ಪ್ರತಿಯೊಬ್ಬರೂ ಆರೋಗ್ಯವಾಗಿರಲು ವೈಯಕ್ತಿಕ ಸ್ವಚ್ಛತೆ ಹಾಗೂ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಜೊತೆಗೆ ಸಮತೋಲನ ಆಹಾರ, ಯೋಗ, ಧ್ಯಾನ, ವ್ಯಾಯಾಮ ಇಂತಹ ಉತ್ತಮ ಆರೋಗ್ಯಕರ ಚಟುವಟಿಕೆಗಳಿಂದ ಆರೋಗ್ಯಕರ ಸಮಾಜ ನಿರ್ಮಿಸಬಹುದು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಮನುಷ್ಯ ಉತ್ತಮ ಆರೋಗ್ಯವನ್ನು ಹಣ ನೀಡಿ ಕೊಂಡುಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ತಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ ಬೆನ್ನೂರ್ ಹೇಳಿದರು.
ತಾಲೂಕಿನ ಗೌಡಹಳ್ಳಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಟಿ.ಎಂ.ಹೊಸೂರು ಆರೋಗ್ಯ ಕೇಂದ್ರದಿಂದ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆಯಲ್ಲಿ ಮಾತನಾಡಿದರು.
ಪ್ರತಿಯೊಬ್ಬರೂ ಆರೋಗ್ಯವಾಗಿರಲು ವೈಯಕ್ತಿಕ ಸ್ವಚ್ಛತೆ ಹಾಗೂ ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಜೊತೆಗೆ ಸಮತೋಲನ ಆಹಾರ, ಯೋಗ, ಧ್ಯಾನ, ವ್ಯಾಯಾಮ ಇಂತಹ ಉತ್ತಮ ಆರೋಗ್ಯಕರ ಚಟುವಟಿಕೆಗಳಿಂದ ಆರೋಗ್ಯಕರ ಸಮಾಜ ನಿರ್ಮಿಸಬಹುದು ಎಂದರು.
ಇತ್ತೀಚಿನ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆ, ಪಾರ್ಶಿಯಂತಹ ಖಾಯಿಲೆಗಳು ಹೆಚ್ಚಾಗುತ್ತಿದೆ ಎಂದು ಎಚ್ಚರಿಸಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಸಿ.ಚಂದನ್ ಮಾತನಾಡಿ, ಪ್ರತಿ ದಿನ ತಾಪಮಾನ ಹೆಚ್ಚಾಗುತ್ತಿದ್ದು ಮುಂಜಾಗ್ರತೆಗಾಗಿ ಹೆಚ್ಚು ನೀರು ಸೇವನೆ ಮಾಡಿ ಆದಷ್ಟು ನೆರಳಿನಲ್ಲಿರಿದ್ದು, ನೀರಿನಂಶ ಹೆಚ್ಚಾಗಿರುವ ಸೌತೆಕಾಯಿ, ಖರ್ಬುಜ, ದ್ರಾಕ್ಷಿ, ಕಲ್ಲಂಗಡಿ ಇತ್ಯಾದಿ ಹಣ್ಣುಗಳನ್ನು ಯಥೇಚ್ಛವಾಗಿ ಬಳಸುವುದು. ಹೊರಗಡೆ ಹೋಗುವಾಗ ತಪ್ಪದೇ ಛತ್ರಿ ಅಥವಾ ಟವೆಲ್ ಅಥವಾ ಟೋಪಿ ಬಳಸಿ ತಲೆ ಸುತ್ತು, ಜ್ವರ, ಸುಸ್ತು ಇತ್ಯಾದಿ ಕಂಡು ಬಂದಲ್ಲಿ ತಕ್ಷಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದರು.
ಈ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಕಾವ್ಯ, ಪ್ರಮುಖರಾದ ಯಶೋದಮ್ಮ, ಪೂಜಾ, ಪ್ರೀತಿ, ಸುಷ್ಮಾ ಆಶಾ ಕಾರ್ಯಕರ್ತೆ ನಂದಿನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರುಗಳು ಹಾರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.