ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದ ಸಿದ್ದರಾಮಯ್ಯ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜನತಾದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಸುತ್ತೋಲೆಗಳಿಗೆ ತಾಲೂಕು ಆಡಳಿತದಿಂದ ಸ್ಪಂದನೆ ಸಿಗುತ್ತಿಲ್ಲ. ತಾಲೂಕು ಆಡಳಿತ ನಡೆಸುವ ಎಲ್ಲಾ ಅಧಿಕಾರಿಗಳಿಗೆ ಅಪಾರವಾದ ಒತ್ತಡವಿದೆಯಾದರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಂತಹಾಗಬೇಕು. ಕಂದಾಯ ಮತ್ತು ಭೂಮಾಪನ ಇಲಾಖೆ ಸರಿಯಾದರೆ ತಾಲೂಕಿನ ಬಹುತೇಕ ಸಾರ್ವಜನಿಕರ ಮತ್ತು ರೈತರ ಸಮಸ್ಯೆ ಬಗೆಹರಿಸಬಹುದು ಎಂದರು.
ಬಗರ್ ಹುಕುಂ ಸಾಗುವಳಿದಾರರಿಗೆ ಇದೆ ಜು.15ರಂದು ಸಾಗುವಳಿ ಚೀಟಿ ನೀಡಲಾಗುವುದು. ಈ ಸಂಬಂಧ ನಾವೇ ಖುದ್ದಾಗಿ ತೆರಳಿ ಸ್ಥಳ ಪರಿಶೀಲನೆ ಮಾಡಲಾಗುವುದು. ಈಗ 1999ರ ಹಿಂದೆ ಫಾರಂ ನಂಬರ್ 53ರಲ್ಲಿ ಅರ್ಜಿ ಹಾಕಿರುವ ಫಲಾನುಭವಿಗಳಿಗೆ ಮಾತ್ರ ಸಾಗುವಳಿ ಚೀಟಿ ನೀಡಲಾಗುವುದು. ಫಾರಂ ನಂಬರ್ 57ರಲ್ಲಿ ಅರ್ಜಿ ಹಾಕಿರುವವರಿಗೆ ನಂತರದ ದಿನಗಳಲ್ಲಿ ಸಾಗುವಳಿ ಚೀಟಿ ನೀಡಲಾಗುವುದು. ಯಾವುದೇ ರೈತರು ಸಾಗುವಳಿ ಚೀಟಿಗಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದು ಬೇಡ ಎಂದರು.ಗ್ರಾಮೀಣ ಪ್ರದೇಶದಲ್ಲೂ ನಿವೇಶನ ರಹಿತರಿಗೆ ನಿವೇಶನ ಕೊಡಲು ಚಿಂತನೆ ನಡೆದಿದೆ. ಮುಂದಿನ ತಿಂಗಳು ನಡೆಯುವ ಅಧಿವೇಶದ ಬಳಿಕ ನಿವೇಶನ ನೀಡಲಾಗುವುದು. ಪ್ರತಿ ಗ್ರಾಮಗಳಲ್ಲಿ ಸ್ಮಶಾನಗಳಿಗೆ ಜಾಗಗಳನ್ನು ನೀಡಿ ಅಭಿವೃದ್ಧಿಪಡಿಸುವ ಕೆಲಸ ಆಗಬೇಕು ಈ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸರ್ಕಾರಿ ಜಾಗ ಹುಡುಕುವಂತೆ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ ಸೇರಿ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ವಿವಿಧ ಇಲಾಖೆಗಳಲ್ಲಿ ನೀಡಲಾಗುವ ಯೋಜನೆಗಳ ಹಕ್ಕು ಪತ್ರ ಹಾಗೂ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.