ಪ್ರಜ್ವಲ್ ರೇವಣ್ಣ ಜತೆ ರೋಡ್ ಶೋ
ಭಾರತೀಯರ ಸ್ವಾಭಿಮಾನಕ್ಕೆ ಧಕ್ಕೆಯಾಗದ ರೀತಿಯಲ್ಲಿ ಉತ್ತಮ ಆಡಳಿತ ನಡೆಸಿ, ವಿಶ್ವವೇ ಮೆಚ್ಚುವಂತಹ ಕಾರ್ಯಗಳನ್ನು ಕೈಗೊಂಡು ವಿಶ್ವ ಖ್ಯಾತಿ ಪಡೆದ ಮೋದಿಯವರು ದೇಶದ ಉತ್ತಮ ಭವಿಷ್ಯಕ್ಕಾಗಿ ಮತ್ತೊಮ್ಮೆ ಪ್ರಧಾನಿಯಾಗಬೇಕಿದೆ. ಆದ್ದರಿಂದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಬೇಕಿದೆ ಎಂದು ತುರುವೇಕೆರೆ ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಹೇಳಿದರು.
ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಮುಂಭಾಗದಲ್ಲಿ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ಜತೆಗೂಡಿ ಪ್ರಾರಂಭಗೊಂಡ ಜೆಡಿಎಸ್ ಪಕ್ಷದ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಪ್ರಖ್ಯಾತರಾಗಿದ್ದು, ಅದೇ ರೀತಿ ಅಭಿವೃದ್ಧಿ ಕಾರ್ಯಗಳಲ್ಲಿ ರಾಜಿ ಮಾಡಿಕೊಳ್ಳದ ಪ್ರಜ್ವಲ್ ರೇವಣ್ಣ ಮತ್ತೊಮ್ಮೆ ಗೆಲ್ಲಬೇಕಿದೆ ಎಂದು ಹೇಳಿದರು.ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಮಾತನಾಡಿ, ಲೋಕಸಭಾ ಸದಸ್ಯನಾಗಿ ಜಿಲ್ಲೆಯಲ್ಲಿ ೧೬.೫ ಸಾವಿರ ಕೋಟಿ ರು. ಅನುದಾನದಿಂದ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದ್ದು, ಪಟ್ಟಣದ ಸ್ಟೇಡಿಯಂಗೆ ಕೆಲೋ ಭಾರತ್ ಅನುದಾನದಲ್ಲಿ ೧೦ ಕೋಟಿ ರು. ಅನುದಾನ ನೀಡಲಾಗಿದ್ದು, ಆಸ್ಪತ್ರೆ ಹಾಗೂ ಇತರೆ ಕಾರ್ಯಗಳನ್ನು ಕೈಗೊಂಡು ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ೧೮ ಟವರ್ಗಳನ್ನು ಅಳವಡಿಸಲಾಗುತ್ತಿದೆ. ಹಾಸನದಿಂದ ಬೇಲೂರು ಅಲ್ಲಿಂದ ಆಧಿಹಳ್ಳಿ ಮಾರ್ಗವಾಗಿ ಚಿಕ್ಕಮಗಳೂರು ರೈಲ್ವೆ ಮಾರ್ಗ ಕಲ್ಪಿಸಿ, ೧೯೫೭ ಕೋಟಿ ರು. ವೆಚ್ಚದಲ್ಲಿ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
‘ಚುನಾವಣೆಯ ಸಮೀಕ್ಷೆಗಳಲ್ಲಿ ಎನ್ಡಿಎ ಪಕ್ಷವೂ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ೪೦೦ ಕ್ಕೂ ಹೆಚ್ಚು ಸ್ಥಾನಗಳನ್ನು ಜಯಗಳಿಸಲಿದ್ದಾರೆ ಎಂದು ತಿಳಿಸಿದೆ. ಅದೇ ರೀತಿ ಅಭಿವೃದ್ಧಿ ಕಾರ್ಯಗಳು ಮತ್ತು ಬಿಜೆಪಿ ಪಕ್ಷದ ಕಾರ್ಯಕರ್ತರ ಸಹಕಾರದಲ್ಲಿ ಜನತೆಯಲ್ಲಿ ಮತ ಬೇಡುತ್ತಿದ್ದೇವೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ನಾನು ತೋರಿದ ಉತ್ಸಾಹ ಮತ್ತು ಅಭಿವೃದ್ಧಿ ಕಾರ್ಯಗಳು ಕನ್ನಡಿಯಂತೆ ಮುಂದಿರುವಾಗ ಹಾಸನ ಕ್ಷೇತ್ರದ ಜನತೆ ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾದ ನನಗೆ ಮತ ನೀಡಿ, ಗೆಲ್ಲಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಉದ್ಯಮಿ ಟಿ.ಶಿವಕುಮಾರ್, ಪುರಸಭೆ ಮಾಜಿ ಅಧ್ಯಕ್ಷರು, ಪುರಸಭಾ ಸದಸ್ಯರು, ಪಟ್ಟಣದ ಗಣ್ಯ ವ್ಯಕ್ತಿಗಳು ಹಾಗೂ ಜೆಡಿಎಸ್ ಪಕ್ಷದ ಸಾವಿರಾರು ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.ಹೊಳೆನರಸೀಪುರ ಪಟ್ಟಣದಲ್ಲಿ ಶಾಸಕ ಎಚ್.ಡಿ.ರೇವಣ್ಣ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ರೋಡ್ಶೋ ಮೂಲಕ ಪ್ರಚಾರ ನಡೆಸಿದರು.