ಕನ್ನಡಪ್ರಭ ವಾರ್ತೆ ಸಕಲೇಶಪುರತಾಲೂಕಿನ ಬಿಸಿಲೆ ಘಾಟಿ ವ್ಯಾಪ್ತಿಯಲ್ಲಿ ಸೋಮವಾರ ಸುರಿದ ಭಾರೀ ಮಳೆಗೆ ದಟ್ಟ ಅರಣ್ಯ ಪ್ರದೇಶದಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸುಮಾರು ಮೂರು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಮರ ಬಿದ್ದ ಪರಿಣಾಮ ಕುಕ್ಕೆ ಸುಬ್ರಹ್ಮಣ್ಯ-ವನಗೂರು-ಶನಿವಾರಸಂತೆ-ಸಕಲೇಶಪುರ ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಈ ಮಾರ್ಗದಲ್ಲಿ ನಿತ್ಯ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳು ಹಾಗೂ ಖಾಸಗಿ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು. ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳ ದರ್ಶನ ಮುಗಿಸಿ ವಾಪಸಾಗುತ್ತಿದ್ದ ಭಕ್ತರ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿಲುಕಿದ್ದವು. ಇದರಿಂದ ಮಕ್ಕಳು, ಮಹಿಳೆಯರು ಹಾಗೂ ವೃದ್ಧರು ಭಾರೀ ಮಳೆಯ ನಡುವೆಯೇ ಪರದಾಡುವಂತಾಯಿತು.