ಉಪಾಧ್ಯಕ್ಷರಾಗಿ ನಾರಾಯಣ ಆಯ್ಕೆ । ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ
ತಾಲೂಕಿನ ಕಾಳಿಂಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಕೆ.ಎಂ.ಮೋಹನ್ಕುಮಾರ್ ಮತ್ತು ನಾರಾಯಣ ಆಯ್ಕೆಯಾಗಿದ್ದಾರೆ.
ಸಂಘದ ಆಡಳಿತ ಮಂಡಳಿ 12 ಮಂದಿ ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 7 ಮಂದಿ ಹಾಗೂ ಜೆಡಿಎಸ್ ಬೆಂಬಲಿತ 5 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದರು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಬುಧವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಕೆ.ಎಂ.ಮೋಹನ್ಕುಮಾರ್ ಮತ್ತು ನಾರಾಯಣ ನಾಮಪತ್ರ ಸಲ್ಲಿಸಿದರೆ, ಜೆಡಿಎಸ್ ಬೆಂಬಲಿತ ಎಚ್.ಆರ್.ಶ್ರೀನಿವಾಸ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಜಿ.ಗವೀಗೌಡ ಉಮೇದುವಾರಿಕೆ ಸಲ್ಲಿಸಿದ್ದರು.ನಂತರ ನಡೆದ ಚುನಾವಣೆಯಲ್ಲಿ ಕೆ.ಎಂ.ಮೋಹನ್ಕುಮಾರ್ 9 ಮತ, ನಾರಾಯಣ 8 ಮತ ಪಡೆದು ಗೆಲುವು ಸಾಧಿಸಿದರೆ, ಜೆಡಿಎಸ್ನ ಎಚ್.ಆರ್.ಶ್ರೀನಿವಾಸ್ 4 ಮತ, ಬಿ.ಜಿ.ಗವೀಗೌಡ 5 ಮತ ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಕೆ.ಎಂ.ಆನಂದನಾಯಕ್ ಕರ್ತವ್ಯ ನಿರ್ವಹಿಸಿದರು.
ನೂತನ ಅಧ್ಯಕ್ಷ ಮೋಹನ್ ಕುಮಾರ್ ಮಾತನಾಡಿ, ಹಿರಿಯ ಸಹಕಾರಿಗಳು ಮತ್ತು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರ ಸಲಹೆ- ಮಾರ್ಗದರ್ಶನ ಪಡೆದು ಸಂಘವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು. ಸಂಘದ ಅಧ್ಯಕ್ಷನಾಗಲು ಸಹಕರಿಸಿದ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಆಡಳಿತ ಮಂಡಳಿ ಎಲ್ಲಾ ನಿರ್ದೇಶಕರು ಅಭಿನಂದಿಸುವುದಾಗಿ ತಿಳಿಸಿದರು.