ಕಾರ್ಯಪ್ಪ ಉದ್ಯಾನವನದಲ್ಲಿ ಸ್ವಚ್ಛತಾ ಅಭಿಯಾನ
ನರೇಂದ್ರ ಮೋದಿ ಅವರು ದೇಶದಲ್ಲಿ ಸುಧೀರ್ಘ ಆಡಳಿತ ನಡೆಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬುಧವಾರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮತ್ತು ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ನಗರದಲ್ಲಿ ಬೆಳ್ಳಂಬೆಳಗ್ಗೆ ಬಿಜೆಪಿ ನಗರ ಮಂಡಲದಿಂದ ವಿಜಯಪುರ ಬಡಾವಣೆ ಜನರಲ್ ಕಾರ್ಯಪ್ಪ ಉದ್ಯಾನವನದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಬಳಿಕ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ನೇತೃತ್ವದಲ್ಲಿ ಹನುಮಂತಪ್ಪ ಸರ್ಕಲ್ ನ ತಾಲೂಕು ಕಚೇರಿ ಆವರಣದ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಅವರ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದೇಶ ಮುನ್ನಡೆಸಲು ಇನ್ನಷ್ಟು ಶಕ್ತಿ ನೀಡಲಿ ಎಂದು ಪೂಜೆ ಸಲ್ಲಿಸಿದ್ದೇವೆ. ಮೋದಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದು, ಇನ್ನೂ ಹತ್ತಾರು ವರ್ಷ ದೇಶದ ಆಡಳಿತ ನಡೆಸಲು ಆರೋಗ್ಯ ಕರುಣಿಸುವಂತೆ ಹಾಗೂ ಯಾವುದೇ ರೀತಿ ವಿಘ್ನ ಉಂಟಾದಂತೆ ವಿನಾಯಕನ ಬಳಿ ಪ್ರಾರ್ಥಿಸಿದ್ದೇವೆ ಎಂದರು. ಈ ವೇಳೆ ನಗರ ಬಿಜೆಪಿ ಮಂಡಲ ಅಧ್ಯಕ್ಷ ಪುಷ್ಪರಾಜ್, ಎಸ್ಸಿ ಮೋರ್ಚಾ ಅಧ್ಯಕ್ಷ ವೆಂಕಟೇಶ್, ಯುವ ಮೋರ್ಚಾ ಅಧ್ಯಕ್ಷ ಜೀವನ್, ಒಬಿಸಿ ಮೋರ್ಚಾ ಅಧ್ಯಕ್ಷ ಜಯವರ್ಧನ್ ಮೊದಲಾದವರಿದ್ದರು.
ಎಷ್ಟೇ ಬೆಲೆ ಏರಿದರೂ ಮೋದಿ ಜತೆ ಇರುತ್ತೇವೆ
ಸುದ್ದಿಗಾರರೊಂದಿಗೆ ಮಾತನಾಡಿ ಯುದ್ಧದಿಂದ ದೇಶದಲ್ಲಿ ಸಣ್ಣಪುಟ್ಟ ಬೆಲೆ ಏರಿಕೆ ಆಗುವುದು ಸಹಜ. ಬೇರೆ ದೇಶಗಳಿಗೆ ಹೋಲಿಸಿದರೆ, ಅಷ್ಟೊಂದು ಪ್ರಮಾಣದಲ್ಲಿ ಏರಿಕೆ ಉಂಟಾಗಿಲ್ಲ. ನಾಗರಿಕರಿಗೆ ಅನಾನುಕೂಲವಾಗದಂತೆ ಸಣ್ಣ ಪ್ರಮಾಣ ದಲ್ಲಿ ಏರಿಕೆಯನ್ನು ಕೇಂದ್ರ ಸರ್ಕಾರ ಮಾಡಿದೆ. ದೇಶದ ಒಗ್ಗಟ್ಟು ಮತ್ತು ಹೋರಾಟಕ್ಕೆ ಸಾಥ್ ನೀಡುತ್ತೇವೆ. ನರೇಂದ್ರ ಮೋದಿ ಅವರೊಂದಿಗೆ ಇರುತ್ತೇವೆ. ಈ ಕಾಂಗ್ರೆಸ್ ಪ್ರತಿಭಟನೆಗೆ ಹೆದರಲ್ಲ ಎಂದರು.