ಸವಣೂರು: ನವಾಬ ನಗರಿಯ ಐತಿಹ್ಯವುಳ್ಳ ನೂರಾರು ವರ್ಷ ಇತಿಹಾಸ ಸಾರುವ ಮೋತಿ ತಲಾಬ ಕೆರೆ ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಒಡ್ಡು ಜಿನುಗಿ ರೈತರು, ಸ್ಥಳೀಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದು, ಕೋಡಿ ಬೀಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ.
ತಹಸೀಲ್ದಾರ್ ಭರತರಾಜ್ ಕೆ.ಎನ್. ಸ್ಥಳಕ್ಕೆ ಭೆಟ್ಟಿ ನೀಡಿ ಪರಿಶೀಲಿಸಿದರು. ಕೂಡಲೇ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ, ಕೆರೆ ಒಡ್ಡು ರಕ್ಷಣೆಗೆ ಅವಶ್ಯ ಕಾಮಗಾರಿ ಆರಂಭಿಸಲು ಸೂಚಿಸಿದರು. ಅಧಿಕಾರಿಗಳು ಕಾರ್ಮಿಕರ ತಂಡದೊಂದಿಗೆ ಆಗಮಿಸಿ ರಾತ್ರಿ ಹೊರ ಸೂಸುತ್ತಿದ್ದ ನೀರನ್ನು ತಡೆಯಲು ಪ್ರಯತ್ನಿಸಿದ್ದಾರೆ.
ಬುಧವಾರ ಬೆಳಗ್ಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸ್ಥಳಕ್ಕೆ ಭೆಟ್ಟಿ ನೀಡಿ ಪರಿಶೀಲನೆ ಕೈಗೊಂಡರು. ಆನಂತರ ಮಾತನಾಡಿ, ಈಗಾಗಲೇ ನೀರಾವರಿ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಯಾವುದೇ ರೀತಿಯಲ್ಲಿ ರೈತರು ಹಾಗೂ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಕೆರೆಯ ವಿಸ್ತೀರ್ಣ ಹೆಚ್ಚಿದೆ. ಕೆರೆ ಸುತ್ತಲೂ ಕೂಡಲೇ ಕಾಮಗಾರಿಯನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದರು.ತಹಸೀಲ್ದಾರ್ ಭರತರಾಜ್ ಕೆ.ಎನ್., ತಾಪಂ ಇಒ ನವೀನಪ್ರಸಾದ ಕಟ್ಟಿಮನಿ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ಮುಖ್ಯ ಎಂಜಿನಿಯರ್ ನಾಗರಾಜ ಮಿರ್ಜಿ, ರೈತ ಸಂಘದ ಪದಾಧಿಕಾರಿ ಸಂಗಮೇಶ ಪೀತಾಂಭ್ರಶೆಟ್ಟಿ ಹಾಗೂ ಇತರರು ಇದ್ದರು.