ಮಾಸಿಕ ಸಂತೆ ಸ್ತ್ರೀ ಸಬಲೀಕರಣಕ್ಕೆ ದಾರಿದೀಪ

KannadaprabhaNewsNetwork |  
Published : Jan 17, 2025, 12:45 AM IST
16 ರೋಣ 1. ಸಂತೆ ಮಾರುಕಟ್ಟೆ ಆವರಣದಲ್ಲಿ ತಾಲೂಕ ಪಂಚಾಯಿತಿ ವತಿಯಿಂದ  ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ, ಸಂಜೀವಿನಿ ಯೋಜನೆ ಅಡಿಯಲ್ಲಿ ಜರುಗಿದ  ಮಾಸಿಕ  ಸಂತೆ ಕಾರ್ಯಕ್ರಮವನ್ನು ಶಾಸಕ‌ಜಿ.ಎಸ್.ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆ ಆರಂಭಿಸಲು ಸರ್ಕಾರ ಸೂಚಿಸಿದೆ

ರೋಣ: ಗ್ರಾಮೀಣ ಭಾಗದ ಸ್ವಸಹಾಯ ಸಂಘಗಳಲ್ಲಿ ತೊಡಗಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳನ್ನು ಮಾರಾಟ ಮಾಡಲು ವೇದಿಕೆ ಕಲ್ಪಿಸಿ ಆರ್ಥಿಕವಾಗಿ ಅಭಿವೃದ್ಧಿಪಡಿಸಲು ಉತ್ತೇಜನ ನೀಡುವುದಕ್ಕಾಗಿ ತಾಪಂ ಮಾಸಿಕ ಸಂತೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಪಟ್ಟಣದಲ್ಲಿ ಅನುಷ್ಠಾನಗೊಳಿಸಿದೆ. ಇದು ಸ್ತ್ರೀ ಸಬಲೀಕರಣಕ್ಕೆ ದಾರಿದೀಪವಾಗಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು‌.ಅವರು ಗುರುವಾರ ಪಟ್ಟಣದ ಸಂತೆ ಮಾರುಕಟ್ಟೆ ಆವರಣದಲ್ಲಿ ತಾಪಂದಿಂದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ, ಸಂಜೀವಿನಿ ಯೋಜನೆಯಡಿಯಲ್ಲಿ ಜರುಗಿದ ಮಾಸಿಕ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆ ಸಂಜೀವಿನಿ ಯೋಜನೆಯಡಿ ಆರ್ಥಿಕ ನೆರವು ಪಡೆದಿರುವ ಮಹಿಳಾ ಸ್ವಸಹಾಯ ಗುಂಪು ತಯಾರಿಸಿರುವ ಉತ್ಪನ್ನ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಈ ಸಂತೆ ಆಯೋಜಿಸಲಾಗಿದೆ. ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನ ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆ ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ಪಟ್ಟಣದಲ್ಲಿ ಈ ಸಂತೆ ಆರಂಭಿಸಲಾಗಿದೆ. ಇತಂಹ ಮಾಸಿಕ ಸಂತೆ ಮಹಿಳೆಯರ ಪಾಲಿಗೆ ದಾರಿದೀಪವಾಗುತ್ತವೆ, ಪ್ರತಿ ಗ್ರಾಮದಲ್ಲೂ ಸಹ ಮಾಸಿಕ ಸಂತೆ ಮಾಡಲು ನಮ್ಮ ಇಓ ಅವರಿಗೆ ಸೂಚನೆ ನೀಡಿದ್ದೇನೆ. ಇದರಿಂದ ಮಹಿಳಾ ಸಂಘಗಳು ಹಾಗೂ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಾರೆ. ಇಂದಿನ ಸಂತೆಯಲ್ಲಿ ಕೆಲವು ಸಂಘಗಳು ಭಾಗವಹಿಸಿವೆ. ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲೂ ಈ ತರಹದ ಸಂತೆ ಆರಂಭಿಸಲಾಗುವುದು. ಅಲ್ಲಿ ಹೆಚ್ಚಿನ ಸಂಘಗಳಿಗೆ ಅವಕಾಶ ಸಿಗಲಿದೆ.ಮಹಿಳೆಯರು ಆರ್ಥಿಕವಾಗಿ ಮುನ್ನಡೆ ಸಾಧಿಸಲು ಬೇಕಾದ ನೆರವು ನೀಡಲಾಗುವುದು‌ ಎಂದು ತಿಳಿಸಿದರು.

ಜಿಪಂ ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ ಮಾತನಾಡಿ, ಸಂಜೀವಿನಿ ಸಂಘದ ಉತ್ಪನ್ನವು ಮಾರುಕಟ್ಟೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ಅದರಲ್ಲಿ ವಿಭಿನ್ನತೆಯಿರಬೇಕು, ಉತ್ಪನ್ನದ ಗುಣಮಟ್ಟ ಮತ್ತು ಗ್ರಾಹಕರಿಗೆ ನೀಡುವಾಗ ಉತ್ತಮ ಪ್ಯಾಕೆಜಿಂಗ್ ಹೊಂದಿರಬೇಕು. ಆಗ ಮಾತ್ರ ಉತ್ಪನ್ನ ಜನರನ್ನು ತಲುಪುತ್ತವೆ, ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕ ಬೆಲೆ ನಿಗದಿಪಡಿಸಿದಾಗ ಮಾತ್ರ ಹೆಚ್ಚಿನ ವಸ್ತುಗಳು ಮಾರಾಟವಾಗುತ್ತವೆ ಈ ನಿಟ್ಟಿನಲ್ಲಿ ನೀವು ಕಾರ್ಯ ನಿರ್ವಹಿಸಬೇಕು ಎಂದರು.

ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ .ಬಿ. ಕಂದಕೂರ ಮಾತನಾಡಿ, ಜಿಪಂ ಸಿಇಓ ಅವರ ಮಾರ್ಗದರ್ಶನದಲ್ಲಿ ಇಂತಹ ಒಂದು ಪರಿಕಲ್ಪನೆ ಮಾಡಲಾಗಿದ್ದು, ಈ ಕಾರ್ಯಕ್ರಮ ಶಾಸಕರ ಅಧ್ಯಕ್ಷತೆಯಲ್ಲಿ ಮಾಡಲಾಗಿದೆ. ಮಾಸಿಕ ಸಂತೆಗಳಲ್ಲಿ ಹೆಚ್ಚಿನ ಸಂಘಗಳು ಪಾಲ್ಗೊಳ್ಳಬೇಕು. ಗುಣಮಟ್ಟದ ಹಾಗೂ ಪರಿಶುದ್ಧ ಉತ್ಪನ್ನ ತಯಾರಿಸಬೇಕು. ಉತ್ಪನ್ನಗಳ ಬ‌ಗ್ಗೆ ಪ್ರಚಾರ ಮಾಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರಗಪ್ಪ ಹಿರೇಮನಿ ತಾಲೂಕು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಉಮಾ ಮಂತೂರ, ತಾಲೂಕಿನ ಎಲ್ಲ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಸಂಜೀವಿನಿ ಸಿಬ್ಬಂದಿಗಳು ಸೇರಿದಂತೆ ಪಟ್ಟಣದ ಜನರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು