ಜನತಾ ಕಾಲೋನಿ-ಚನಮಣಿ ಸಂಪರ್ಕ ಸೇತುವೆ ವಿಕ್ಷಿಸಿದ ಶಾಸಕ ಟಿ.ಡಿ.ರಾಜೇಗೌಡ
ಕನ್ನಡಪ್ರಭ ವಾರ್ತೆ ನರಸಿಂಹರಾಜಪುರ
ಈ ಬಾರಿ ಸುರಿದ ಭಾರೀ ಮಳೆ ಗಾಳಿಗೆ ಶೃಂಗೇರಿ ಕ್ಷೇತ್ರದ ವ್ಯಾಪ್ತಿಯಲ್ಲಿ 100 ಕೋಟಿಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.ಮಂಗಳವಾರ ತಾಲುಕಿನ ಕಡಹಿನಬೈಲು ಗ್ರಾಪಂ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ಜನತಾ ಕಾಲೋನಿ-ಚನಮಣಿ ಸಂಪರ್ಕ ಸೇತುವೆ ಹಾಗೂ ಆಲಂದೂರು ಗ್ರಾಮದ ಸಂಪರ್ಕ ಸೇತುವೆಯನ್ನು ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಆರೇಳು ವರ್ಷಗಳಿಂದ ಜಿಲ್ಲೆಯ ಶೃಂಗೇರಿ, ಕೊಪ್ಪ, ಬಾಳೆಹೊನ್ನೂರು, ಮಾಗುಂಡಿ ಹಾಗೂ ನರಸಿಂಹರಾಜಪುರ ಭಾಗದಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದೆ. ತಾಲೂಕಿನ ಕಟ್ಟಿನಮನೆ ಭಾಗದಲ್ಲಿ ಮರ ಬಿದ್ದು ಸಾವನ್ನಪ್ಪಿದವರಿಗೆ ಪರಿಹಾರ ವಿತರಿಸಲಾಗಿದೆ.
ಮಳೆಯಿಂದ ಅಧಿಕೃತ ದಾಖಲೆಗಳಿರುವ ಮನೆ ಕಳೆದುಕೊಂಡವರಿಗೆ 1.20 ಲಕ್ಷ ರು. ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗಿದೆ. ಭಾಗಶಃ ಹಾನಿಗೊಳಗಾದ ಮನೆಗಳಿಗೆ 50 ಸಾವಿರ ಹಾಗೂ ಎಂಜಿನಿಯರ್ ನಿರ್ಧರಿಸಿದ ಪರಿಹಾರದ ಮೊತ್ತವನ್ನು ವಿತರಿಸಲಾಗಿದೆ. ಅನಧಿಕೃತ ಮನೆಗಳು ಹಾನಿಯಾಗಿದ್ದರೆ 1 ಲಕ್ಷದವರೆಗೆ ಪರಿಹಾರ ವಿತರಿಸಲಾಗಿದೆ. ಮಳೆ ಕಡಿಮೆಯಾದರೂ ಮನೆಗಳ ಹಾನಿ ನಿಲ್ಲದಿರುವುದರಿಂದ ಎಷ್ಟು ಮನೆ ಹಾನಿಗೊಳಗಾಗಿವೆ? ಎಂದು ಅಧಿಕೃತವಾಗಿ ಹೇಳಲು ಸಾಧ್ಯವಾಗುವುದಿಲ್ಲ. ಜಿಲ್ಲೆಯ ಐದು ಜನ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಅತಿಹೆಚ್ಚು ಅನುದಾನ ನೀಡುವಂತೆ ಒತ್ತಡ ತರಲಾಗುವುದು ಎಂದರು.
ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬಿಜೆಪಿಯವರು ಟೀಕೆ ಮಾಡುವ ರಾಜಕಾರಣ ಬಿಟ್ಟು ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಲಿ ಎಂದು ಆಗ್ರಹಿಸಿದರು.
ಈ ವೇಳೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್, ಕಡಹಿನಬೈಲು ಗ್ರಾಪಂ ಅಧ್ಯಕ್ಷೆ ಶೈಲಾ, ಉಪಾಧ್ಯಕ್ಷ ಸುನಿಲ್ ಕುಮಾರ್, ಸದಸ್ಯರಾದ ಎ.ಬಿ.ಮಂಜುನಾಥ್, ಚಂದ್ರಶೇಖರ್, ವಾಣಿನರೇಂದ್ರ, ಲಿಲ್ಲಿಮ್ಯಾಥ್ಯೂ. ಮುಖಂಡರಾದ ಗೇರುಬೈಲುನಟರಾಜ್, ಈ.ಸಿ.ಜೋಯಿ, ಉಪೇಂದ್ರ, ನರೇಂದ್ರ, ಸುಂದರೇಶ್. ಸದಾಶಿವ, ಎಸ್.ಡಿ.ರಾಜೇಂದ್ರ, ಮನು, ಎಂ.ಆರ್. ರವಿಶಂಕರ್, ಎ.ಬಿ.ಪ್ರಶಾಂತ್, ನಂದೀಶ್, ಅಧಿಕಾರಿಗಳು ಮತ್ತಿತರರಿದ್ದರು.