ರಾಮನಗರ: ನಗರಸಭೆ ವ್ಯಾಪ್ತಿಯಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆ ಅಥವಾ ಸರ್ಕಾರಿ ಕಚೇರಿಗಳ ಕಟ್ಟಡಗಳಿಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮತ್ತು ನಗರಸಭೆ ಅಧಿಕಾರಿಗಳಿಗೆ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಖಡಕ್ ಸೂಚನೆ ನೀಡಿದರು.
ಮಕ್ಕಳ ಸುರಕ್ಷತೆ ಮತ್ತು ಅವರ ಸಮಗ್ರ ವಿಕಾಸದ ದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳ ಬದಲಾಗಿ ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವ ಹಿಸುವುದು ಅತ್ಯಂತ ಸೂಕ್ತವಾಗಿದೆ. ನಗರ ಪ್ರದೇಶ ವ್ಯಾಪ್ತಿಯಲ್ಲಿ 81 ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿದ್ದು, ಇದರಲ್ಲಿ ಸುಮಾರು 3 ಸಾವಿರ ಮಕ್ಕಳು ಇದ್ದಾರೆ.
10 ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ :ಈ 81 ಅಂಗನವಾಡಿಗಳ ಪೈಕಿ 50 ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿವೆ. ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು ಒದಗಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದು ನನ್ನ ಶಾಸಕರ ಅನುದಾನದಲ್ಲಿ ನಗರ ವ್ಯಾಪ್ತಿಯಲ್ಲಿ 10 ಹೊಸ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.
ಅಂಗನವಾಡಿ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಗೊಂಡರೆ ಪ್ರತಿ ತಿಂಗಳು ಸರ್ಕಾರ ಅಥವಾ ಇಲಾಖೆ ಪಾವತಿಸಬೇಕಾದ ಬಾಡಿಗೆ ಹಣ ಉಳಿತಾಯವಾಗುತ್ತದೆ. ಶಾಶ್ವತವಾದ ಸರ್ಕಾರಿ ಆಸ್ತಿ ಸೃಷ್ಟಿಯಾಗುತ್ತದೆ. ಗರ್ಭಿಣಿಯರು, ಬಾಣಂತಿಯರು ಮತ್ತು ಕಿಶೋರಿ ಹೆಣ್ಣುಮಕ್ಕಳಿಗೆ ಆರೋಗ್ಯ ತಪಾಸಣೆ, ಲಸಿಕಾ ಕಾರ್ಯಕ್ರಮ ನಡೆಸಲು ಅನುಕೂಲವಾಗಲಿದೆ ಎಂದು ಹೇಳಿದರು.
ಸಭೆಯಲ್ಲಿ ತಹಸೀಲ್ದಾರ್ ತೇಜಸ್ವಿನಿ, ನಗರಸಭೆ ಆಯುಕ್ತ ಡಾ.ಜಯಣ್ಣ, ಸಿಡಿಪಿಓ ಕಾಂತರಾಜು , ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ತಾಲೂಕು ಕಚೇರಿಗೆ ಶಾಸಕರ ದಿಢೀರ್ ಭೇಟಿ:
ಯಾವುದೇ ಮುನ್ಸೂಚನೆ ನೀಡದೆ ಕಚೇರಿಗೆ ದಿಢೀರನೆ ಭೇಟಿ ನೀಡಿದ ಶಾಸಕರನ್ನು ಕಂಡು ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ಷಣಕಾಲ ತಬ್ಬಿಬ್ಬಾದರು.
ಜನಸಾಮಾನ್ಯರನ್ನು ಸಣ್ಣ ಪುಟ್ಟ ಕೆಲಸಗಳಿಗಾಗಿ ವಿನಾಕಾರಣ ಅಲೆದಾಡಿಸಬಾರದು ಎಂದು ಅಧಿಕಾರಿಗಳಿಗೆ ಇಕ್ಬಾಲ್ ಹುಸೇನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಾಮನಗರ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಶಾಸಕ ಇಕ್ಬಾಲ್ ಹುಸೇನ್ ರವರು ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯ ಸುಧಾರಣೆ ಸಭೆ ನಡೆಸಿದರು.