ಮೂಡುಬಿದಿರೆ: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆಯ ಕಚೇರಿಯಲ್ಲಿ ನಡೆಯಿತು.
ಹೊಸ ಬಸ್ ವ್ಯವಸ್ಥೆಗೆ ಪ್ರಸ್ತಾಪ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥೆಯ ನಾಮಫಲಕವನ್ನು ಮೂಡುಬಿದಿರೆಯ ಮುಖ್ಯ ಭಾಗದಲ್ಲಿ ತಾತ್ಕಾಲಿಕವಾಗಿ ಬಸ್ ತಂಗುವ ಸ್ಥಳದಲ್ಲಿ ಅಳವಡಿಸಬೇಕು. ಇದರಿಂದ ಜನರಿಗೆ ಅನುಕೂಲವಾಗಲಿದೆ. ಮಂಗಳೂರಿನಿಂದ ಮೂಡುಬಿದಿರೆ ಮಾರ್ಗವಾಗಿ ಸಾಗುವ ಸರ್ಕಾರಿ ಬಸ್ಗಳು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಪ್ರದೇಶಗಳಾದ ನೆಲ್ಲಿಕಾರು, ಶಿರ್ತಾಡಿ, ಪುತ್ತಿಗೆ, ಅಶ್ವಥಪುರ, ನಿರ್ಕೆರೆ, ಬಜ್ಪೆ ಮಾರ್ಗವಾಗಿ ಮಂಗಳೂರಿಗೆ ತಲುಪುವಂತೆ ಹೊಸ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸದಸ್ಯ ಸುರೇಶ್ ದೇವಾಡಿಗ ಸಭೆಯಲ್ಲಿ ಪ್ರಸ್ತಾಪಿಸಿದರು.
ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ ಚುರುಕುಮುಂಗಾರು ಗಾಳಿ ಮಳೆಯಿಂದ ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ಮೇಲೆ ಹಾಗೂ ವಿದ್ಯುತ್ ಕಂಬಗಳ ಮೇಲೆ ಉರುಳಿ ಬಿದ್ದ ಮರಗಳನ್ನು ಕೂಡಲೇ ತೆರವುಗೊಳಿಸುವಂತೆ ಅಧಿಕಾರಿಗೆ ಸೂಚಿಸಲಾಯಿತು. ಮೇ 12 ರಿಂದ 14 ರವರೆಗೆ 160 ಕಂಬಗಳು ಹಾಗೂ ತಂತಿಗಳ ಮೇಲೆ ಮರಗಳು ಬಿದ್ದಿದ್ದು, ಅದರಲ್ಲಿ 96 ಕಂಬಗಳ ಕೆಲಸ ಪೂರ್ಣಗೊಂಡಿದೆ. ಇನ್ನುಳಿದ 64 ಕಂಬಗಳ ಕೆಲಸ ಚಾಲ್ತಿಯಲ್ಲಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮಂಗಳೂರಿನಿಂದ ಹೆಚ್ಚುವರಿ ಲೈನ್ಮ್ಯಾನ್ಗಳನ್ನು ನಿಯೋಜನೆಗೊಳಿಸಿ ವಿದ್ಯುತ್ ತಂತಿ ಹಾಗೂ ಕಂಬಗಳ ಕೆಲಸ ನಡೆಸಲಾಗುತ್ತಿದೆ ಎಂದು ಮೆಸ್ಕಾಂ ಇಲಾಖಾಧಿಕಾರಿಗಳು ಸಭೆಯಲ್ಲಿ ತಿಳಿಸಿದರು.ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಂಚ ಗ್ಯಾರಂಟಿ ಯೋಜನೆಯ ವಿಷಯ ನಿರ್ವಾಹಕಿ ಸುನಂದಾ ಬಿ.ಜೈನ್ ಸ್ವಾಗತಿಸಿದರು.