ಸಹಕಾರಿ ಸಂಘಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ

KannadaprabhaNewsNetwork |  
Published : Jul 04, 2026, 02:15 AM IST
 | Kannada Prabha

ಸಾರಾಂಶ

ಸಾರ್ವಜನಿಕರ ಠೇವಣಿಗಳ ಮೊತ್ತಕ್ಕೆ ಭದ್ರತೆ ನೀಡುವಂತೆ ಜಿಲ್ಲೆಯ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.

ಕಾರವಾರ: ಜಿಲ್ಲೆಯಲ್ಲಿನ ಸಹಕಾರಿ ಸಂಘಗಳ ವ್ಯವಹಾರ ಮತ್ತು ಚಟುವಟಿಕೆಬಗ್ಗೆ ಹೆಚ್ಚಿನ ನಿಗಾವಹಿಸಿ ಯಾವುದೇ ಅವ್ಯವಹಾರಗಳು ನಡೆಯದಂತೆ ಆಗಾಗ್ಗೆ ತಪಾಸಣೆ ನಡೆಸಿ, ಸಾರ್ವಜನಿಕರ ಠೇವಣಿಗಳ ಮೊತ್ತಕ್ಕೆ ಭದ್ರತೆ ನೀಡುವಂತೆ ಜಿಲ್ಲೆಯ ಸಹಕಾರಿ ಸಂಘಗಳ ಉಪ ನಿಬಂಧಕರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕೆಲವು ಸಹಕಾರಿ ಸಂಘಗಳಲ್ಲಿನ ಅವ್ಯವಹಾರಗಳಿಂದ ಸಾರ್ವಜನಿಕರು ತಮ್ಮ ಠೇವಣಿಯ ಹಣವನ್ನು ಕಳೆದುಕೊಂಡಿರುವ ಘಟನೆಗಳು ನಡೆದಿದ್ದು, ಇಂತಹ ಘಟನೆಗಳನ್ನು ತಪ್ಪಿಸುವ ಸಲುವಾಗಿ ಸಹಕಾರಿ ಬ್ಯಾಂಕ್‌ಗಳು ನಿಯಮಾನುಸಾರ ಎಲ್ಲ ಅನುಮತಿ ಪಡೆದು ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮತ್ತು ಅಲ್ಲಿನ ಆರ್ಥಿಕ ಚಟುವಟಿಕೆಗಳ ಬಗ್ಗೆ ಆಗಾಗ್ಗೆ ತಪಾಸಣೆ ನಡೆಸುವ ಮೂಲಕ ಸಾರ್ವಜನಿಕರ ಹಣಕ್ಕೆ ಅಗತ್ಯ ರಕ್ಷಣೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲೆಯ ಮುಂಡಗೋಡ, ಹಳಿಯಾಳ ಮತ್ತಿತರ ತಾಲೂಕುಗಳಲ್ಲಿ ಖಾಸಗಿ ಫೈನಾನ್ಸ್‌ಗಳ ಹಾವಳಿ ಕುರಿತಂತೆ ದೂರುಗಳು ಬರುತ್ತಿದ್ದು, ಖಾಸಗಿ ಫೈನಾನ್ಸ್ ಗಳು ಆರ್.ಬಿ.ಐ. ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ನಡೆಯುತ್ತಿರುವ ಬಗ್ಗೆ ಮತ್ತು ಇವರು ವಿಧಿಸುವ ಬಡ್ಡಿ ದರಗಳ ಕುರಿತಂತೆ ಪರಿಶೀಲನೆ ನಡೆಸಬೇಕು. ಖಾಸಗಿ ಫೈನಾನ್ಸ್‌ಗಳು ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ಸಾರ್ವಜನಿಕರು ಸುರಕ್ಷಿತ ವ್ಯವಹಾರ ನಡೆಸುವ ಬಗ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿನ ಖಾಸಗಿ ಫೈನಾನ್ಸ್ ಸಂಸ್ಥೆಗಳು ಆರ್.ಬಿ.ಐ. ಮಾರ್ಗಸೂಚಿಯಡಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ, ಅನಧಿಕೃತ ಎಂದು ಕಂಡುಬಂದಲ್ಲಿ ಅಂತಹ ಸಂಸ್ಥೆಗಳ ವಿರುದ್ದ ತಕ್ಷಣ ಪ್ರಕರಣ ದಾಖಲು ಮಾಡುವಂತೆ ಸೂಚನೆ ನೀಡಿದರು.

ಸಹಕಾರ ಸಂಘಗಳ ಅರ್ಥಿಕ ಅವ್ಯವಹಾರಗಳ ಕುರಿತು ಸಲ್ಲಿಕೆಯಾಗುವ ದೂರುಗಳನ್ನು ನಿಗದಿತ ಅವಧಿಯಲ್ಲಿ ವಿಲೇಗೊಳಿಸುವುದರ ಜೊತೆಗೆ ಅಂತಹ ಸಂಸ್ಥೆಗಳಲ್ಲಿ ಸಾರ್ವಜನಿಕರ ಠೇವಣಿ ಮೊತ್ತ ಸುರಕ್ಷಿತವಾಗಿರುವಂತೆ ಅಗತ್ಯ ಎಚ್ಚರವಹಿಸುವಂತೆ ಸೂಚಿಸಿದರು.

ಜಿ.ಪಂ. ಸಿಇಓ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಸಹಕಾರಿ ಸಂಘಗಳ ಉಪ ನಿಬಂಧಕಿ ತೇಜಸ್ವಿನಿ ಗೌಡ, ಲೀಡ್ ಬ್ಯಾಂಕ್ ಮೇನೇಜರ್ ರಾಜಪ್ಪ ಹಾಗೂ ಸಹಕಾರಿ ಸಂಘಗಳ ಇಲಾಖೆಯ ಎಲ್ಲಾ ತಾಲೂಕುಗಳು ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೈಕೊಟ್ಟ ಮುಂಗಾರು; ಗುರ್ಜಿ ಆಟ, ಪ್ರಾರ್ಥನೆ
ಸೌರ ಶಕ್ತಿ ಬಳಕೆಗೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಭೀಮಣ್ಣ