ರಾಷ್ಟ್ರದಲ್ಲಿ ಮೋದಿ ಆಡಳಿತ ಪರ್ವ ಮತ್ತೆ ಆರಂಭ: ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ

KannadaprabhaNewsNetwork | Published : Jun 11, 2024 1:33 AM

ಸಾರಾಂಶ

ಈ ಹಿಂದಿನ ಅವಧಿಯಂತೆ ಈ ಬಾರಿಯೂ ರಾಜ್ಯದಲ್ಲಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದು, ಹಿಂದಿನ ಅವಧಿಯ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ವಿಜಯಪುರ ರಾಷ್ಟ್ರದಲ್ಲಿ ನರೇಂದ್ರ ಮೋದಿಯವರ ಆಡಳಿತ ಪರ್ವ ಮತ್ತೆ ಆರಂಭಗೊಂಡಿದ್ದು, ರಾಷ್ಟ್ರದ ಅಭಿವೃದ್ಧಿಯಲ್ಲಿ ನರೇಂದ್ರ ಮೋದಿಯವರು ಈ ಅವಧಿಯಲ್ಲಿ ಉತ್ತಮ ಆಡಳಿತ ನಡೆಸಲಿದ್ದಾರೆ. ರೈತರು ಮತ್ತು ಎಲ್ಲ ವರ್ಗದವರ ಏಳಿಗೆಗೆ ಪೂರಕ ಯೋಜನೆಗಳು ಈ ಅವಧಿಯಲ್ಲಿ ಅಸ್ತಿತ್ವಕ್ಕೆ ಬರಲಿವೆ. ರಾಜ್ಯದಲ್ಲಿ ಆಯ್ಕೆಯಾದ ೧೭ ಮಂದಿ ಬಿಜೆಪಿ ಮತ್ತು ಜೆಡಿಎಸ್ ನ ಇಬ್ಬರು ಸಂಸದರ ಪೈಕಿ ನಾಲ್ವರಿಗೆ ಸಚಿವ ಸ್ಥಾನ ದೊರೆತಿದ್ದು, ಸಾಮಾಜಿಕ ನ್ಯಾಯವನ್ನು ಪರಿಗಣಿಸಲಾಗಿದೆ. ಆದರೆ ಸಾಮಾಜಿಕ ನ್ಯಾಯದಡಿ ರಾಜ್ಯಕ್ಕೆ ಸಚಿವ ಸ್ಥಾನ ನೀಡುವಲ್ಲಿ ಇನ್ನೂ ಅವಕಾಶಗಳಿದ್ದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಸದರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯದ ಅಭಿವೃದ್ಧಿ ಮತ್ತು ದೇಶದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಅಭಿಪ್ರಾಯ ಪಟ್ಟಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದಿನ ಅವಧಿಯಂತೆ ಈ ಬಾರಿಯೂ ರಾಜ್ಯದಲ್ಲಿ ಕರ್ನಾಟಕದ ಜನತೆ ಬಿಜೆಪಿಯನ್ನು ಬೆಂಬಲಿಸಿದ್ದು, ಹಿಂದಿನ ಅವಧಿಯ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿಕೊಂಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಮೋದಿಯವರು ಈ ಅವಧಿಯಲ್ಲಿಯೂ ಹೆಚ್ಚು ಸಹಕಾರ ನೀಡಲಿದ್ದು, ಬಿಜೆಪಿಯಿಂದ ಬಿಜಾಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ರಮೇಶ್ ಜಿಗಜಿಣಗಿ ಅಥವಾ ಚಿತ್ರದುರ್ಗ ಕ್ಷೇತ್ರದಿಂದ ಆಯ್ಕೆಯಾಗಿರುವ ಗೋವಿಂದ ಕಾರಜೋಳ ಅವರಿಗೂ ಸಚಿವ ಸ್ಥಾನ ನೀಡಬೇಕು.ಅಂತೆಯೇ ಗೋವಿಂದ ಕಾರಜೋಳ ಅವರು ರಾಜ್ಯ ಆಡಳಿತದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು, ಅವರನ್ನು ಸಚಿವ ಸಂಪುಟದಲ್ಲಿ ಪರಿಗಣಿಸಬೇಕೆಂದು ಅವರು ಒತ್ತಾಯಿಸಿದರು. ಈಗಾಗಲೇ ಕೇಂದ್ರ ಸರ್ಕಾರದಿಂದ ರೈಲ್ವೆ, ರಸ್ತೆ ಅಭಿವೃದ್ಧಿ ಮತ್ತು ಇತರೆ ಕ್ಷೇತ್ರಗಳಲ್ಲಿ ರಾಜ್ಯಕ್ಕೆ ಸಾಕಷ್ಟು ಅನುದಾನ ಬಂದಿದ್ದು, ಈ ಅವಧಿಯಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕೆಂದು ಅವರು ಆಗ್ರಹಿಸಿದರು.

Share this article