ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌

KannadaprabhaNewsNetwork |  
Published : May 11, 2025, 11:54 PM ISTUpdated : May 12, 2025, 09:37 AM IST
ಹೈಕೋರ್ಟ್‌  | Kannada Prabha

ಸಾರಾಂಶ

ಅಪ್ರಾಪ್ತೆ ಮೇಲಿನ ಅತ್ಯಾಚಾರ ದೃಢಪಡಿಸಲು ವೈದ್ಯಕೀಯ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಸಾಕ್ಷ್ಯಗಳು ಲಭ್ಯವಿಲ್ಲದ ಸಂದರ್ಭದಲ್ಲಿ ಯಾವುದೇ ತಾಯಿ ದೂರು ದಾಖಲಿಸುವ ಮೂಲಕ ತನ್ನ ಮಗಳ ಜೀವನ ಹಾಳುಮಾಡುವುದಿಲ್ಲ ಎಂಬ ಏಕೈಕ ಅಂಶ ಆಧರಿಸಿ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ಎಂದು ಹೈಕೋರ್ಟ್‌ ಆದೇಶಿಸಿದೆ.

ವೆಂಕಟೇಶ್‌ ಕಲಿಪಿ

 ಬೆಂಗಳೂರು : ಅಪ್ರಾಪ್ತೆ ಮೇಲಿನ ಅತ್ಯಾಚಾರ ದೃಢಪಡಿಸಲು ವೈದ್ಯಕೀಯ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಸಾಕ್ಷ್ಯಗಳು ಲಭ್ಯವಿಲ್ಲದ ಸಂದರ್ಭದಲ್ಲಿ ಯಾವುದೇ ತಾಯಿ ದೂರು ದಾಖಲಿಸುವ ಮೂಲಕ ತನ್ನ ಮಗಳ ಜೀವನ ಹಾಳುಮಾಡುವುದಿಲ್ಲ ಎಂಬ ಏಕೈಕ ಅಂಶ ಆಧರಿಸಿ ಆರೋಪಿಯನ್ನು ದೋಷಿಯೆಂದು ನಿರ್ಧರಿಸಲಾಗದು ಎಂದು ಹೈಕೋರ್ಟ್‌ ಆದೇಶಿಸಿದೆ.

ಅಪ್ರಾಪ್ತೆ ಮೇಲಿನ ಅತ್ಯಾಚಾರ ಆರೋಪದ ಮೇಲೆ ತನಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಮಂಗಳೂರಿನ ನಿವಾಸಿ ಮನ್ಸೂರ್‌ (45) ಎಂಬಾತ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅವರ ಪೀಠ ಈ ಆದೇಶ ಮಾಡಿದೆ.

ಆರೋಪಿ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ವಿಚಾರಣಾ ನ್ಯಾಯಾಲಯ ಆರೋಪಿಯನ್ನು ದೋಷಿಯಾಗಿ ಪರಿಗಣಿಸಿದೆ. ಕೃತ್ಯ ನಡೆಯದಿದ್ದರೂ ಯಾವುದೇ ತಾಯಿ ದೂರು ದಾಖಲಿಸುವ ಮೂಲಕ ಮಗಳ ಜೀವನ ಹಾಳು ಮಾಡುವುದಿಲ್ಲವೆಂದು ಸರ್ಕಾರಿ ಅಭಿಯೋಜಕಿ ವಾದಿಸಿದ್ದಾರೆ. ಆದರೆ, ಸಂತ್ರಸ್ತೆಯ ಹೇಳಿಕೆ ನಂಬಲರ್ಹ ಮತ್ತು ವಿಶ್ವಾಸಾರ್ಹವಾಗಿಲ್ಲ ಎಂದಾಗ ಆರೋಪಿಯನ್ನು ದೋಷಿಯಾಗಿ ಪರಿಗಣಿಸಲಾಗದು. ಯಾವುದೇ ತಾಯಿ ದೂರು ದಾಖಲಿಸಿ ಮಗಳ ಜೀವನ ಹಾಳು ಮಾಡುವುದಿಲ್ಲ ಎಂಬ ಏಕೈಕ ಆಧಾರದಲ್ಲಿ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಪ್ರಕರಣದಲ್ಲಿ ಸಂತ್ರಸ್ತೆ ಬಲವಂತದ ಲೈಂಗಿಕ ಕ್ರಿಯೆಗೆ ಒಳಗಾದ ಬಗ್ಗೆ ಕುರುಹಗಳಿಲ್ಲ. ಜನನಾಂಗದ ಭಾಗದಲ್ಲಿ ಯಾವುದೇ ಗಾಯ ಪತ್ತೆಯಾಗಿಲ್ಲ. ಕನ್ಯಾಪೊರೆ ಹಾನಿಗೆ ಒಳಗಾಗಿಲ್ಲ ಎಂದು ವೈದ್ಯಕೀಯ ವರದಿ ದೃಢಪಡಿಸುತ್ತದೆ. ಜಪ್ತಿ ಮಾಡಿದ ವಸ್ತುಗಳಲ್ಲಿ ವೀರ್ಯದ ಕಲೆಗಳು ಕಂಡುಬಂದಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತಿಳಿಸುತ್ತದೆ. ದಾಖಲೆ ಪರಿಶೀಲಿಸಿದರೆ ಚರ್ಚ್‌ ಆಸ್ತಿಯ ವಿಚಾರವಾಗಿ ಆರೋಪಿಯೊಂದಿಗೆ ವೈಮನಸ್ಸು ಹೊಂದಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಸ್ಥಳೀಯ ಮುಖಂಡನ ಸಲಹೆ, ಸೂಚನೆ ಮೇರೆಗೆ ಸಂತ್ರಸ್ತೆಯ ತಾಯಿ ದೂರು ದಾಖಲಿಸಿರುವುದು ಕಂಡುಬರುತ್ತಿದೆ. ಈ ವಿಚಾರ ಪರಿಗಣಿಸುವಲ್ಲಿ ಅಧೀನ ನ್ಯಾಯಾಲಯ ವಿಫಲವಾಗಿದೆ. ಆದ್ದರಿಂದ ಅದರ ಆದೇಶದಲ್ಲಿ ಮಧ್ಯಪ್ರವೇಶ ಮಾಡಬೇಕಿದೆ ಎಂದು ತೀರ್ಮಾನಿಸಿದ ಹೈಕೋರ್ಟ್‌, ಆರೋಪಿಗೆ ವಿಧಿಸಲಾಗಿದ್ದ 10 ವರ್ಷ ಜೈಲು ಶಿಕ್ಷೆಯನ್ನು ರದ್ದುಪಡಿಸಿದೆ.

ಪ್ರಕರಣದ ವಿವರ: ಸಂತ್ರಸ್ತೆಯ ತಾಯಿ 2011ರ ಜು.22ರಂದು ಪೊಲೀಸರಿಗೆ ದೂರು ನೀಡಿ, 2011ರ ಜು.9ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ತನ್ನ ಪುತ್ರಿ (16 ವರ್ಷ) ಮೇಲೆ ಮೇಲ್ಮನವಿದಾರ ಅತ್ಯಾಚಾರ ಎಸಗಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದರು. ಜು.24ರಂದು ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ತನಿಖೆ ಪೂರ್ಣಗೊಳಿಸಿ ಅತ್ಯಾಚಾರ ಮತ್ತು ಜೀವ ಬೆದರಿಕೆ ಅಪರಾಧದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಆರೋಪಿಗೆ ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ, 15 ಸಾವಿರ ರು. ದಂಡ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಆದೇಶ ರದ್ದು ಕೋರಿ ಆರೋಪಿ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದ.

ಆರೋಪಿ ಪರ ವಕೀಲರು, ಲೈಂಗಿಕ ಕ್ರಿಯೆ ನಡೆದಿದೆ ಎಂದು ಹೇಳಿದರೂ ಸಂತ್ರಸ್ತೆಯ ಖಾಸಗಿ ಭಾಗದಲ್ಲಿ ಗಾಯಗಳು ಪತ್ತೆಯಾಗಿಲ್ಲ. ಆರೋಪಿಗೂ ಯಾವುದೇ ಗಾಯಗಳು ಆಗಿಲ್ಲ. ಕೇವಲ ಸಂತ್ರಸ್ತೆ, ಆಕೆಯ ತಾಯಿ ಮತ್ತು ಸಹೋದರನ ಹೇಳಿಕೆ ಆಧರಿಸಿ ಅಧೀನ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ ಎಂದು ಆಕ್ಷೇಪಿಸಿದ್ದರು.

ಪೊಲೀಸರ ಪರ ಸರ್ಕಾರಿ ಅಭಿಯೋಜಕರು, ಯಾವ ರೀತಿ ಆರೋಪಿ ಕೃತ್ಯ ಎಸಗಿದ ಎಂಬ ಬಗ್ಗೆ ಸಂತ್ರಸ್ತೆ ಸ್ಪಷ್ಟವಾಗಿ ಹೇಳಿಕೆ ನೀಡಿದ್ದಾರೆ. ದೂರು ದಾಖಲಿಸಿ ಯಾವ ತಾಯಿಯೂ ಮಗಳ ಜೀವನ ಹಾಳು ಮಾಡಲು ಬಯಸುವುದಿಲ್ಲ. ಆದ್ದರಿಂದ ಅಧೀನ ನ್ಯಾಯಾಲಯ ಆರೋಪಿಗೆ ವಿಧಿಸಿರುವ ಶಿಕ್ಷೆ ಎತ್ತಿ ಹಿಡಿಯಬೇಕು ಎಂದು ಕೋರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನರೇಗಾ ಮರುಜಾರಿವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ
ಡ್ರಗ್ಸ್‌ ವಿರುದ್ಧ ಸಿಎಂ ತವರಿಂದಲೇ ಹೋರಾಟ : ವಿಜಯೇಂದ್ರ