ಮಲೆನಾಡಿನ 6 ತಾಲೂಕುಗಳ ಶಾಲೆಗಳ ಜತೆಗೆ ಕಾಲೇಜಿಗೂ ರಜೆ । ಹಲವೆಡೆ ಮರಗಳು ಬಿದ್ದು ಹಾನಿ,
ಜಿಲ್ಲೆಯಲ್ಲಿ ಶುಕ್ರವಾರವೂ ಮಳೆಯ ಅಬ್ಬರ ಜೋರಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಶನಿವಾರವೂ ಮಲೆನಾಡಿನ 6 ತಾಲೂಕುಗಳ ಅಂಗನವಾಡಿ, ಶಾಲೆ ಮತ್ತು ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.
ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ ಹಾಗೂ ಎನ್.ಆರ್.ಪುರ ತಾಲೂಕುಗಳಿಗೆ ಈ ರಜೆ ಅನ್ವಯ ವಾಗಲಿದ್ದು, ಇನ್ನುಳಿದಂತೆ ತರೀಕೆರೆ, ಕಡೂರು ಹಾಗೂ ಅಜ್ಜಂಪುರ ತಾಲೂಕುಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರುವುದರಿಂದ ಎಂದಿನಂತೆ ಶಾಲೆ, ಕಾಲೇಜುಗಳು ನಡೆಯಲಿವೆ.ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಮಳೆ ಆರ್ಭಟ ಜೋರಾಗಿದ್ದರಿಂದ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳ ಪ್ರವಾಹ ಇನ್ನಷ್ಟು ಏರಿಕೆಯಾಗಿದೆ. ಆಸುಪಾಸಿನ ತಗ್ಗಿನ ಪ್ರದೇಶಗಳು ಜಲಾವೃತವಾಗಿವೆ. ಹೊರನಾಡು - ಕಳಸ ಸಂಪರ್ಕದ ಹೆಬ್ಬಾಳ್ ಸೇತುವೆ ಮೇಲೆ ಇನ್ನಷ್ಟು ನೀರು ಏರಿಕೆಯಾಗಿದೆ. ಶೃಂಗೇರಿಯ ಗಾಂಧಿ ಮೈದಾನ, ಕೆವಿಆರ್ ಬೈಪಾಸ್, ಕುರುಬಗೇರಿ ರಸ್ತೆಗಳ ಜಲಾವೃತವಾಗಿದ್ದವು.
ಚಿಕ್ಕಮಗಳೂರಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 179 ರಲ್ಲಿ ಗವನಹಳ್ಳಿ ಗ್ರಾಮದ ಬಳಿ ಬೆಳಿಗ್ಗೆ ಬೃಹತ್ ಗಾತ್ರದ ಮರವೊಂದು ದಿಢೀರ್ ರಸ್ತೆಗೆ ಬಿದ್ದ ಪರಿಣಾಮ 2 ಕಾರುಗಳ ಮುಂಭಾಗ ಜಖಂ ಆಗಿದ್ದು, ಆಟೋವೊಂದಕ್ಕೆ ಹಾನಿಯಾಗಿದೆ. ಮಲೆನಾಡಿನ ಹಲವೆಡೆ ಮರಗಳು ಬಿದ್ದು ಕಳೆದ 15 ದಿನಗಳಿಂದ ವಿದ್ಯುತ್ ಸಂಪರ್ಕದಲ್ಲಿ ಅಡಚಣೆಯಾಗಿದೆ. ಮಲೆನಾಡಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಇಲ್ಲದಂತಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಪಟ್ಟಣ ವ್ಯಾಪ್ತಿಯಲ್ಲೂ ವಿದ್ಯುತ್ ಏರುಪೇರಾಗುತ್ತಿದೆ.
ಮಳೆ ಪ್ರಮಾಣ
26 ಕೆಸಿಕೆಎಂ 3ಚಿಕ್ಕಮಗಳೂರಿನ ಗವನಹಳ್ಳಿ ಗ್ರಾಮದ ಬಳಿ ಬೃಹತ್ ಮರ ಬಿದ್ದ ಪರಿಣಾಮ ಎರಡು ಕಾರ್ಗಳು ಜಖಂ ಆಗಿರುವುದು.