ಸ್ಕ್ಯಾನಿಂಗ್ ಸೆಂಟರ್, ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

KannadaprabhaNewsNetwork |  
Published : Nov 27, 2024, 01:00 AM IST
೨೫ಕೆಎಂಎನ್‌ಡಿ-೪ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ (ದುರ್ಬಳಕೆ ಮತ್ತು ತಡೆ) ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ ಭ್ರೂಣಹತ್ಯೆಗೆ ಸಂಬಂಧಿಸಿದಂತೆ ದಾಳಿ ನಡೆಸಿದಾಗ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳು ಇರುವುದು ಕಂಡುಬಂದಿದ್ದು, ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳನ್ನು ವಶಪಡಿಸಿಕೊಂಡು ಸ್ಕ್ಯಾನಿಂಗ್ ಸೆಂಟರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಹಾಗೂ ಅಕ್ರಮ ಗರ್ಭಪಾತ ನಡೆಸುತ್ತಿದ್ದ ಒಟ್ಟು ೩೭ ಜನರ ಮೇಲೆ ಪ್ರಕರಣ ದಾಖಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್‌ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರ (ದುರ್ಬಳಕೆ ಮತ್ತು ತಡೆ) ಕಾಯ್ದೆಯ ಜಿಲ್ಲಾ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಪಾಸಣಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಇದುವರೆಗೂ ಭ್ರೂಣಹತ್ಯೆಗೆ ಸಂಬಂಧಿಸಿದಂತೆ ದಾಳಿ ನಡೆಸಿದಾಗ ಸ್ಕ್ಯಾನಿಂಗ್ ಸೆಂಟರ್‌ಗಳಲ್ಲಿ ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳು ಇರುವುದು ಕಂಡುಬಂದಿದ್ದು, ಹೆಚ್ಚುವರಿ ಸ್ಕ್ಯಾನಿಂಗ್ ಯಂತ್ರಗಳನ್ನು ವಶಪಡಿಸಿಕೊಂಡು ಸ್ಕ್ಯಾನಿಂಗ್ ಸೆಂಟರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಣ್ಣು ಭ್ರೂಣ ಪತ್ತೆ ಮಾಡುತ್ತಿದ್ದ ಹಾಗೂ ಅಕ್ರಮ ಗರ್ಭಪಾತ ನಡೆಸುತ್ತಿದ್ದ ಒಟ್ಟು ೩೭ ಜನರ ಮೇಲೆ ಪ್ರಕರಣ ದಾಖಲಾಗಿದೆ. ಇವರಿಗೆ ಕಠಿಣ ಶಿಕ್ಷೆಯಾದಾಗ ಮಾತ್ರ ಜನರು ಈ ರೀತಿಯ ಕೃತ್ಯಕ್ಕೆ ಮುಂದಾಗುವುದಿಲ್ಲ. ಜಿಲ್ಲೆಯಲ್ಲಿ ಯಾವುದೇ ಭ್ರೂಣ ಹತ್ಯೆ ಮತ್ತು ಭ್ರೂಣ ಪತ್ತೆಯಂತಹ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಪಿಸಿ ಹಾಗೂ ಪಿಎನ್‌ಡಿಟಿ ಕಾಯ್ದೆಯಡಿ ಕಠಿಣ ಕ್ರಮ ಕೈಗೊಂಡು ಉತ್ತಮ ಸಮಾಜದ ನಿರ್ಮಾಣಕ್ಕೆ ಮುಂದಾಗಿ ಎಂದರು.

ವೈದ್ಯರ ಸಲಹೆ ಇಲ್ಲದೆ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿಗುವ ಮಾತ್ರೆಗಳನ್ನು ಖರೀದಿಸಿ ಅಕ್ರಮ ಗರ್ಭಪಾತ ನಡೆಯುತ್ತಿವೆ ಎಂಬ ದೂರು ಕೇಳಿ ಬರುತ್ತಿದೆ. ಎಲ್ಲ ಮೆಡಿಕಲ್ ಸ್ಟೋರ್‌ಗಳ ಮೇಲೆ ತೀವ್ರ ನಿಗಾ ಇಟ್ಟು ಪರಿಶೀಲನೆ ನಡೆಸಿ ಔಷಧ ಮಾರಾಟಗಾರರಿಗೆ ಸೂಕ್ತ ಕಾರ್ಯಾಗಾರ ಏರ್ಪಡಿಸಿ ತಿಳಿವಳಿಕೆ ಮೂಡಿಸುವಂತೆ ತಿಳಿಸಿದರು.

ಪ್ರತಿ ಸ್ಕಾನಿಂಗ್ ಸೆಂಟರ್‌ಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ಮಾಡಬೇಕು. ಯಾವುದೇ ರೀತಿಯ ಅನುಮಾನ ಬಂದಲ್ಲಿ ಅವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಿ. ಭ್ರೂಣ ಹತ್ಯೆ ತಡೆಗಟ್ಟುವ ಬಗ್ಗೆ ಪ್ರತಿ ಗ್ರಾಮ ಸಭೆಗಳಲ್ಲಿ ಚರ್ಚೆ ನಡೆಸಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು.

ಡಿಸೆಂಬರ್ ೨೦, ೨೧, ೨೨ ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದಲ್ಲಿ ಹೆಣ್ಣು ಭ್ರೂಣ ಹತ್ಯೆಯ ಬಗ್ಗೆ ವಿಶೇಷ ವಿಚಾರ ಗೋಷ್ಠಿ ಆಯೋಜಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು ೫೯ ಸ್ಕಾನಿಂಗ್ ಸೆಂಟರ್‌ಗಳಿವೆ. ಮಂಡ್ಯ ತಾಲೂಕಿನಲ್ಲಿ- ೨೭, ಮದ್ದೂರು - ೬, ಮಳವಳ್ಳಿ -೭, ಪಾಂಡವಪುರ -೫, ಶ್ರೀರಂಗಪಟ್ಟಣ -೩, ಕೆ ಆರ್ ಪೇಟೆ -೬, ನಾಗಮಂಗಲ ತಾಲೂಕಿನಲ್ಲಿ - ೫ ಸ್ಕಾನಿಂಗ್ ಸೆಂಟರ್ ಗಳಿವೆ. ಪ್ರತಿ ೩ ತಿಂಗಳಿಗೊಮ್ಮೆ ಸ್ಕಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಹಿರಿಯ ನಾಗರಿಕರ ಹಾಗೂ ಅಂಗವಿಕಲರ ಕಲ್ಯಾಣಾಕಾರಿ ಕೋಮಲ್ ಕುಮಾರ್, ಸ್ತ್ರೀರೋಗ ತಜ್ಞೆ ಡಾ ಜ್ಯೋತಿ, ಡಾ.ಮನೋಹರ್, ಡಾ.ದೇವಿಕಾ, ನಿವೃತ್ತ ಡಿಎಚ್‌ಒ ಡಾ. ಮರೀಗೌಡ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''