ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

KannadaprabhaNewsNetwork |  
Published : Aug 07, 2024, 01:08 AM IST
6ಕೆಎಂಎನ್ ಡಿ11 | Kannada Prabha

ಸಾರಾಂಶ

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿದರೆ, ಇಲ್ಲ ಬರೀ 87 ಕೋಟಿ ಭ್ರಷ್ಟಚಾರವಾಗಿದೆ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್ ವರ್ಗಾವಣೆ ದಂಧೆ ಸೇರಿದಂತೆ ಈ ಸರ್ಕಾರ ಸಾಕಷ್ಟು ಭ್ರಷ್ಟಚಾರದಲ್ಲಿ ಮುಳುಗಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ರಾಜ್ಯದ ಇತಿಹಾಸದಲ್ಲೇ ನಡೆದಿರುವ ಬಹುದೊಡ್ಡ ವಾಲ್ಮೀಕಿ ಅಭಿವೃದ್ಧಿ ನಿಗಮ, ಮೈಸೂರು ಮುಡಾ ಹಗರಣಗಳ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಗ್ರಹಿಸಿದರು.

ಪಟ್ಟಣದ ಟಿಎಪಿಸಿಎಂಎಸ್ ರೈತಸಭಾಂಗಣದಲ್ಲಿ ಜೆಡಿಎಸ್-ಬಿಜೆಪಿ ಮೈಸೂರು ಚಲೋ ಪಾದಯಾತ್ರೆ ಬೆಂಬಲಿಸಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಗದ್ದೆ ನಾಟಿ ಕಾರ್‍ಯಕ್ರಮದ ಅಂಗವಾಗಿ ನಡೆದ ಪೂರ್ವಭಾವಿ ಕಾರ್‍ಯಕರ್ತರ ಸಭೆಯಲ್ಲಿ ಮಾತನಾಡಿದರು.

ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿದರೆ, ಇಲ್ಲ ಬರೀ 87 ಕೋಟಿ ಭ್ರಷ್ಟಚಾರವಾಗಿದೆ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್ ವರ್ಗಾವಣೆ ದಂಧೆ ಸೇರಿದಂತೆ ಈ ಸರ್ಕಾರ ಸಾಕಷ್ಟು ಭ್ರಷ್ಟಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದರು.

ವಾಲ್ಮೀಕಿ, ಮೈಸೂರು ಮುಡಾ ಹಗರಣದ ಹೊಣೆಹೊತ್ತು ಸಿಎಂ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್-ಬಿಜೆಪಿ ಮೈಸೂರು ಚಲೋ ಪಾದಯಾತ್ರೆ ನಡೆಸುತ್ತಿದೆ. ಪಾದಯಾತ್ರೆಯಲ್ಲಿ ಎರಡು ಪಕ್ಷದ ಹಲವು ನಾಯಕರು ಸೇರಿದಂತೆ ಸಾವಿರಾರು ಭಾಗವಹಿಸಿ ಯಶಸ್ವಿಗೊಳಿಸುತ್ತಿದ್ದಾರೆ ಎಂದರು.

ಪಾದಯಾತ್ರೆಯಲ್ಲಿ 10 ಕಿಮೀಗೆ ಒಂದು ವಿಧಾನಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಕಾರ್‍ಯಕರ್ತರು ಭಾಗವಹಿಸಲಿದ್ದಾರೆ. ಮದ್ದೂರು, ಮಂಡ್ಯ ಮುಗಿಸಿ ಗುರುವಾರ ಬೆಳಗ್ಗೆಯಿಂದ ತೂಬಿನಕೆರೆ ಕೈಗಾರಿಕೆ ಪ್ರದೇಶದ ಹೊರಡುವ ಪಾದಯಾತ್ರೆಯ ಜವಾಬ್ದಾರಿಯನ್ನು ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನೀಡಲಾಗಿದೆ ಎಂದರು.

ಪಾದಯಾತ್ರೆಯಲ್ಲಿ ಅಂದು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಎರಡು ಪಕ್ಷಗಳ ಕಾರ್‍ಯಕರ್ತರು ಕನಿಷ್ಠ 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು. ಅದಕ್ಕಾಗಿ ಬಸ್‌ಗಳ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದರು.

ಎಚ್ಡಿಕೆ ಆ.11ಕ್ಕೆ ಭತ್ತನಾಟಿ:

ಎರಡು ವರ್ಷದಿಂದ ಬರಗಾಲದಿಂದ ಬಳಲಿದ್ದ ರೈತರಿಗೆ ಎಚ್.ಡಿ.ಕುಮಾರಸ್ವಾಮಿ ಅವರು ಗೆದ್ದು ಮಂತ್ರಿಯಾದ ಬಳಿಕ ಉತ್ತಮ ಮಳೆಯಾಗಿ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಅದಕ್ಕಾಗಿ ಆ.11ರಂದು ತಾಲೂಕಿನ ಅರಳಕುಪ್ಪೆ-ಸೀತಾಪುರ ಗ್ರಾಮ ವ್ಯಾಪ್ತಿಯ ಕಾವೇರಿ ದಡದ ಮೇಲೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಗದ್ದೆ ನಾಟಿ ಮಾಡುವ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಾವೇರಿ ಮಾತೆಗೆ ಪೂಜೆಸಲ್ಲಿಸಿ, ಬಳಿಕ ಭತ್ತದ ನಾಟಿಗೆ ಚಾಲನೆ ನೀಡಲಿದ್ದಾರೆ. ಹಾಗಾಗಿ ಆ ಕಾರ್‍ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಕಾರ್‍ಯಕರ್ತರು ಭಾಗವಹಿಸಬೇಕೆಂದು ಮನವಿ ಮಾಡಿದರು.

ಶಾಸಕರು ಅಮೆರಿಕಾದಲ್ಲಿಯೇ ನಾಟಿ ಮಾಡಲಿ:

ಜಿಪಂ ಮಾಜಿ ಸದಸ್ಯ ಎಚ್.ಮಂಜುನಾಥ್ ಮಾತನಾಡಿ, ಮೇಲುಕೋಟೆ ಕ್ಷೇತ್ರದ ಶಾಸಕರು ಗೆದ್ದ ಬಳಿಕ ಕ್ಷೇತ್ರದಲ್ಲಿ ಇದದ್ದೇ ವಿರಳ. ಸ್ವಾತಂತ್ರ್ಯ ದಿನಾಚರಣೆ, ಕನ್ನಡ ರಾಜ್ಯೋತ್ಸವ ಸೇರಿದಂತೆ ಅನೇಕ ರಾಷ್ಟ್ರಹಬ್ಬಕ್ಕೂ ಗೈರಾದರು. ಜತೆಗೆ ಬರಗಾಲದಲ್ಲಿ ರೈತರ ಕಷ್ಟಕ್ಕೆ ಸ್ಪಂದನೆ ನೀಡಲಿಲ್ಲ. ಇದೀಗ ಉತ್ತಮ ಮಳೆಯಾಗಿ ರೈತರು ಸಂಭ್ರಮದಲ್ಲಿದ್ದಾರೆ. ಇಂತಹ ಸಂಭ್ರಮದಲ್ಲೂ ಶಾಸಕರು ಕ್ಷೇತ್ರದಲ್ಲಿಲ್ಲ ಎಂದರು.

ಅಮೆರಿಕಾದಲ್ಲಿರುವ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅವರು ಅಲ್ಲಿಯೇ ನಾಟಿ ಮಾಡಲಿ. ನಾವು ರೈತನ ಮಗ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದ ಅರಳಕುಪ್ಪೆಯಲ್ಲಿಯೇ ಭತ್ತದ ನಾಟಿ ಮಾಡಿಸುತ್ತೇವೆ ಎಂದು ಕಿಡಿಕಾರಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್.ಎ.ಮಲ್ಲೇಶ್, ಜಿಪಂ ಮಾಜಿ ಸದಸ್ಯರಾದ ಸಿ.ಅಶೋಕ್, ಎಚ್. ಮಂಜುನಾಥ್, ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ಮಾಜಿ ಅಧ್ಯಕ್ಷ ಸತೀಶ್, ಮುಖಂಡರಾದ ಲಿಂಗರಾಜು(ಗುಣ), ದೇವಪ್ಪ, ಸಗಾಯಂ ಸೇರಿದಂತೆ ಹಲವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ