ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ: ಶಾಸಕ ಬಾಲಚಂದ್ರ ಜಾರಕಿಹೊಳಿ

KannadaprabhaNewsNetwork | Published : Jan 20, 2024 2:03 AM

ಸಾರಾಂಶ

ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಮುಂದಿನ ಬಾರಿಯೂ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದರು.

ಕನ್ನಡಪ್ರಭ ವಾರ್ತೆ ಗೋಕಾಕ

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್‌ಎಸ್‌ಎಫ್‌ ಕಚೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ತಮ್ಮ ಅಂಕಿ - ಅಂಶಗಳನ್ನು ನೀಡಿವೆ. ಮೋದಿ ಕಳೆದ 116 ತಿಂಗಳಿನಿಂದ ಈ ದೇಶದ ಪ್ರಧಾನಿಗಳಾಗಿ ಇಡೀ ಜಗತ್ತೇ ಮೆಚ್ಚುವ ರೀತಿ ಆಡಳಿತ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಭಾರತವೆಂದರೆ ಅಸಡ್ಡೆ ಪಡುತ್ತಿದ್ದ ಜಗತ್ತಿನ ಪ್ರಬಲ ರಾಷ್ಟ್ರಗಳು ಇಂದು ಮೋದಿ ಆಡಳಿತದ ಸಲಹೆಗಳನ್ನು ಪಡೆದು ಮುನ್ನಡೆಯುತ್ತಿವೆ. ಶೀಘ್ರವೇ ಭಾರತವು ವಿಶ್ವಕ್ಕೆ ಗುರುವಾಗಲಿದೆ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡು ಗೆಲುವಿಗೆ ಶ್ರಮಿಸಬೇಕು. ಈಚೆಗೆ ನಡೆದ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಸಮತೋಲನದಿಂದ ಕೂಡಿದೆ. ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನವು ಪಂಚಮಸಾಲಿ ಸಮಾಜ, ಬೆಳಗಾವಿ ಮಹಾನಗರ ಘಟಕಕ್ಕೆ ಓಬಿಸಿ ಮತ್ತು ಚಿಕ್ಕೊಡಿ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಪರಿಶಿಷ್ಟ ಜಾತಿಯ ಕಾರ್ಯಕರ್ತರಿಗೆ ನೀಡುವ ಮೂಲಕ ನಿಷ್ಟಾವಂತರಿಗೆ ಮಣೆ ಹಾಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪಕ್ಷ ಬಲಪಡಿಸುವ ಕೆಲಸವನ್ನು ನೂತನ ಪದಾಧಿಕಾರಿಗಳು ಮಾಡುವಂತೆ ಸಲಹೆ ನೀಡಿದರು.

ಜ.22 ರಂದು ಇಡೀ ವಿಶ್ವವೇ ಕಣ್ತುಂಬಿಕೊಳ್ಳುತ್ತಿರುವ ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು, ಇದರ ಅಂಗವಾಗಿ ಇಡೀ ದೇಶಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ನಮ್ಮ ಅರಭಾವಿ ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲ ದೇವಸ್ಥಾನಗಳಲ್ಲಿ ರುದ್ರಾಭಿಷೇಕ, ಸಾರ್ವಜನಿಕರಿಗೆ ಅಯೋಧ್ಯೆ ಕಾರ್ಯಕ್ರಮವನ್ನು ವೀಕ್ಷಿಸಲು ಬೃಹತ್ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಬೆಳಗಾವಿ ಗ್ರಾಮೀಣ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಸುಭಾಸ ಪಾಟೀಲ ಅವರನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಅಧ್ಯಕ್ಷ ಅವರಾದಿ ಮಾತನಾಡಿ, ಜಿಲ್ಲೆಯ ಎಲ್ಲ ಹಿರಿಯರು, ಮುಖಂಡರನ್ನು ವಿಶ್ವಾಸಕ್ಕೆ ಪಡೆದು ಪಕ್ಷದ ಸಂಘಟನಾತ್ಮಕ ಕಾರ್ಯಗಳನ್ನು ಮಾಡುವುದಾಗಿ ಹೇಳಿದರು. ಈ ಬಾರಿ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಒಟ್ಟು 15 ಜನ ಆಕಾಂಕ್ಷಿಗಳು ಇದ್ದರು. ಅವರಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ ಅಯ್ಕೆ ಮಾಡಿದ್ದಾರೆ. ಅದಕ್ಕಾಗಿ ಪಕ್ಷದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರಿಗೆ ಆಭಾರಿಯಾಗಿರುವದಾಗಿ ಅವರು ಕೃತಜ್ಞತೆ ಸಲ್ಲಿಸಿದರು.

ಜಿ.ಪಂ. ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಮೂಡಲಗಿ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸನಗೌಡ ಪಾಟೀಲ, ಎಸ್‌ಎಲ್‌ಡಿಪಿ ನಿರ್ದೇಶಕ ರಾಜು ಬೈರುಗೋಳ, ಪ್ರಭಾ ಶುಗರ್ ನಿರ್ದೇಶಕ ಕೆಂಚನಗೌಡ ಪಾಟೀಲ, ಘಟಪ್ರಭಾ ಜೆಜಿ- ಕೋ ನಿರ್ದೇಶಕ ಶಿವನಗೌಡ ಪಾಟೀಲ, ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ ಬಿ.ಡಿ.ಪಾಟೀಲ, ಎಂ.ಎಂ.ಪಾಟೀಲ, ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಟಿಎಪಿಸಿಎಸ್ ಅಧ್ಯಕ್ಷ ಅಶೋಕ ನಾಯಿಕ, ಗೋಕಾಕ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಬಸವರಾಜ ಕೋಟಗಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಅಪ್ಪಯ್ಯ ಬಡ್ನಿಂಗೋಳ, ಶಂಕರ ಬಿಲಕುಂದಿ, ಸುಭಾಸ ಕುರಬೇಟ ಸೇರಿದಂತೆ ಹಲವು ಗಣ್ಯರು ಇದ್ದರು. ಪರಸಪ್ಪ ಬಬಲಿ ನಿರೂಪಿಸಿದರು.

Share this article