ಗದಗ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಶೂನ್ಯವಾಗಿದೆ. ಅದರಲ್ಲಿಯೂ ಕರ್ನಾಟಕದ ಪ್ರವಾಸೋದ್ಯಮಕ್ಕೆ ಸಾಕಷ್ಟು ಅನ್ಯಾಯ ಮಾಡಿದ್ದು, ಈಗ ಮೈಸೂರಿಗೆ ಬಂದು ಪ್ರವಾಸೋದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕಾನೂನು, ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ದೇಶದಲ್ಲಿ ಕಾಂಗ್ರೆಸ್ ಅಧಿಕಾರವಿದ್ದಾಗ ಹಲವಾರು ಬಾರಿ ಸಂವಿಧಾನ ತಿದ್ದುಪಡಿ ಮಾಡಿದೆ, ದೇಶದ ಮೇಲೆ ತುರ್ತು ಪರಸ್ಥಿತಿ ಹೇರಿದ ಕಾಂಗ್ರೆಸ್ ನಾಯಕರು ಈಗ ಸಂವಿಧಾನದ ಬಗ್ಗೆ ಮಾತನಾಡುತ್ತಿದ್ದಾರೆ ಎನ್ನುವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಕೇಂದ್ರ ಸರ್ಕಾರದ ವಿರುದ್ಧ ಸುದ್ದಿಗೋಷ್ಠಿ ಮಾಡಿದರು. ಬಿಜೆಪಿ ಸಂಸದರೇ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಸಂವಿಧಾನ ಬಗ್ಗೆ ಬಿಜೆಪಿಗೆ ಗೌರವ ಇಲ್ಲ ಎಂದರು.
ಬಡತನ ನಿವಾರಣೆಗೆ 50ಕ್ಕೂ ಹೆಚ್ಚು ವರ್ಷ ದೇಶವಾಳಿದ ಕಾಂಗ್ರೆಸ್ ಏನು ಮಾಡಿದೆ ಎಂಬ ಮೋದಿ ಟೀಕಿಗೆ ಉತ್ತರಿಸಿದ ಅವರು, ನಾವು ದೇಶದ ಜನರಿಗೆ ವಿವಿಧ ವಸತಿ ಯೋಜನೆಗಳ ಮೂಲಕ ಮನೆಗಳನ್ನು ನಿರ್ಮಿಸಿದ್ದೇವೆ. ಅವರಿಗೆ ಗುಣಮಟ್ಟದ ಆಹಾರ ಧಾನ್ಯಗಳನ್ನು ನೀಡಿದ್ದೇವೆ. ಇದೆಲ್ಲ ಅಭಿವೃದ್ಧಿ ಅಲ್ಲವೇ ಎಂದು ಪ್ರಶ್ನಿಸಿದರು. ಬಿಜೆಪಿಯವರು 10 ವರ್ಷದಲ್ಲಿ ಶ್ರೀಮಂತರ ಸಾಲ ಮನ್ನಾ ಮಾಡಿ, ದೇಶದ ರೈಲು, ವಿಮಾನ ನಿಲ್ದಾಣ ಹೀಗೆ ಎಲ್ಲವನ್ನು ಅದಾನಿ, ಅಂಬಾನಿಗೆ ಮಾರಾಟ ಮಾಡಲು ಹೊರಟಿದ್ದಾರಲ್ಲ, ಇದು ಅಭಿವೃದ್ಧಿಯೇ? ಎಂದು ಕಾರವಾಗಿಯೇ ಮರು ಪ್ರಶ್ನಿಸಿದರು.ಮಹಿಳೆಯರ ಕುರಿತು ಕುಮಾರಸ್ವಾಮಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ ಅವರು, ಮಹಿಳೆಯರ ಬಗ್ಗೆ ಅಪಹಾಸ್ಯ ಬೇಡ. ಮಹಿಳೆಯರಿಗೆ ಕ್ಷಮೆ ಕೋರದೇ ಇದ್ದರೆ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ. ಕಳಂಕ ಮಾತುಗಳನ್ನು ಆಡುವ ಮೂಲಕ ಪ್ರಮಾದ ಎಸಗಿದ್ದಾರೆ. ಮಹಿಳೆಯರ ಚಾರಿತ್ರ್ಯ ವಧೆ ಮಾಡುವ ಹೇಳಿಕೆ ಹಿಂಪಡೆದು ಕ್ಷಮೆ ಕೋರಬೇಕು. ಚುನಾವಣಾ ಆಯೋಗ ಈ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಸುಜಾತಾ ದೊಡ್ಡಮನಿ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಬಿ.ಬಿ. ಅಸೂಟಿ, ಚೆನ್ನಪ್ಪ ಜಗಲಿ, ಬಸವರಾಜ ಸುಂಕಾಪುರ, ಬಸವರಾಜ ಕಡೇಮನಿ ಹಾಜರಿದ್ದರು.