ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರೆದಿದ್ದು, ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ, ಹಾಸನ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಬಳ್ಳಾರಿ, ರಾಯಚೂರು ಸೇರಿ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ-ಗಾಳಿಗೆ ಜನಜೀವನ ಅಸ್ತವ್ಯಸ್ತವಾಗಿದೆ. ಬಹುತೇಕ ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿವೆ.
ಉಡುಪಿ ಜಿಲ್ಲೆಯಾದ್ಯಂತ ಗುರುವಾರ ಒಂದೇ ರಾತ್ರಿಯಲ್ಲಿ 96 ಮಿ.ಮೀ. ಮಳೆ ದಾಖಲಾಗಿದ್ದು, ಸೀತಾ ನದಿ, ಸುವರ್ಣ ನದಿ, ಪಾಂಗಾಳ ನದಿಗಳ ಅಸಪಾಸಿನ ತಗ್ಗುಪ್ರದೇಶಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲಾಧಿಕಾರಿ ಶುಕ್ರವಾರ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಹವಾಮಾನ ಇಲಾಖೆ ಮೇ 2ರವರೆಗೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದೆ. 8 ಮನೆಗಳು, ಜಾನುವಾರು ಕೊಟ್ಟಿಗೆ ಮತ್ತು ಅಡಕೆ ತೋಟ ಗಾಳಿ-ಮಳೆಗೆ ಹಾನಿ ಉಂಟಾಗಿದೆ.
ಕೊಡಗು ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿದಿದ್ದು, ವಿದ್ಯುತ್ ಕಂಬ ಬಿದ್ದು ಹಸು ಸಾವನ್ನಪ್ಪಿದೆ. ಮಡಿಕೇರಿ ಹೊರ ವಲಯದಲ್ಲಿರುವ ಅಬ್ಬಿ ಜಲಪಾತ ಹಾಲ್ನೊರೆಯಂತೆ ಹರಿಯುತ್ತಿದ್ದು, ಜಲಪಾತದ ವೈಭವವನ್ನು ನೋಡಲು ಸಾಕಷ್ಟು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹೊಳೆನರಸೀಪುರ ತಾಲೂಕಿನ ತಾತನಹಳ್ಳಿ ಗ್ರಾಮದಲ್ಲಿ ರೈತರ ಮನೆ ಕುಸಿದಿದ್ದು, ಬದುಕು ಬೀದಿಗೆ ಬಿದ್ದಿದೆ. ಹಂಪಿ ಸ್ಮಾರಕಗಳ ಬಳಿ ನೀರು ನಿಂತಿದ್ದು, ಪ್ರವಾಸಿಗರು ಹಿಡಿಶಾಪ ಹಾಕುತ್ತಿದ್ದಾರೆ.
ಕಬಿನಿ ದಡದ ಜನರಿಗೆ ಎಚ್ಚರಿಕೆ:
ಮೈಸೂರು ಜಿಲ್ಲೆಯ ಕಬಿನಿ ಜಲಾಶಯಕ್ಕೆ 3 ದಿನದಲ್ಲಿ 6 ಟಿಎಂಸಿ ನೀರು ಹರಿದು ಬಂದಿದ್ದು, ಯಾವುದೇ ಕ್ಷಣದಲ್ಲಾದರೂ ನೀರಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ನದಿಯ ಪಾತ್ರದಲ್ಲಿರುವ ಜನರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯ ವಿಭಾಗದ ಕಾರ್ಯಪಾಲಕರು ಕೋರಿದ್ದಾರೆ.