ್ಲೆಯ ಡಿವೈಎಸ್ಪಿಗಳು ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಗಡಿಯಲ್ಲಿ ಸಂಭ್ರಮದ ಶೇಷಾಚಲ ಸದ್ಗುರುಗಳ ರಥೋತ್ಸವ
ರಾಜ್ಯಪಾಲರ ಕರ್ನಾಟಕ ವಿರೋಧಿ ಧೋರಣೆ ಖಂಡಿಸಿ ಕರವೇ ಪ್ರತಿಭಟನೆ